ಗುರುವಾರ ಬಿಜೆಪಿ ಸೇರಲಿದ್ದಾರೆ ತುಮಕೂರಿನ ಮಾಜಿ ಸಂಸದ!
ಬೆಂಗಳೂರು, ನವೆಂಬರ್ 02; ಕಾಂಗ್ರೆಸ್ ಪಕ್ಷ ತೊರೆದಿದ್ದ ತುಮಕೂರಿನ ಮಾಜಿ ಸಂಸದ ಎಸ್. ಪಿ. ಮುದ್ದಹನುಮೇಗೌಡ ಗುರುವಾರ ಬಿಜೆಪಿ ಸೇರಲಿದ್ದಾರೆ. 2023ರ ವಿಧಾನಸಭೆ ಚುನಾವಣೆಗೆ ಅವರು ಕುಣಿಗಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿ.
ಕರ್ನಾಟಕ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆಯಲಿರುವ ಸಮಾರಂಭದಲ್ಲಿ ಎಸ್. ಪಿ. ಮುದ್ದಹನುಮೇಗೌಡ ಪಕ್ಷ ಸೇರಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.
ಸೆಪ್ಟೆಂಬರ್ನಲ್ಲಿ ಕಾಂಗ್ರೆಸ್ ತೊರೆದಿದ್ದ ಅವರು ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದರು. ಈಗ ಅಧಿಕೃತವಾಗಿ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ. 2014ರ ಲೋಸಭೆ ಚುನಾವಣೆಯಲ್ಲಿ ತುಮಕೂರಿನಲ್ಲಿ ಮುದ್ದಹನುಮೇಗೌಡರು ಗೆದ್ದಿದ್ದರು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿತ್ತು.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿಯಾಗಿದ್ದ ಎಸ್. ಪಿ. ಮುದ್ದಹನುಮೇಗೌಡ ಸೆಪ್ಟೆಂಬರ್ನಲ್ಲಿ ಪಕ್ಷ ತೊರೆಯುತ್ತೇನೆ. ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಎಂದು ಮನವಿ ಮಾಡಿದ್ದರು. ಅಲ್ಲದೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾಗಿ ತಮ್ಮ ತೀರ್ಮಾನ ತಿಳಿಸಿದ್ದರು.
ಸೆಪ್ಟೆಂಬರ್ 1ರ ಸಂಜೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಹಲವಾರು ಬಿಜೆಪಿ ನಾಯಕರನ್ನು ಭೇಟಿಯಾಗಿದ್ದರು. ಎಸ್. ಪಿ. ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ ಯಾವಾಗ? ಎಂಬ ಪ್ರಶ್ನೆ ಹಲವು ದಿನದಿಂದ ಕಾಡುತ್ತಿತ್ತು.
ಪರಿಷತ್ ಟಿಕೆಟ್ ಆಕಾಂಕ್ಷಿ; ಎಸ್. ಪಿ. ಮುದ್ದಹನುಮೇಗೌಡ 2014ರ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. 4,29,868 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಪಕ್ಷದ ಟಿಕೆಟ್ ಕೈ ತಪ್ಪಿತ್ತು.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ಪರಿಣಾಮ ಎಸ್. ಪಿ. ಮುದ್ದಹನುಮೇಗೌಡಗೆ ಟಿಕೆಟ್ ಕೈ ತಪ್ಪಿತು. ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ತುಮಕೂರಿನಿಂದ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಆದರೆ ಅವರು ಸಹ ಸೋಲು ಕಂಡರು.
2019ರ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಬಳಿಕ ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಿದ್ದಕ್ಕೆ ಎಸ್. ಪಿ. ಮುದ್ದಹನುಮೇಗೌಡ ಅಸಮಾಧಾನ ಹೊರಹಾಕಿದ್ದರು. ವಿಧಾನ ಪರಿಷತ್ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಆದರೆ ಪಕ್ಷ ಪರಿಷತ್ ಟಿಕೆಟ್ ಸಹ ನೀಡಲಿಲ್ಲ.
