ಶ್ರೀಗಳ ಪ್ರಕರಣದ ವಿಚಾರಣೆಗೆ ಹೊಸ ಪೀಠ ರಚನೆ
ಬೆಂಗಳೂರು, ಜ.29 : ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಕರ್ನಾಟಕ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಹೊಸ ಪೀಠವೊಂದನ್ನು ಸ್ಥಾಪನೆ ಮಾಡಲಾಗಿದೆ. ಇದುವರೆಗೂ ಐವರು ನ್ಯಾಯಮೂರ್ತಿಗಳು ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದಿದ್ದರು.
ನ್ಯಾಯಮೂರ್ತಿ ಆನಂದ ಭೈರಾರೆಡ್ಡಿ ಮತ್ತು ಎನ್. ಆನಂದ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಗುರುವಾರ ಅರ್ಜಿಯ ವಿಚಾರಣೆ ನಡೆಸಲಿದೆ. ಪ್ರಕರಣ ರದ್ದು ಕೋರಿರುವ ಅರ್ಜಿಯ ವಿಚಾರಣೆಯಿಂದ ಈಗಾಗಲೇ ಐವರು ನ್ಯಾಯಮೂರ್ತಿಗಳು ವಿವಿಧ ಕಾರಣಗಳಿಗಾಗಿ ಹಿಂದೆ ಸರಿದಿದ್ದರು. ಆದ್ದರಿಂದ ಹೊಸ ಪೀಠ ರಚನೆಯಾಗಿದೆ. [ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಎನ್.ಕುಮಾರ್]

ರಾಘವೇಶ್ವರ ಶ್ರೀಗಳ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿಗಳಾದ ಪವನ್ಕುಮಾರ್ ಬಿ. ಭಜಂತ್ರಿ, ಹೆಚ್.ಜಿ.ರಮೇಶ್, ಕೆ.ಎನ್.ಫಣೀಂದ್ರ, ರಾಮಮೋಹನ ರೆಡ್ಡಿ ಮತ್ತು ಎನ್.ಕುಮಾರ್ ಅವರು ಹಿಂದೆ ಸರಿದಿದ್ದರು. [ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್]
ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದಿದ್ದರಿಂದ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಅವರ ಪೀಠಕ್ಕೆ ವರ್ಗಾವಣೆಯಾಗಿತ್ತು. ಮುಖ್ಯ ನ್ಯಾಯಮೂರ್ತಿಗಳು ಅರ್ಜಿಯ ವಿಚಾರಣೆಗೆ ಹೊಸ ಪೀಠವೊಂದನ್ನು ಸ್ಥಾಪನೆ ಮಾಡಿದ್ದು, ಇಂದು ವಿಚಾರಣೆ ಆರಂಭವಾಗಲಿದೆ.
ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪವನ್ನು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳು ಎದುರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳಿಗೆ ವೈದ್ಯಕೀಯ ಪರೀಕ್ಷೆಯೂ ನಡೆದಿದೆ. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಶ್ರೀಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.












Click it and Unblock the Notifications