ಮಾಜಿ ಪ್ರಧಾನಿ ದೇವೇಗೌಡರಿಗೆ ಬೆಂಬಲ; ಸೋನಿಯಾ ಗಾಂಧಿ ತೀರ್ಮಾನ: ಡಿಕೆಶಿ
ಬೆಂಗಳೂರು, ಜೂ. 05: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ದಿನಾಂಕ ಘೋಷಣೆ ಆಗಿದೆ. ಜೂನ್ 19ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ತನ್ನ ಅಭ್ಯರ್ಥಿಯನ್ನು ಘೊಷಣೆ ಮಾಡಿದೆ. ನಿರೀಕ್ಷೆಯಂತೆ ಕಾಂಗ್ರೆಸ್ ಥಿಂಕ್ಟ್ಯಾಂಕ್ ಸದಸ್ಯ, ಮಾಜಿ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮಣೆ ಹಾಕಿದೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮಲ್ಲಿಕಾರ್ಜುನ್ ಖರ್ಗೆ ಅವರು ಅನಿವಾರ್ಯ ಕೂಡ.
ಜೊತೆಗೆ ಮಲ್ಲಿಕಾರ್ಜುನ್ ಖರ್ಗೆ ಅವರ ಗೆಲವಿನ ಬಳಿಕವೂ ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚುವರಿ ಮತಗಳು ಉಳಿಯಲಿವೆ. ಹೀಗಾಗಿ ಕಾಂಗ್ರೆಸ್ ಜೊತೆಗೆ ಜೆಡಿಎಸ್ ಮೈತ್ರಿ ಮಾತುಗಳು ನಡೆದಿವೆ ಎನ್ನಲಾಗಿದೆ. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ಬೆಂಬಲ ಕೊಡುವ ಬಗ್ಗೆ ಚರ್ಚೆಗಳು ನಡೆದಿವೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಡ್ಡಿ ಮುರಿದಂತೆ ಮಾತೊಂದನ್ನು ಹೇಳಿದ್ದಾರೆ.
ರಾಜ್ಯಸಭೆಯ 24 ಸ್ಥಾನಗಳಿಗೆ ಚುನಾವಣೆ ದಿನಾಂಕ ಪ್ರಕಟ
ಹೈಕಮಾಂಡ್ ತೀರ್ಮಾನ
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿರುವುದು ಹೈಕಮಾಂಡ್ ನಿರ್ಧಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇದು ರಾಷ್ಟ್ರೀಯ ನಾಯಕರು ರಾಷ್ಟ್ರಮಟ್ಟದಲ್ಲಿ ತೆಗೆದುಕೊಂಡಿರುವ ತೀರ್ಮಾನ. ಇವತ್ತಿನವರೆಗೂ ಈ ಬಗ್ಗೆ ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ. ರಾಷ್ಟ್ರೀಯ ನಾಯಕರು ನಮಗೆ ನೀಡುವ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದಿದ್ದಾರೆ.
ಜೊತೆಗೆ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಖರ್ಗೆ ಅವರ ಹೆಸರು ಘೋಷಣೆಗೆ ಸಹಮತ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮಲ್ಲಿಕಾರ್ಜುನ್ ಖರ್ಗೆ ಅವರ ಗೆಲವಿನ ಬಳಿಕ ಉಳಿಯುವ ಶಾಸಕರ ಮತಗಳ ಬಗ್ಗೆ ಡಿಕೆಶಿ ಖಡಕ್ ಮಾತನ್ನಾಡಿದ್ದಾರೆ.
ಮೆಂಟಲ್ಗಳು
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಪ್ರವೇಶಿಸಲು 45 ಶಾಸಕರ ಮತಗಳ ಅಗತ್ಯವಿದೆ. ಹೀಗಾಗಿ ಕಾಂಗ್ರೆಸ್ ಬಳಿ ಹೆಚ್ಚುವರಿಯಾಗಿ 23 ಶಾಸಕರ ಮತಗಳು ಉಳಿಯಲಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಗರಂ ಆಗಿ ಮಾತನಾಡಿದ್ದಾರೆ.
ಕೆಲವು ಮೆಂಟಲ್ಗಳು ತಮಗೆ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯಸಭಾ ಚುನಾವಣೆಯನ್ನು ಕಡಲೆಪುರಿ ವ್ಯಾಪಾರ ಎಂದು ಭಾವಿಸಿ 20, 30 ಎಂದು ನಂಬರ್ ಹೇಳುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಶಾಸಕರಿಗೆ ಅಗೌರವ ನೀಡುವುದು ಬೇಡ. ಯಾವ ಮಂತ್ರಿ ಯಾವ ಹೇಳಿಕೆ ನೀಡುತ್ತಿದ್ದಾರೆ. ಯಾವ ಹೊಟೇಲ್ ನಲ್ಲಿ ಯಾರು ಸಭೆ ನಡೆಸುತ್ತಿದ್ದಾರೆ, ನಿನ್ನೆ ರಾತ್ರಿ ಯಾರು, ಎಲ್ಲಿ, ಏನು ಸಭೆ ನಡೆಸಿದ್ದಾರೆ ಎಂಬುದನ್ನು ಗಮನಿಸುತ್ತಿದ್ದೇವೆ. ನಾವು ಇಲ್ಲಿ ಸುಮ್ಮನೆ ಕೂತಿಲ್ಲ. ನಮಗೆ ಬೇರೆಯವರ ಮನೆ ವಿಚಾರ ಬೇಡ(ಬಿಜೆಪಿ). ನಾವುಂಟು ನಮ್ಮ ಮನೆ ಉಂಟು, ನಮ್ಮ ಶಾಸಕರುಂಟು ಎಂದಿದ್ದಾರೆ. ಇನ್ನು ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಬೆಂಬಲ ಕೊಡುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
Oneindia explainer; ರಾಜ್ಯಸಭೆ ಚುನಾವಣೆ ಹೇಗೆ ನಡೆಯುತ್ತದೆ?