ನಾಯಕರ ವಿರುದ್ಧ ಅಸಮಾಧಾನ; ಸೆಪ್ಟೆಂಬರ್ನಲ್ಲಿ ಕಾಂಗ್ರೆಸ್ ಬಿಡುವ ತೀರ್ಮಾನ ಪ್ರಕಟಿಸಿದಾಗ ಮಾತನಾಡಿದ್ದ ಎಸ್. ಪಿ. ಮುದ್ದಹನುಮೇಗೌಡ, "ನಾನು ನಾಯಕರನ್ನು ಭೇಟಿ ಮಾಡಿ ನನ್ನ ಸ್ಪಷ್ಟ ನಿರ್ಧಾರವನ್ನು ತಿಳಿಸಿದ್ದೇನೆ. ನಾನು ಅತ್ಯಂತ ಕ್ರಿಯಾಶೀಲವಾಗಿ ಪಕ್ಷ ಸಂಘಟನೆ ಮಾಡಿದ್ದೇನೆ. ನಾನು ನಾಲ್ಕು ಬಾರಿ ಚುನಾವಣೆಗೆ ಸ್ಪರ್ಧೆ ಮಾಡದಂತೆ ತಪ್ಪಿಸಲಾಗಿದೆ" ಎಂದು ಆರೋಪಿಸಿದ್ದರು.
"1989ರಲ್ಲಿ ಕಾಂಗ್ರೆಸ್ ಬಿ-ಫಾರಂ ನನಗೆ ಕೊಟ್ಟು ಬಳಿಕ ಬೇರೆಯವರಿಗೆ ಕೊಟ್ಟರು. ಪಕ್ಷಕ್ಕೆ ನನ್ನದೇ ಆದ ಅಳಿಲು ಸೇವೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನನ್ನ ಸೇವೆಯೂ ಇದೆ. ಕಾಂಗ್ರೆಸ್ ಪಕ್ಷಕ್ಕೆ ನನ್ನ ರಾಜೀನಾಮೆ ನೀಡುತ್ತೇನೆ" ಎಂದು ಘೋಷಣೆ ಮಾಡಿದ್ದರು.
2023ರ ವಿಧಾನಸಭೆ ಚುನಾವಣೆಯಲ್ಲಿ ಎಸ್. ಪಿ. ಮುದ್ದಹನುಮೇಗೌಡ ತುಮಕೂರಿನ ಕುಣಿಗಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಕ್ಷೇತ್ರ ಪ್ರಸ್ತುತ ಕಾಂಗ್ರೆಸ್ ವಶದಲ್ಲಿದೆ. ಶಾಸಕ ಡಾ. ರಂಗನಾಥ್.
ಎಸ್. ಪಿ. ಮುದ್ದಹನುಮೇಗೌಡ ಸಂಸದರಾಗುವ ಮೊದಲು ಕುಣಿಗಲ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಈಗ ಮುಂದಿನ ವಿಧಾನಸಭೆ ಚುನಾವಣೆಗೆ ಅಲ್ಲಿಂದಲೇ ಸ್ಪರ್ಧಿಸಬೇಕು ಎಂದು ಬಯಸಿದ್ದಾರೆ. ಅಲ್ಲದೇ ಅವರ ಅಭಿಮಾನಿಗಳು ಸಹ ಈ ಕುರಿತು ಒತ್ತಾಯ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷ ತೊರೆದಿರುವ ಎಸ್. ಪಿ. ಮುದ್ದಹನುಮೇಗೌಡ ಬಿಜೆಪಿ ಸೇರಲಿದ್ದಾರೆ. ಮುಂದಿನ ಚುನಾವಣೆಗೆ ಕುಣಿಗಲ್ನ ಬಿಜೆಪಿ ಟಿಕೆಟ್ ಸಿಗಲಿದೆಯೇ? ಕಾದು ನೋಡಬೇಕು.











Click it and Unblock the Notifications