ಹಿರೇಮಠ್ ಪಟ್ಟಿ ಮಾಡಿದ 11 ಭ್ರಷ್ಟ ಅಭ್ಯರ್ಥಿಗಳು!
ಬೆಂಗಳೂರು, ಮಾ. 24 : ಲೋಕಸಭೆ ಚುಣಾವಣೆಯಲ್ಲಿ ಸ್ಪರ್ಧಿಸುತ್ತಿರುವ 11 ಮಂದಿ ಭ್ರಷ್ಟ ಅಭ್ಯರ್ಥಿಗಳ ಪಟ್ಟಿಯನ್ನು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್ಆರ್ ಹಿರೇಮಠ ಬಿಡುಗಡೆ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಇವರಿಗೆ ಮತ ನೀಡಬಾರದು ಎಂದು ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಎಸ್ಆರ್ ಹಿರೇಮಠ, ಭ್ರಷ್ಟ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಇವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇವರಿಗೆ ಜನರು ಮತ ನೀಡಬಾರದು ಎಂದು ಮನವಿ ಮಾಡಿದರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಹಿರೇಮಠ ಅವರ ಪಟ್ಟಿಯಲ್ಲಿ ಐವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ 11 ಮಂದಿ ಅಭ್ಯರ್ಥಿಗಳಿದ್ದಾರೆ. ಚುನಾವಣೆಯಲ್ಲಿ ಈ ಎಲ್ಲ ಅಭ್ಯರ್ಥಿಗಳಿಗೆ ಮತ ನೀಡಬಾರದು ಎಂದು ಕ್ಷೇತ್ರಕ್ಕೆ ತೆರಳಿ ಪ್ರಚಾರ ಮಾಡುವುದಾಗಿ ಹಿರೇಮಠ ತಿಳಿಸಿದರು. ಹಿರೇಮಠರ ಪಟ್ಟಿ ಹೀಗಿದೆ ನೋಡಿ

ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ
ಲೋಕಸಭೆ ಚುನಾವಣೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಿರೇಮಠ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿದ್ದಾರೆ. ಅಕ್ರಮ ಡಿನೋಟಿಫಿಕೇಶನ್, ಅಕ್ರಮ ಗಣಿಗಾರಿಕೆ ಪ್ರಕರಣ ಎದುರಿಸುತ್ತಿರುವ ಯಡಿಯೂರಪ್ಪ ಅವರಿಗೆ ಮತ ನೀಡಬೇಡಿ ಎಂದು ಹಿರೇಮಠ ಮನವಿ ಮಾಡಿದರು.

ಬೀದರ್ ಕ್ಷೇತ್ರದ ಧರ್ಮಸಿಂಗ್
ಮಾಜಿ ಮುಖ್ಯಮಂತ್ರಿ ಮತ್ತು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್.ಧರ್ಮಸಿಂಗ್ ಅವರು ಸಹ ಹಿರೇಮಠ ಬಿಡುಗಡೆ ಮಾಡಿರುವ ಭ್ರಷ್ಟರ ಪಟ್ಟಿಯಲ್ಲಿದ್ದಾರೆ. ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತರು ಸಿದ್ಧಪಡಿಸಿರುವ ವರದಿಯಲ್ಲಿ ಇವರ ಹೆಸರಿದೆ ಎಂದು ಹಿರೇಮಠ ಹೇಳಿದ್ದಾರೆ.

ಕೇಂದ್ರ ಸಚಿವ ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಎಂ.ವೀರಪ್ಪ ಮೊಯ್ಲಿ ಹಿರೇಮಠರ ಭ್ರಷ್ಟರ ಪಟ್ಟಿಯಲ್ಲಿದ್ದಾರೆ. ಪೋಸ್ಕೋ ಹಗರಣದಲ್ಲಿ ಮೊಯ್ಲಿ ಭಾಗಿಯಾಗಿದ್ದು, ಅವರಿಗೆ ಮತ ನೀಡಬೇಡಿ ಎಂದರು.

ಡಿವಿ ಸದಾನಂದ ಗೌಡ
ಮಾಜಿ ಮುಖ್ಯಮಂತ್ರಿ ಮತ್ತು ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡರು ಚುನಾವಣಾ ಆಯೋಗಕ್ಕೆ ಸುಳ್ಳು ಆಸ್ತಿ ವಿವರ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಸದಾನಂದ ಗೌಡರು ತಮ್ಮ ಬಳಿ 10 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಸುಳ್ಯ, ಪುತ್ತೂರು ಸೇರಿದಂತೆ ಇತರ ಕಡೆಗಳಲ್ಲಿ ಅವರು 100 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ಹಿರೇಮಠ ಆರೋಪಿಸಿದರು.

ಎಚ್.ಡಿ.ಕುಮಾರಸ್ವಾಮಿ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಹ ಹಿರೇಮಠ ಭ್ರಷ್ಟ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೇರಿಸಿದ್ದಾರೆ. ಅಕ್ರಮ ಗಣಿಗಾರಿಕೆಯ ಕುರಿತು ಲೋಕಾಯುಕ್ತರು ಸಿದ್ಧಪಡಿಸಿದ ವರದಿಯಲ್ಲಿ ಅವರ ಹೆಸರಿದೆ ಎಂದು ಹಿರೇಮಠರು ಹೇಳಿದ್ದಾರೆ.

ಹಿರೇಮಠ್ ಪಟ್ಟಿಯಲ್ಲಿರುವ ಇತರರು
ಹಿರೇಮಠ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿರುವ ಇತರರು
* ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ
* ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ
* ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು
* ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್
* ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್
* ಉತ್ತರ ಕನ್ನಡದ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಶಾಂತ್ ಆರ್.ದೇಶಪಾಂಡೆ












Click it and Unblock the Notifications