ವಿಧಾನಸಭೆಯಲ್ಲಿ ಸಂವಿಧಾನದ ಮೇಲೆ ಚರ್ಚೆ ನಡೆಯುತ್ತಾ?
ಬೆಂಗಳೂರು, ಮಾ. 03: ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಸಂವಿಧಾನದ ಮೇಲೆ ವಿಧಾನಸಭೆಯಲ್ಲಿ ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಲಾಗಿದ್ದರೂ, ಚರ್ಚೆ ನಡೆಯುವುದು ಅನುಮಾನ. ಭಾರತ ಸಂವಿಧಾನಕ್ಕೆ 70 ವರ್ಷಗಳಾದ ಹಿನ್ನೆಲೆಯಲ್ಲಿ ವಿಶೇಷ ಚರ್ಚೆಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅವಕಾಶ ಕಲ್ಪಿಸಿದ್ದಾರೆ. ಆದರೆ ವಿಧಾನಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ವಿಚಾರ ಇಟ್ಟುಕೊಂಡು ವಿಪಕ್ಷಗಳು ಧರಣಿ ಮಾಡುತ್ತಿವೆ. ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿಯ ಸದಸ್ಯ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಹೇಳಿಕೆ ಹಿಂದಕ್ಕೆ ಪಡೆದು ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಪಟ್ಟು ಹಿಡಿದು ಸದನದ ಬಾವಗಿಳಿದು ಧರಣಿ ನಡೆಸುತ್ತಿವೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆಯೂ ಕೂಡ ಸದನ ಕಲಾಪ ಸರಿಯಾಗಿ ನಡೆಯಲಿಲ್ಲ. ವಿರೋಧ ಪಕ್ಷಗಳ ಸದಸ್ಯರ ಧರಣಿ ಮಧ್ಯದಲ್ಲಿಯೇ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಉತ್ತರ ಕೊಟ್ಟರು. ಜೊತೆಗೆ 8 ವಿಧೇಯಕಗಳಿಗೆ ಸರ್ಕಾರ ಅನುಮೋದನೆ ಪಡೆದುಕೊಂಡಿತು.
ಯತ್ನಾಳ್ ವಿರುದ್ಧ ಹೋರಾಟ; ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ
ಇವತ್ತು 11 ಗಂಟೆಗೆ ವಿಧಾನ ಸಭಾ ಕಲಾಪ ಆರಂಭವಾಗುತ್ತದೆ. ಕಲಾಪ ಆರಂಭವಾಗುತ್ತಿದ್ದಂತೆಯೆ ಸಂವಿಧಾನದ ಪ್ರಸ್ತಾವನೆಯನ್ನು ಸ್ಪೀಕರ್ ಕಾಗೇರಿ ಅವರು ಓದಲಿದ್ದಾರೆ. ಬಳಿಕ ಪ್ರಸ್ತಾವಿಕ ಮಾತುಗಳನ್ನು ಆಡಲಿದ್ದಾರೆ. ಆದರೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೆ ಸದನದ ಬಾವಿಗಳಿದು ಧರಣಿಯನ್ನು ಮುಂದುವರೆಸಲು ವಿರೋಧ ಪಕ್ಷಗಳು ತೀರ್ಮಾನಿಸಿವೆ. ಧರಣಿಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಸದನಲ್ಲಿ ಹಾಜರಿಬೇಕು ಎಂದು ಈಗಾಗಲೇ ಕಾಂಗ್ರೆಸ್ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿದೆ. ಸಂವಿಧಾನದ ಮೇಲೆ ಚರ್ಚೆಗೆ ಅವಕಾಶ ಕಲ್ಪಿಸಿರುವುದರಿಂದ ಧರಣಿ ಕೈಬಿಟ್ಟು ಚರ್ಚೆಯಲ್ಲಿ ವಿರೋಧ ಪಕ್ಷಗಳು ಭಾಗವಹಿಸುತ್ತವೆಯಾ ಎಂಬುದು ಕುತೂಹಲ ಮೂಡಿಸಿದೆ.
ನಿನ್ನೆ ಸುಗಮ ಕಲಾಪ ನಡೆಸಲು ಅನುಕೂಲವಾಗುವಂತೆ ಕಾಂಗ್ರೆಸ್ ನಾಯಕರೊಂದಿಗೆ ಎರಡು ಬಾರಿ ಸ್ಪೀಕರ್ ಕಾಗೇರಿ ಅವರು ಸಂಧಾನ ಸಭೆ ನಡಿಸಿದ್ದರು. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶಾಸಕ ಯತ್ನಾಳ್ ಕ್ಷಮೆ ಕೇಳುವವರೆಗೆ ಧರಣಿ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.