ಆಗಸ್ಟ್ 28 ರಿಂದ 2 ದಿನ ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರು, ಆಗಸ್ಟ್ 25: ರಾಜ್ಯದ 13 ಜಿಲ್ಲೆಗಳಲ್ಲಿ ಆಗಸ್ಟ್ 28 ರಿಂದ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಳೆದ ಒಂದು ವಾರದಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೇ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ಇಂದು ಮಳೆ ಸುರಿಯಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದೆ.
ಪ್ರಮುಖವಾಗಿ ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇನ್ನೂ 3 ದಿನ ಅಧಿಕ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ನೈಋುತ್ಯ ಬಂಗಾಳ ಉಪಸಾಗರದ ಶ್ರೀಲಂಕಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ಆ. 29ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 29 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ರಾಜ್ಯಾದ್ಯಂತ ಭಾನುವಾರ ನೈಋುತ್ಯ ಮುಂಗಾರು ಚುರುಕಾಗಿತ್ತು. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಿದೆ.

ಮಳೆಯಾಗಿರುವ ಪ್ರದೇಶಗಳು
ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ 7 ಸೆಂ.ಮೀ ಮಳೆಯಾಗಿದೆ, ಎಚ್ಡಿ ಕೋಟೆ, ತಿಪಟೂರು, ಮಂಡಗದ್ದೆ, ಕೋಲಾರ, ಶ್ರೀರಂಗಪಟ್ಟಣ, ಬುಕ್ಕಪಟ್ಟಣ, ಬೇಲೂರು, ಶ್ರೀನಿವಾಸಪುರ, ಶ್ರವಣಬೆಳಗೊಳ, ಕಳಸ, ಆಗುಂಬೆ, ಕೋಟಾ, ಧರ್ಮಸ್ಥಳ, ಮಧುಗಿರಿ, ಪಾವಗಡ, ಹೆಬ್ಬೂರು, ಚಿಕ್ಕಬಳ್ಳಾಪುರ, ಕೋಣನೂರು, ತಾಳಗುಪ್ಪ, ಚನ್ನಪಟ್ಟಣ, ಬಸವನ ಬಾಗೇವಾಡಿ, ಅರಕಲಗೂಡು, ದಾವಣಗೆರೆಯಲ್ಲಿ ಮಳೆಯಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಭೂ ಕುಸಿತ
ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ ರಾತ್ರಿ ಮಳೆಯಾಗಿದೆ. ಮಂಗಳವಾರ ಸಂಜೆಯೇ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ತಾಲೂಕಿನಲ್ಲಿ ಮಳೆ ಆರಂಭವಾಗಿತ್ತು. ರಾತ್ರಿ ಮತ್ತಷ್ಟು ಬಿರುಸು ಪಡೆದಿದೆ. ನಂದಿಬೆಟ್ಟಕ್ಕೆ ಸಾಗುವ ರಸ್ತೆಯ ಬದಿ ದಿಬ್ಬ ಕುಸಿದಿದ್ದು ಸಂಚಾರ ಬಂದ್ ಆಗಿದೆ. ನಂದಿಕ್ರಾಸ್ ಬಳಿ ಬಸ್ ನೀರಿನಲ್ಲಿ ಸಿಲುಕಿದೆ. ಹೊಲ ಮತ್ತು ತೋಟಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ತುಂಬಿದೆ.
ಶಿಡ್ಲಘಟ್ಟ ತಾಲೂಕಿನ ಮೇಲೂರಿನಲ್ಲಿ ಪಿನಾಕಿನಿ ನದಿಯ ಕಾಲುವೆ ತುಂಬಿ ಹರಿಯುತ್ತಿದೆ. ಗೌರಿಬಿದನೂರು ತಾಲೂಕಿನ ಅಲಕಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಂದಿಗಾನಹಳ್ಳಿ ಬಳಿ ಉತ್ತರ ಪಿನಾಕಿನಿ ಮೈದುಂಬಿ ಹರಿಯುತ್ತಿದೆ.

ಬೆಂಗಳೂರು ಹವಾಮಾನ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಮಳೆಯಾಗುವ ಸಾಧ್ಯತೆ ಇದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Recommended Video

ಎಲ್ಲೆಲ್ಲಿ ಯೆಲ್ಲೋ ಅಲರ್ಟ್ ಘೋಷಣೆ?
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.












Click it and Unblock the Notifications