ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಂಭವ
ಬೆಂಗಳೂರು, ಸೆಪ್ಟೆಂಬರ್ 02: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 5 ರವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಆರಂಭವಾಗಿದ್ದ ವರುಣನ ಆರ್ಭಟ ಸೋಮವಾರದವರೆಗೂ ಮುಂದುವರೆದಿತ್ತು.
Recommended Video
ಭಾನುವಾರ ರಾತ್ರಿ 8 ಗಂಟೆ ಸುಮಾರಿ ಮಿಂಚು ಆರಂಭವಾಗಿತ್ತು. ನಂತರ ನಿಧಾನವಾಗಿ ದೊಡ್ಡ ಪ್ರಮಾಣದಲ್ಲಿ ಗುಡುಗಲು ಆರಂಭವಾಗಿತ್ತು. ಏಕಾಏಕಿ ಕರಿಮೋಡಗಳೆಲ್ಲ ಒಂದೆಡೆ ಸೇರಿ 11 ಗಂಟೆ ಸುಮಾರಿಗೆ ಅಬ್ಬರದ ಮಳೆ ಸುರಿಯಲು ಆರಂಭವಾಗಿತ್ತು.
ಮೆಜೆಸ್ಟಿಕ್, ನಾಗರಬಾವಿ ಶಾಂತಿನಗರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಗಿರಿನಗರ, ನಾಗೇಂದ್ರ ಬ್ಲಾಕ್, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜ ಪೇಟೆ, ಶ್ರೀರಾಂಪುರ, ರಾಜಾಜಿನಗರ, ಆರ್ ಆರ್ ನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಆಗಿತ್ತು.

ಹೆಚ್ಚುವರಿ ಮಳೆ
ಜೂನ್-1 ರಿಂದ ಆಗಸ್ಟ್ 31ರ ಅವಧಿಯಲ್ಲಿ ದೇಶದಲ್ಲಿ ಒಟ್ಟಾರೆ ಶೇ. 10ರಷ್ಟು ಹೆಚ್ಚುವರಿ ಮಳೆಯಾಗಿದ್ದು, ಆಗಸ್ಟ್ನಲ್ಲಿ ವಾಡಿಕೆಗಿಂತ ಶೇಕಡ 27ರಷ್ಟು ಹೆಚ್ಚು ಮಳೆಯಾಗಿದೆ. ಈ ಮೂಲಕ 44 ವರ್ಷಗಳ ದಾಖಲೆಯನ್ನು ಆಗಸ್ಟ್ ಮಳೆ ಮುರಿದಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸೆ.5ರ ವರೆಗೂ ಕರಾವಳಿ, ದಕ್ಷಿಣ ಒಳನಾಡಿನ ಹಾಗೂ ರಾಜ್ಯದ ಪೂರ್ವಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಜಿ.ಎಸ್. ಶ್ರೀನಿವಾಸರೆಡ್ಡಿ ಅವರು ತಿಳಿಸಿದ್ದಾರೆ.

120 ವರ್ಷಗಳಲ್ಲಿ ನಾಲ್ಕನೇ ಬಾರಿ ಹೆಚ್ಚು ಮಳೆ
ಕಳೆದ 120 ವರ್ಷಗಳಲ್ಲಿ 4ನೇ ಬಾರಿಗೆ ಆಗಸ್ಟ್ನಲ್ಲಿ ಅತಿ ಹೆಚ್ಚು ಮಳೆಯಾಗಿರುವುದು ವಿಶೇಷವಾಗಿದೆ. ಕೇಂದ್ರ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ 3 ದಿನಗಳ ಕಾಲ ಉತ್ತರ ಭಾರತ, ಈಶಾನ್ಯ ರಾಜ್ಯಗಳು ಹಾಗೂ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಸಂಭವವಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗಸ್ಟ್ನಲ್ಲಿ ಇಷ್ಟೊಂದು ಮಳೆ ಬಿದ್ದಿರುವುದು 1976ರ ಬಳಿಕ ಇದೇ ಮೊದಲು ಎಂದು ಇಲಾಖೆ ಹೇಳಿದೆ. ಜುಲೈ ತಿಂಗಳಲ್ಲಿ ಸರಾಸರಿಗಿಂತ ಶೇ.10ರಷ್ಟು ಕಡಿಮೆ ಮಳೆಯಾಗಿತ್ತು. ಆದರೆ, ಆಗಸ್ಟ್ನಲ್ಲಿ ದೇಶಾದ್ಯಂತ ಉತ್ತಮ ಮಳೆಯಾದ ಕಾರಣ, ಈ ದಾಖಲೆ ಸೃಷ್ಟಿಯಾಗಿದೆ. ಸೆಪ್ಟಂಬರ್ನಲ್ಲಿ ವರುಣನ ಅಬ್ಬರ ತಗ್ಗಲಿದೆ ಎಂದೂ ಇಲಾಖೆ ಹೇಳಿದೆ.
ಮಳೆಯಾದ ಪ್ರದೇಶಗಳು
ಕಳೆದ ಎರಡು ದಿನಗಳಿಂದ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಬೆಂಗಳೂರು, ರಾಮನಗರ, ಚಾಮರಾಜನಗರ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾದ ವರದಿಯಾಗಿದೆ.












Click it and Unblock the Notifications