ಮಾಜಿ MLC ರಮೇಶಬಾಬು JDSಗೆ ರಾಜೀನಾಮೆ ಕೊಟ್ಟಿದ್ಯಾಕೆ?
ಬೆಂಗಳೂರು. ಮಾ. 07: ಜಾತ್ಯತೀತ ಜನತಾ ದಳದಲ್ಲಿ ನಿಷ್ಠಾವಂತರಿಗೆ ಅವಕಾಶವಿಲ್ಲ ಎಂಬ ಆರೋಪದೊಂದಿಗೆ ಮತ್ತೊಂದು ವಿಕೆಟ್ ಪತನವಾಗಿದ್ದು, ಜೆಡಿಎಸ್ ಪ್ರಾಥಮಿಕ ಸದಸ್ಯತ್ವ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ವಕ್ತಾರ ಸ್ಥಾನಗಳಿಗೆ ಪರಿಷತ್ ಮಾಜಿ ಸದಸ್ಯ ರಮೇಶಬಾಬು ರಾಜೀನಾಮೆ ಕೊಟ್ಟಿದ್ದಾರೆ. ಇದು ನಿರೀಕ್ಷಿತ ಬೆಳವಣಿಗೆಯೆ ಆದರೂ ಪರಿಷತ್ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷಕ್ಕೆ ಬಿದ್ದಿರುವ ದೊಡ್ಡ ಹೊಡೆತ ಎಂದೆ ಹೇಳಲಾಗುತ್ತಿದೆ.
ಜೆಡಿಎಸ್ ವರಿಷ್ಠ, ಜಾತ್ಯತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರಿಗೆ ರಮೇಶಬಾಬು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದೊಂದಿಗೆ ಭಾವನಾತ್ಮ ಸಂಬಂಧವಿದ್ದರೂ ಅನಿವಾರ್ಯ ಕಾರಣಗಳಿಂದ ರಾಜೀನಾಮೆ ಕೊಡುವುದಾಗಿ ತಿಳಿಸಿದ್ದರೂ, ಆಗ್ನೇಯ ಪದವೀಧರ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ರಮೇಶಬಾಬು ರಾಜೀನಾಮೆ ಕೊಟ್ಟಿದ್ದಾರೆ ಎಂಬುದು ಬಹಿರಂಗ ಸತ್ಯ.
"ಜೆಡಿಎಸ್ ನಲ್ಲಿ ಪ್ರಾಮಾಣಿಕರಿಗೆ ಅವಕಾಶವಿಲ್ಲ": ರಮೇಶ್ ಬಾಬು
ಇದೇ ಜೂನ್ ತಿಂಗಳಿನಲ್ಲಿ ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಮಾಜಿ ಎಂಎಲ್ಸಿ ರಮೇಶಬಾಬು ಜೆಡಿಎಸ್ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟಿಕೆಟ್ ನಿರಾಕರಿಸಿದ್ದರು.
ಆಗ್ನೇಯ ಪದವೀಧರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ರಮೇಶಬಾಬು
ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶಬಾಬು ಅವರು ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹಾಲಿ ಸದಸ್ಯ ಚೌಟರೆಡ್ಡಿ ತೂಪಲ್ಲಿ ಅವರಿಗೆ ಆಗ್ನೇಯ ಪದವೀಧರ ಕ್ಷೇತ್ರದ ಕೊಡಲು ಮಾಜಿ ಸಿಎಂ ಕುಮಾರಸ್ವಾಮಿ ಅವರು ತೀರ್ಮಾನ ಮಾಡಿದ್ದರು. ಹಾಲಿ ಸದಸ್ಯರನ್ನು ಬಿಟ್ಟು ಬೇರೆಯವರಿಗೆ ಟಿಕೆಟ್ ಕೊಡುವುದಿಲ್ಲ ಎಂಬ ಸ್ಪಷ್ಟ ಸೂಚನೆ ಸಿಕ್ಕಿತ್ತು. ಹೀಗಾಗಿಯೆ ರಮೇಶಬಾಬು ಪಕ್ಷ ತೊರೆದಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಚೌಟರೆಡ್ಡಿ ತೂಪಲ್ಲಿ ಅವರಿಗೆ ಆಗ್ನೇಯ ಪದವೀಧರರ ಕ್ಷೇತ್ರದ ಟಿಕೆಟ್ ಸಿಗಲಿದೆ. ಈ ಅವರ ಎದುರು ಕಾಂಗ್ರೆಸ್ ಅಥವಾ ಬಿಜೆಪಿಯಿಂದ ರಮೇಶಬಾಬು ಅವರು ಕಣಕ್ಕಿಳಿಯುವ ಲೆಕ್ಕಾಚಾರದಲ್ಲಿದ್ದಾರೆ.
