ಮಂಡ್ಯದಿಂದ ಲೋಕಸಭೆಗೆ ಎಸ್ಎಂ ಕೃಷ್ಣ ಸ್ಪರ್ಧೆ?
ಲೋಕಸಭೆ ಉಪ ಚುನಾಣೆಯಲ್ಲಿ ರಮ್ಯಾ ಜಯಗಳಿಸಿರಬಹುದು. ಆದರೆ, ಲೋಕಸಭೆ ಚುನಾವಣೆಯೇ ಬೇರೆ ಆದ್ದರಿಂದ ರಮ್ಯಾ ಬದಲು ಮಾಜಿ ಸಿಎಂ ಮತ್ತು ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಮಂಡ್ಯ ಕಾಂಗ್ರೆಸ್ ನಾಯಕರು ಹೈ ಕಮಾಂಡ್ ನಾಯಕರಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಕೆಲವು ಪ್ರಭಾವಿ ನಾಯಕರು ಮಂಡ್ಯದಿಂದ ಎಸ್.ಎಂ.ಕೃಷ್ಣ ಅವರನ್ನು ಕಣಕ್ಕಿಳಿಸಬೇಕು ಎಂದು ವರಿಷ್ಠರಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಮಂಡ್ಯದಲ್ಲಿ ಎಸ್.ಎಂ.ಕೃಷ್ಣ ಸಾಕಷ್ಟು ಪ್ರಭಾವ ಹೊಂದಿದ್ದಾರೆ, ಜಿಲ್ಲೆಯ ವರ್ಚಸ್ಸನ್ನು ದೇಶ-ವಿದೇಶಗಳಲ್ಲಿ ಹೆಚ್ಚಿಸುವ ಶಕ್ತಿ ಹೊಂದಿದ್ದಾರೆ. ಆದ್ದರಿಂದ ಅವರಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಲಾಗಿದೆ. (ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ದ)
ಉಪ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಸೋಲು ಅನುಭವಿಸಿದ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಗೆಲುವು ಸಾಧಿಸಲು ಸಾಕಷ್ಟು ಶ್ರಮ ಮತ್ತು ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ. ಆದ್ದರಿಂದ ಜೆಡಿಎಸ್ ಪಕ್ಷಕ್ಕೆ ಪ್ರಬಲ ಪೈಪೋಟಿ ನೀಡಲು ಎಸ್.ಎಂ.ಕೃಷ್ಣ ಅವರನ್ನು ಕಣಕ್ಕೆ ಇಳಿಸುವುದು ಸೂಕ್ತ ಎಂದು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ. (ಮಂಡ್ಯ, ಬೆಂಗಳೂರು ಗ್ರಾಮಾಂತರ ನಮ್ಮದು)
ಈ ಬೆಳವಣಿಗೆ ಕುರಿತು ಆಪ್ತರೊಂದಿಗೆ ಮಾತುಕತೆ ನಡೆಸಿರುವ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆತ್ಮಾನಂದ ಅವರು, ಜಿಲ್ಲಾ ಕಾಂಗ್ರೆಸ್ ಈ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ, ಜಿಲ್ಲೆಯ ಕಾರ್ಯಕರ್ತರಲ್ಲಿ ಇಂತಹ ಅಭಿಪ್ರಾಯವಿರುವುದು ನಿಜ ಎಂದು ಹೇಳಿದ್ದಾರೆ. ಈ ಮೂಲಕ ರಮ್ಯಾಗೆ ಟಿಕೆಟ್ ಕೈತಪ್ಪುವ ಸುಳಿವು ನೀಡಿದ್ದಾರೆ.
ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕ್ಷೇತ್ರದಲ್ಲಿ ಸಂಚರಿಸುತ್ತಿದ್ದರೂ ರಮ್ಯಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಕೆಲವು ದಿನಗಳ ಹಿಂದೆ ತಮ್ಮದೇ ಪಕ್ಷದ ಕಾರ್ಯಕರ್ತರ ಜೊತೆ ಬಹಿರಂಗವಾಗಿಯೇ ರಮ್ಯಾ ವಿರೋಧ ಕಟ್ಟಿಕೊಂಡಿದ್ದರು. ಕಾರ್ಯಕರ್ತರ ವಿರೋಧದ ನಡುವೆಯೇ ಬಿಜೆಪಿ ಮುಖಂಡರ ಮನೆಗೆ ಭೇಟಿ ನೀಡಿದ್ದರು. ಆದ್ದರಿಂದ ಕಾರ್ಯಕರ್ತರು ಅವರ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಈಗಾಗಲೇ ಎಸ್.ಎಂ.ಕೃಷ್ಣ ಅವರಿಗೆ ಒಂದು ಕ್ಷೇತ್ರದಲ್ಲಿ ಟಿಕೆಟ್ ನೀಡಬೇಕು ಎಂಬ ಒತ್ತಡಗಳು ರಾಜ್ಯ ಕಾಂಗ್ರೆಸ್ ವಲಯದಲ್ಲಿವೆ. ಬೆಂಗಳೂರಿನಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳಿವೆ. ಆದರೆ, ಸದ್ಯದ ಬೆಳವಣಿಗೆಯಂತೆ ಸ್ವ ಕೇತ್ರ ಮಂಡ್ಯದಿಂದಲೇ ಕೃಷ್ಣ ಸ್ಪರ್ಧಿಸಬೇಕೆಂದು ಜಿಲ್ಲಾ ಮುಖಂಡರು ಒತ್ತಾಯಿಸುತ್ತಿದ್ದಾರೆ. ರಮ್ಯಾಗೆ ಟಿಕೆಟ್ ಕೈ ತಪ್ಪುತ್ತಾ?