Sowmya Reddy: ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ
ಬೆಂಗಳೂರು, ಆಗಸ್ಟ್ 14: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷರಾಗಿ ಜಯನಗರ ಕ್ಷೇತ್ರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೇಮಕ ಮಾಡಲಾಗಿದೆ. ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ, 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿದು ಸೋಲು ಕಂಡಿದ್ದರು.
ಎಐಸಿಸಿ ಮೂರು ರಾಜ್ಯಗಳ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಸೌಮ್ಯಾ ರೆಡ್ಡಿ ನೇಮಕದ ಪ್ರಸ್ತಾವನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಆದೇಶದಲ್ಲಿ ತಿಳಿಸಿದ್ದಾರೆ.

ಪುಷ್ಪಾ ಅಮರನಾಥ್ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾಗಿದ್ದರು. ಲೋಕಸಭೆ ಚುನಾವಣೆಗೂ ಮೊದಲೇ ಅವರ ಅಧಿಕಾರಾವಧಿ ಪೂರ್ಣಗೊಂಡಿತ್ತು. ಸದ್ಯ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ರಾಜ್ಯ ಮಟ್ಟದ ಸಮಿತಿಯ ಉಪಾಧ್ಯಕ್ಷರು. ಆದ್ದರಿಂದ ರಾಜ್ಯ ಮಹಿಳಾ ಘಟಕಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಹಲವು ಹೆಸರು ಕೇಳಿ ಬಂದಿದ್ದವು: ಪುಷ್ಪಾ ಅಮರನಾಥ್ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ರಾಜ್ಯ ಮಟ್ಟದ ಸಮಿತಿಯ ಉಪಾಧ್ಯಕ್ಷರಾದ ಬಳಿಕ ರಾಜ್ಯ ಮಹಿಳಾ ಕಾಂಗ್ರೆಸ್ಗೆ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿತ್ತು. ಹಲವು ಹೆಸರುಗಳು ಈ ಹುದ್ದೆಗೆ ಕೇಳಿ ಬಂದಿತ್ತು.
ಸೌಮ್ಯಾ ರೆಡ್ಡಿ, ಕಮಲಾಕ್ಷಿ ರಾಜಣ್ಣ, ವೀಣಾ ಕಾಶಪ್ಪನವರ, ಕೃಪಾ ಆಳ್ವ, ಐಶ್ವರ್ಯಾ ಮಹಾದೇವ್ ಹೆಸರುಗಳು ಕೇಳಿ ಬಂದಿದ್ದವು. ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೇಮಕವಾಗಲಿದ್ದಾರೆ ಎಂಬ ಸುದ್ದಿ ಕಳೆದ ವಾರವೇ ತಿಳಿದುಬಂದಿತ್ತು. ಮಂಗಳವಾರ ಈ ಕುರಿತು ಎಐಸಿಸಿ ಅಧಿಕೃತ ಆದೇಶವನ್ನು ಹೊರಡಿಸಿದೆ.
ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಬೆಂಗಳೂರು ನಗರದ ಜಯನಗರ ಕ್ಷೇತ್ರದ ಮಾಜಿ ಶಾಸಕಿ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೌಮ್ಯಾ ರೆಡ್ಡಿ ಜಯನಗರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಚುನಾವಣೆಯಲ್ಲಿ 54,458 ಮತಗಳನ್ನು ಪಡೆದು, ಬಿಜೆಪಿಯ ಬಿ. ಎನ್. ಪ್ರಹ್ಲಾದ್ (51,571 ಮತ) ಸೋಲಿಸಿ ಶಾಸಕಿಯಾಗಿ ಆಯ್ಕೆಯಾಗಿದ್ದರು.
2023ರ ವಿಧಾನಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷ ಜಯನಗರದಲ್ಲಿ ಹಾಲಿ ಶಾಸಕಿ ಸೌಮ್ಯಾ ರೆಡ್ಡಿಗೆ ಟಿಕೆಟ್ ನೀಡಿತ್ತು. ಬಿಜೆಪಿಯಿಂದ ಸಿ. ಕೆ. ರಾಮಮೂರ್ತಿ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಚುನಾವಣೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಯಿತು. ಸೌಮ್ಯಾ ರೆಡ್ಡಿ 57,781 ಮತಗಳನ್ನು ಪಡೆದು 16 ಮತಗಳ ಅಂತದಲ್ಲಿ ಸೋಲು ಕಂಡರು.
ಕಾಂಗ್ರೆಸ್ ಪಕ್ಷ 2024ರ ಲೋಕಸಭೆ ಚುನಾವಣೆಯಲ್ಲಿ ಸೌಮ್ಯಾ ರೆಡ್ಡಿ ಅವರನ್ನು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಸಿತು. ಚುನಾವಣೆಯಲ್ಲಿ ಹಾಲಿ ಸಂಸದ ತೇಜಸ್ವಿ ಸೂರ್ಯ ಬಿಜೆಪಿಯಿಂದ ಎದುರಾಳಿಯಾಗಿದ್ದರು. ಸೌಮ್ಯಾ ರೆಡ್ಡಿ 4,73,747 ಮತಗಳನ್ನು ಪಡೆದು ಸೋತರು. ತೇಜಸ್ವಿ ಸೂರ್ಯ 750830 ಮತಗಳನ್ನು ಪಡೆದು ಜಯಗಳಿಸಿದರು.
ಸೌಮ್ಯಾ ರೆಡ್ಡಿ ಪರಿಚಯ: ಬೆಂಗಳೂರಿನ ಆರ್. ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ವಿಷಯದಲ್ಲಿ ಸೌಮ್ಯಾ ರೆಡ್ಡಿ ಪದವಿ ಪಡೆದಿದ್ದಾರೆ. ನ್ಯೂಯಾರ್ಕ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪರಿಸರ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
2014ರಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿದ್ದರು. ರಾಜಕೀಯದತ್ತ ಬಂದ ಅವರು 2016ರಲ್ಲಿ ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ, 2017ರಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದರು. 2019ರಲ್ಲಿ ಎಐಸಿಸಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು.
2018ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಸರ್ಕಾರದ ವಿರುದ್ಧದ ವಿವಿಧ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಆದರೆ 2023ರ ವಿಧಾನಸಭೆ ಚುನಾವಣೆಯಲ್ಲಿ ಕೆಲವೇ ಮತಗಳ ಅಂತರದಲ್ಲಿ ಸೋಲು ಕಂಡರು. ತಂದೆ ರಾಮಲಿಂಗಾ ರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಾರಿಗೆ, ಮುಜರಾಯಿ ಖಾತೆ ಸಚಿವರು.












Click it and Unblock the Notifications