ಜಿಲ್ಲೆಗಳ ಮಿನಿ ಏರ್ ಪೋರ್ಟ್ ಕನಸು ದೂರ!

ಮಂಗಳವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮೂಲಭೂತ ಸೌಕರ್ಯ ಸಚಿವ ಸಂತೋಷ್ ಲಾಡ್, ಗುಲ್ಬರ್ಗ, ಬಳ್ಳಾರಿ, ಶಿವಮೊಗ್ಗ, ಬಿಜಾಪುರ ಹಾಗೂ ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆಗೆ ಭೂಸ್ವಾಧೀನ ಪಡಿಸಿಕೊಳ್ಳಲು ಭಾರೀ ವಿರೋಧ ವ್ಯಕ್ತವಾಗುತ್ತಿದೆ ಎಂದು ಹೇಳಿದ್ದಾರೆ.
ಭೂಸ್ವಾಧೀನ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಸ್ಥಗಿತಗೊಂಡಿದೆ. ನಿಲ್ದಾಣದ ಸುತ್ತಮುತ್ತಲಿನ ಜನರ ವ್ಯಾಪಕ ವಿರೋಧದಿಂದಾಗಿ ಸರ್ಕಾರ ಅಸಹಾಯಕವಾಗಿದೆ ಎಂದು ಲಾಡ್ ಹೇಳಿದರು.
ಐದು ನಗರಗಳಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದು ಲಾಭದಾಯಕವಲ್ಲ ಎಂದು ತಜ್ಞರು ವರದಿ ನೀಡಿದ್ದಾರೆ ಎಂದು ಹೇಳುವ ಮೂಲಕ ವಿಮಾನ ನಿಲ್ದಾಣ ಯೋಜನೆಯನ್ನು ಸ್ಥಗಿತಗೊಳಿಸುವ ಸುಳಿವನ್ನು ಸಚಿವರು ನೀಡಿದರು.
ವಿಮಾನ ನಿಲ್ದಾಣಗಳಿಗೆ ಅಗತ್ಯವಾದ ಭೂಮಿ ದೊರಕಿ, ಖಾಸಗಿ ಕಂಪನಿಗಳು ಸಹಭಾಗಿತ್ವದಲ್ಲಿ ಕಾಮಗಾರಿ ನಡೆಸಲು ಕೈ ಜೋಡಿಸಿದರೆ, ಸರ್ಕಾರ ಯೋಜನೆಯನ್ನು ಮುಂದುವರೆಸುವ ಕುರಿತು ಆಲೋಚಿಸಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಅಗತ್ಯವಿಲ್ಲ ಎಂದು ವಿಮಾನ ನಿಲ್ದಾಣ ಪ್ರಾಧಿಕಾರವೇ ಸರ್ಕಾರಕ್ಕೆ ವರದಿ ನೀಡಿದೆ. ಅಲ್ಲದೇ ಇಲ್ಲಿಯ ಭೂ ಸ್ವಾಧೀನ ಪ್ರಕ್ರಿಯೆ ಸಹ ಮುಗಿದಿಲ್ಲ. ಆದ್ದರಿಂದ ಯೋಜನೆಯನ್ನು ಸ್ಥಗಿತಗೊಳಿಸುವ ಸುಳಿವನ್ನು ನೀಡಿದೆ.
ಬಿಜೆಪಿ ಸರ್ಕಾರ ಎರಡನೇ ದರ್ಜೆ ನಗರಗಳಿಗೂ ವಿಮಾನ ಸೌಕರ್ಯ ಕಲ್ಪಿಸಲು ವಿಮಾನ ನಿಲ್ದಾಣ ಯೋಜನೆಯನ್ನು ಪ್ರಾರಂಭಿಸಿತ್ತು. ಸದ್ಯ ಕಾಂಗ್ರೆಸ್ ಸರ್ಕಾರ ವಿವಿಧ ನೆಪಗಳನ್ನು ಹೇಳುತ್ತಾ ಯೋಜನೆಯನ್ನು ಸ್ಥಗಿತಗೊಳಿಸಲು ಮುಂದಾಗಿದೆ.












Click it and Unblock the Notifications