ಬಿಜೆಪಿ ಅಥವಾ ಕಾಂಗ್ರೆಸ್ನಿಂದ ಕಣಕ್ಕಿಳಿಯುವ ನಿರ್ಧಾರ
ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟಿರುವ ರಮೇಶಬಾಬು ಅವರು ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಬಾಗಿಲು ತಟ್ಟಿದ್ದಾರೆ ಎಂಬ ಮಾಹಿತಿಯಿದೆ. ಬಿಜೆಪಿಯಿಂದ ನಿರೀಕ್ಷಿತ ಪ್ರತಿಕ್ರಿಯೆ ರಮೇಶಬಾಬು ಅವರಿಗೆ ಬಂದಿಲ್ಲ ಹೀಗಾಗಿ ಕಾಂಗ್ರೆಸ್ ಪಕ್ಷದ ವರಿಷ್ಠರ ಸಂಪರ್ಕಕ್ಕೆ ರಮೇಶಬಾಬು ಪ್ರತ್ನಿಸಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷರ ನೇಮಕವೇ ಕಗ್ಗಂಟಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ತಕ್ಷಣಕ್ಕೆ ಟಿಕೆಟ್ ಕೊಡುವ ಯಾವುದೇ ಭರವಸೆ ರಮೇಶಬಾಬು ಅವರಿಗೆ ಸಿಕ್ಕಿಲ್ಲ. ಹೀಗಾಗಿ ಪಕ್ಷೇತರ ಅಭ್ಯರ್ಥಿ ಆಗಿಯಾದರೂ ಚುನಾವಣೆ ಕಣಕ್ಕಿಳಿಯಲು ಅವರು ಪ್ರಯತ್ನ ನಡೆಸಿದ್ದಾರೆ.
ಆಗ್ನೇಯ ಪದವೀಧರ ಕ್ಷೇತ್ರದಿಂದ ರಮೇಶಬಾಬು ಕಣಕ್ಕೆ
ಈಗಾಗಲೇ ಜೆಡಿಎಸ್ ಪಕ್ಷದಿಂದ ಹೊರಗೆ ಬಂದಿರುವ ಜೆಡಿಎಸ್ ಪುಟ್ಟಣ್ಣ ಅವರಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಟಿಕೆಟ್ ಈಗಾಗಲೇ ನಿಗದಿಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ್ನೊಳಗೊಂದ ಆಗ್ನೇಯ ಪದವೀಧರರ ಕ್ಷೇತ್ರದಿಂದ ರಮೇಶಬಾಬು ಅವರು ಕಣಕ್ಕಿಳಿಯಲಿದ್ದಾರೆ. ಜೂನ್ ತಿಂಗಳಿನಲ್ಲಿ ಚುನಾವಣೆ ನಡೆಯಲಿದ್ದು, ಅಷ್ಟರೊಳಗೆ ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆಯುವುದು ರಮೇಶಬಾಬು ಅವರ ಉದ್ದೇಶ. ಹೊರಗಿನಿಂಧ ಬಂದ ಎಲ್ಲರಿಗೂ ಟಿಕೆಟ್ ಕೊಡಲು ಬಿಜೆಪಿ ಹೈಕಮಾಂಡ್ ಒಪ್ಪಿಲ್ಲ. ಹೀಗಾಗಿ ರಮೇಶಬಾಬು ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗುವುದು ಅನುಮಾನ.
