ಬಿಜೆಪಿ ತೆಕ್ಕೆಗೆ ಇನ್ನಷ್ಟು ದೋಸ್ತಿ ಶಾಸಕರು?
Recommended Video
ಬೆಂಗಳೂರು, ಜುಲೈ 22: ಬಿಜೆಪಿ ತೆಕ್ಕೆಗೆ ಇನ್ನಷ್ಟು ಶಾಸಕರು ಬರುವ ಸಾಧ್ಯತೆ ಇದೆ. ಈಗಾಗಲೇ 15 ಕೈ ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರದ ಮತ್ತಷ್ಟು ಶಾಸಕರು ಬಿಜೆಪಿ ತೆಕ್ಕೆಗೆ ಬರಲಿದ್ದಾರೆ ಎನ್ನಲಾಗುತ್ತಿದೆ.
ಈಗಾಗಲೇ 15 ಶಾಸಕರು ರಾಜೀನಾಮೆ ನೀಡಿರುವುದು ಮೈತ್ರಿ ಸರ್ಕಾರಕ್ಕೆ ಹೊಡೆತ ಬಿದ್ದಿದೆ ಅವರನ್ನು ಮತ್ತೆ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹರಸಾಹಸ ಪಡುತ್ತಿದ್ದಾರೆ.
ರಾಜೀನಾಮೆ ನೀಡಿದ ಶಾಸಕರ ಪೈಕಿ ಹಳೆ ಮೈಸೂರು ಭಾಗದ ಶಾಸಕರು ಕೂಡ ಇದ್ದಾರೆ. ಈ ಭಾಗದಲ್ಲಿ ಬಿಜೆಪಿಗೆ ಗಟ್ಟಿ ನೆಲೆ ಇಲ್ಲ. ಉಪಚುನಾವಣೆ ನಡೆದರೆ ಇಲ್ಲಿ ಜಯಗಳಿಸುವುದು ಅಷ್ಟು ಸುಲಭವಲ್ಲ. ಹೀಗಾಗಿ ಉತ್ತರ ಕರ್ನಾಟಕ ಭಾಗದ 8 ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಒಂದು ವೇಳೆ ರಾಜೀನಾಮೆ ನೀಡಿರುವ ಶಾಸಕರು ಸೋತರೆ ಮತ್ತೆ ಸರ್ಕಾರ ಅಲ್ಪ ಮತಕ್ಕೆ ಕುಸಿಯಬಹುದು. ಈ ರೀತಿ ಆಗದಂತೆ ತಡೆಯಲು ಬಿಜೆಪಿ ಈಗ ಉತ್ತರ ಕರ್ನಾಟಕ ಭಾಗದ ಶಾಸಕರನ್ನು ಸೆಳೆಯಲು ಪ್ರಯತ್ನ ನಡೆಸುತ್ತಿದೆ.
ಕಾಂಗ್ರೆಸ್ಸಿನ ಶಾಸಕರಾದ ಯಶವಂತಪುರದ ಎಸ್.ಟಿ ಸೋಮಶೇಖರ್, ಗೋಕಾಕ್ ಕ್ಷೇತ್ರದ ರಮೇಶ್ ಜಾರಕಿಹೊಳಿ, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್, ಅಥಣಿಯ ಮಹೇಶ್ ಕುಮಟಳ್ಳಿ, ಕೆ.ಆರ್ ಪುರಂನ ಭೈರತಿ ಬಸವರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ರಾಜರಾಜೇಶ್ವರಿ ನಗರದ ಮುನಿರತ್ನ ಹಾಗೂ ಶಿವಾಜಿನಗರದ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಕಾಗವಾಡದ ಶ್ರೀಮಂತ ಪಾಟೀಲ್, ವಿಶ್ವಾಸಮತಯಾಚನೆ ಬಾರದೇ ಕೈ ಕೊಟ್ಟಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಬಿಜೆಪಿಯ ಹಿಡಿತ ಹೆಚ್ಚಿದೆ. ಅದರಲ್ಲೂ ಹಲವಾರು ಕ್ಷೇತ್ರಗಳಲ್ಲಿ ಲಿಂಗಾಯತರೇ ನಿರ್ಣಾಯಕರಾಗಿದ್ದಾರೆ. ಹೀಗಾಗಿ 8 ಮಂದಿ ಲಿಂಗಾಯತ ಶಾಸಕರನ್ನು ಸೆಳೆಯಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದೆ ಎನ್ನುವ ವಿಚಾರ ಮೂಲಗಳಿಂದ ಲಭ್ಯವಾಗಿದೆ.
ಜೆಡಿಎಸ್ಸಿನ ಹುಣಸೂರು ಶಾಸಕ ಎಚ್ ವಿಶ್ವನಾಥ್, ಮಾಹಾಲಕ್ಷ್ಮಿ ಲೇ ಔಟ್ ಶಾಸಕ ಗೋಪಾಲಯ್ಯ ಹಾಗೂ ಕೆ. ಆರ್ ಪೇಟೆಯ ನಾರಾಯಣ ಗೌಡ ರಾಜೀನಾಮೆ ನೀಡಿದ್ದಾರೆ.