ಸ್ಮಾರ್ಟ್ ಸಿಟಿ ಯೋಜನೆ : ಅನುದಾನ ಬಳಕೆಯಲ್ಲಿ ಕರ್ನಾಟಕ ಹಿಂದೆ
ಬೆಂಗಳೂರು, ಡಿಸೆಂಬರ್ 26 : ಸ್ಮಾರ್ಟ್ ಸಿಟಿ ಯೋಜನೆಗೆ ನೀಡಿದ ಅನುದಾನ ಬಳಕೆಯಲ್ಲಿ ಕರ್ನಾಟಕ ಹಿಂದುಳಿದಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆಯಡಿ ರಾಜ್ಯದ 7 ನಗರಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ.
ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆಯಡಿ ಕರ್ನಾಟಕಕ್ಕೆ 886 ಕೋಟಿ ರೂ. ಅನುದಾನ ನೀಡಿದೆ. ಆದರೆ, ರಾಜ್ಯ ಸರ್ಕಾರ ಕೇವಲ 86.02 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಈ ಪೈಕಿ ಸುಮಾರು 34.47 ಕೋಟಿ ರೂ.ಗಳನ್ನು ಕಚೇರಿ ಮತ್ತು ಆಡಳಿತಾತ್ಮಕ ವೆಚ್ಚಗಳಿಗೆ ಬಳಸಲಾಗಿದೆ.
ಸ್ಮಾರ್ಟ್ ಸಿಟಿ ಯೋಜನೆಗೆ ವೆಚ್ಚ ಮಾಡಿದ ಅನುದಾನದ ಬಗ್ಗೆ ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯಕ್ಕೆ ವರದಿ ಸಲ್ಲಿಸಿದೆ. ಈ ವರದಿಯಲ್ಲಿ ಅಂಕಿ-ಸಂಖ್ಯೆಗಳನ್ನು ನೀಡಿದೆ.

ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ಮಂಗಳೂರು, ತುಮಕೂರು ಹಾಗೂ ಬೆಂಗಳೂರು ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಕರ್ನಾಟಕದಲ್ಲಿ ಆಯ್ಕೆ ಮಾಡಲಾಗಿದೆ.
ಬೆಳಗಾವಿ ಮತ್ತು ದಾವಣಗೆರೆ ನಗರಗಳಿಗೆ ಕ್ರಮವಾಗಿ 14.41 ಕೋಟಿ ಮತ್ತು ಬೆಂಗಳೂರು ನಗರದಲ್ಲಿ ವಿವಿಧ ಕಾಮಗಾರಿಗಳಿಗೆ 3.79 ಕೋಟಿಗಳನ್ನು ವೆಚ್ಚ ಮಾಡಲಾಗಿದೆ.
ಸ್ಮಾರ್ಟ್ ಸಿಟಿ ಯೋಜನೆ ಜಾರಿ ವಿಚಾರದಲ್ಲಿ ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಹಿಮಾಚಲ ಪ್ರದೇಶ ಮತ್ತು ಪಂಜಾಬ್ ರಾಜ್ಯಗಳು ಹಿಂದುಳಿದಿವೆ.
ಸೂರತ್, ನಾಗಪುರ, ಇಂದೋರ್, ವಾರಣಾಸಿ, ಉದಯಪುರ ದಂತಹ ಸಣ್ಣ ನಗರಗಳು ಬಹಳ ಮುಂದಿವೆ. ಕಾಮಗಾರಿಗಳನ್ನು ಗುರುತಿಸಿ, ಟೆಂಡರ್ ಅಂತಿಮಗೊಳಿಸುವಲ್ಲಿ ವಿಳಂಬ ಆಗಿರುವುದೇ ಈ ರಾಜ್ಯಗಳು ಹಿಂದುಳಿಯಲು ಕಾರಣ ಎಂದು ವಿಶ್ಲೇಷಿಸಲಾಗಿದೆ.











Click it and Unblock the Notifications