ಹೈಕಮಾಂಡ್ ತೀರ್ಮಾನ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಹಿರಿಯರಿದ್ದಾರೆ. ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ನಮ್ಮ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರು ನಮಗೆ ನೀಡುವ ಆದೇಶವನ್ನು ನಾವು ಪಾಲಿಸುತ್ತೇವೆ. ಇದು ಪಕ್ಷದ ಅಧ್ಯಕ್ಷನಾಗಿ ನನ್ನ ಅಭಿಪ್ರಾಯ. ಈ ಬಗ್ಗೆ ನಾನು ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ. ಹೈಕಮಾಂಡ್ ಸೂಚನೆಯಂತೆ ನಡೆಯುವುದು ನಮ್ಮ ಕೆಲಸ. ಮಾಜಿ ಪ್ರಧಾನಿ ದೇವೇಗೌಡರಿಗೆ ಬೆಂಬಲ ಕೊಡುವುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದಿದ್ದಾರೆ.
ಹೀಗಾಗಿ ಮಲ್ಲಿಕಾರ್ಜುನ್ ಖರ್ಗೆ ಅವರು ರಾಜ್ಯಸಭೆಗೆ ಚುನಾಯಿತರಾಗಲು ಬೇಕಾದಷ್ಟು ಶಾಸಕರ ಮತಗಳನ್ನು ಬಿಟ್ಟು ಹೆಚ್ಚುವರಿ ಮತಗಳ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸೂಚ್ಯವಾಗಿ ಡಿಕೆಶಿ ತಿಳಿಸಿದ್ದಾರೆ.
ಅಗತ್ಯ ನಮಗಿಲ್ಲ
ಕಾಂಗ್ರೆಸ್ ಪಕ್ಷದಿಂದ ಬೇರೆ ಪಕ್ಷಕ್ಕೆ ಹೋಗಿರುವರನ್ನು ಮರಳಿ ಕಾಂಗ್ರೆಸ್ಗೆ ಕರೆತರುವ ಬಗ್ಗೆ ಸಮಿತಿ ರಚನೆ ಮಾಡಿರುವ ಬಗ್ಗೆ ಡಿಕೆಶಿ ಮಾತನಾಡಿದ್ದಾರೆ. ಕೇವಲ ಅಧಿಕಾರದ ಆಸೆಯಿಂದ ಪಕ್ಷಕ್ಕೆ ಮರಳುವವರ ಅಗತ್ಯ ನಮಗಿಲ್ಲ. ಪಕ್ಷದ ಸಿದ್ಧಾಂತ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟು, ತಾಲೂಕು ಮಟ್ಟದಲ್ಲಿ ಕಾರ್ಯಕರ್ತರ ಜತೆ ಬೆರೆತು ಕೆಲಸ ಮಾಡಲು ಸಿದ್ಧವಿದ್ದರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು' ಎಂದು ಸ್ಪಷ್ಟಪಡಿಸಿದ್ದಾರೆ.
ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡ ನಂತರ ಪಕ್ಷಕ್ಕೆ ಯಾವುದೇ ತೊಂದರೆಯಾಗಬಾರದು. ಪಕ್ಷ ಹಾಗೂ ಅದರ ಮೇಲಿನ ನಿಷ್ಠೆ ಪ್ರಮುಖವಾಗಿದೆ. ಕೇವಲ ಅಧಿಕಾರದ ಆಸೆಗೆ ಪಕ್ಷಕ್ಕೆ ಸೇರಿಸಿಕೊಳ್ಳಲು ಸಾಧ್ಯವಿಲ್ಲ. ಇದು ಸುದೀರ್ಘ ಪರಿಣಾಮ ಬೀರುವಂತಹ ವಿಚಾರ. ಹೀಗಾಗಿ ಪಕ್ಷದ ಸಿದ್ಧಾಂತ ಒಪ್ಪಿ, ನಮ್ಮ ಹೈಕಮಾಂಡ್ ನಾಯಕತ್ವವನ್ನು ಒಪ್ಪಿ ಪಕ್ಷಕ್ಕೆ ಬರಬೇಕಿದೆ. ಈ ಸಮಿತಿ ಪರಾಮರ್ಶೆ ನಡೆಸಿದ ನೀಡುವ ಹೆಸರುಗಳನ್ನು ನಂತರ ಇತರೆ ನಾಯಕರ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.