ಬಸವರಾಜ್ ಹೊರಟ್ಟಿ, ಮಧು ಬಂಗಾರಪ್ಪ ಕೂಡ ಅಸಮಾಧಾನ
ಇನ್ನು ಅತಿಹೆಚ್ಚು ಬಾರಿ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ಗೆ ಆಯ್ಕೆಯಾಗಿರುವ, ಜೆಡಿಎಸ್ ಹಿರಿಯ ಮುಖಂಡ ಬಸವರಾಜ್ ಹೊರಟ್ಟಿ ಅವರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಸವರಾಜ್ ಹೊರಟ್ಟಿ ಅವರು ಬಿಜೆಪಿ ಸೇರುತ್ತಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿ ಬಂದಿವೆ. ಜೊತೆಗೆ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್ ತೆರದು ಕಾಂಗ್ರೆಸ್ ಸೇರುತ್ತಾರೆ ಎಂಬುದು ಖಚಿತವಾಗಿದೆ. ಇಂತಹ ಸಂದರ್ಭದಲ್ಲಿಯೇ ಪಕ್ಷವನ್ನು ಎಲ್ಲ ವೇದಿಕೆಗಳಲ್ಲಿ ಸಮರ್ಥಿಸಿಕೊಳ್ಳುತ್ತಿದ್ದ ರಮೇಶಬಾಬು ಅವರು ಕೂಡ ಪಕ್ಷ ತೆರೆದಿದ್ದಾರೆ.
ಜೂನ್ ತಿಂಗಳಿನಲ್ಲಿ ನಡೆಯಲಿದೆ ಪರಿಷತ್ ಚುನಾವಣೆ
ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಇದೇ ಜೂನ್ ತಿಂಗಳಿನಲ್ಲಿ ಚುನಾವಣೆ ನಡೆಯಲಿದೆ. ಜೂನ್ 23 ರಂದು 5 ನಾಮನಿರ್ದೇಶಿತ ಸದಸ್ಯರು ಹಾಗೂ ಜೂನ್ 30 ರಂದು 11 ಇತರ ಸದಸ್ಯರು ಸೇರಿದಂತೆ ಒಟ್ಟು 16 ವಿಧಾನ ಪರಿಷತ್ ಸದಸ್ಯರು ನಿವೃತ್ತಿ ಆಗಲಿದ್ದಾರೆ.
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಿರುವ ಸದಸ್ಯರಾದ ಕಾಂಗ್ರೆಸ್ ಪಕ್ಷದ ಎನ್ ಎಸ್ ಬೋಸರಾಜು, ಜಯಮ್ಮ, ಎಚ್ ಎಂ ರೇವಣ್ಣ, ನಸೀರ್ ಅಹ್ಮದ್, ಜೆಡಿಎಸ್ ಪಕ್ಷದ ಟಿ.ಎ. ಶರವಣ, ಮಲ್ಲಿಕಾರ್ಜುನ ಅವರು ಜೂನ್ 30ರಂದು ನಿವೃತ್ತಿ ಆಗಲಿದ್ದಾರೆ. ಪದವೀಧರ ಕ್ಷೇತ್ರಗಳಿಂದ ಆಯ್ಕೆಯಾಗಿದ್ದ ಜೆಡಸಿಎಸ್ ಪಕ್ಷದ ಆರ್. ಚೌಡರೆಡ್ಡಿ ನತೂಲ್ಲಿ, ಬಿಜೆಪಿಯ ಎಸ್ ಪಿ ಸಂಕನೂರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಜೆಡಿಎಸ್ ಪಕ್ಷದ ಪುಟ್ಟಣ್ಣ ಹಾಗೂ ಕಾಂಗ್ರೆಸ್ ಪಕ್ಷದ ಶರಣಪ್ಪ ಮಟ್ಟೂರ್ ನಿವೃತ್ತಿ ಆಗಲಿದ್ದಾರೆ.
ನಾಮನಿರ್ದೇಶಿತ ಸದಸ್ಯರಾದ ಕೆ. ಅಬ್ದುಲ್ ಜಬ್ಬಾರ್, ಡಾ. ಜಯಮಾಲಾ ರಾಮಚಂದ್ರ, ಐವಾನ್ ಡಿಸೋಜ, ಇಕ್ಬಾಲ್ ಅಹ್ಮದ್ ಸರಡಗಿ ಹಾಗೂ ತಿಪ್ಪಣ್ಣ ಕಮಕನೂರು ಅವರು ಜೂನ್ 23 ರಂದು ನಿವೃತ್ತಿ ಆಗಲಿದ್ದಾರೆ. ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ತೊರೆಯುವವರು ಹೆಚ್ಚಾದರೂ ಅಚ್ಚರಿಯಿಲ್ಲ.