ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರ
ಬೆಂಗಳೂರು, ಜೂನ್ 24 : ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರ ಆರಂಭವಾಗಲಿದೆ. ನೈಋತ್ಯ ರೈಲ್ವೆ ಇನ್ನೊಂದು ವಾರದಲ್ಲಿ ರೈಲು ಸಂಚಾರದ ಕುರಿತು ಅಧಿಕೃತ ಘೋಷಣೆ ಮಾಡಲಿದೆ.
ರೈಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿಯ ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರು ವಿಶೇಷ ರೈಲು ಸಂಚಾರ ಆರಂಭಿಸಲು ಸೂಚನೆ ನೀಡಿದ್ದಾರೆ. ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಎ.ಕೆ.ಸಿಂಗ್ ಅವರಿಗೆ ಈ ಕುರಿತು ಸೂಚನೆ ಕೊಟ್ಟಿದ್ದಾರೆ.
ಭಾನುವಾರ ನೈಋತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, 'ರೈಲು ಸಂಚಾರವನ್ನು ಆರಂಭಿಸಿ, ಜನರ ಪ್ರತಿಕ್ರಿಯೆ ನೋಡಿಕೊಂಡು ಅದನ್ನು ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳೋಣ' ಎಂದು ಹೇಳಿದ್ದಾರೆ.

ವೇಳಾಪಟ್ಟಿ : ಅಧಿಕಾರಿಗಳ ಸಭೆಯಲ್ಲಿ ರೈಲು ಸಂಚಾರದ ವೇಳಾಪಟ್ಟಿಯನ್ನು ಸಹ ಅಂತಿಮಗೊಳಿಸಲಾಗಿದೆ. ಪ್ರತಿದಿನ ರಾತ್ರಿ 9ಗಂಟೆಗೆ ಬೆಂಗಳೂರಿನಿಂದ ಹೊರಡುವ ರೈಲು ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ರಾತ್ರಿ 9 ಗಂಟೆಗೆ ಹೊರಡಲಿರುವ ರೈಲು ಬೆಳಗ್ಗೆ 7.30ಕ್ಕೆ ಬೆಂಗಳೂರಿಗೆ ಆಗಮಿಸಲಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಸುರೇಶ್ ಅಂಗಡಿ ಅವರು ಬೆಳಗಾವಿ ಕ್ಷೇತ್ರದಲ್ಲಿ 761991 ಮತಗಳನ್ನು ಪಡೆದು ಕಾಂಗ್ರೆಸ್ನ ವಿ.ಎಸ್.ಸಾಧುನವರ ಅವರನ್ನು 391304 ಮತಗಳ ಅಂತರದಿಂದ ಸೋಲಿಸಿದ್ದಾರೆ. ಮೊದಲ ಬಾರಿಗೆ ಕೇಂದ್ರ ಸಚಿವರಾಗಿದ್ದಾರೆ.












Click it and Unblock the Notifications