ಶ್ರೀರಂಗಪಟ್ಟಣದಲ್ಲಿ ದೇವಾಲಯ ಕೆಡವಿ ಮಸೀದಿ: ನೋಟಿಸ್
ಬೆಂಗಳೂರು, ಮೇ 30: ಶ್ರೀರಂಗಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ಧ್ವಂಸಗೊಳಿಸಿ ವಿವಾದಿತ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾರೆ ಎನ್ನುವ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ.
ಇದೀಗ ಆ ಕುರಿತು ಉತ್ಖನನ ನಡೆಸಿ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ. ಹಾಗಾಗಿ ಮಸೀದಿ ಜಾಗದಲ್ಲಿ ದೇವಸ್ಥಾನವಿತ್ತೇ?, ಇಲ್ಲವೇ? ಎಂಬ ಕುತೂಹಲ ಮತ್ತೂ ಹೆಚ್ಚಾಗಿದೆ.

ಪ್ರಕರಣ ಸಂಬಂಧ ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಭಜರಂಗ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ಕೆ. ವಿ. ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಪ್ರಕರಣ ಸಂಬಂಧ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಜರಾಯಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮಂಡ್ಯ ಜಿಲ್ಲಾಧಿಕಾರಿ, ರಾಜ್ಯ ಧಾರ್ಮಿಕ ಪರಿಷತ್, ಕರ್ನಾಟಕ ರಾಜ್ಯ ವಕ್ಫ ಮಂಡಳಿಗೆ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜು. 11ಕ್ಕೆ ಮುಂದೂಡಿದೆ.
ವಸ್ತು ಸ್ಥಿತಿ ಪರಿಶೀಲನೆ: ಅರ್ಜಿದಾರರ ಪರ ವಕೀಲರು, ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ವಿಜಯನಗರ ಸಾಮ್ರಾಜ್ಯ, ಮೈಸೂರು ಸಾಮ್ರಾಜ್ಯ ಹಾಗೂ ದಳವಾಯಿ ದೊಡ್ಡಯ್ಯ ಸೇರಿ ಅನೇಕ ಆಡಳಿತಗಾರರು ಪೋಷಿಸಿಕೊಂಡು ಬಂದಿದ್ದರು. ಆದರೆ, ಇದನ್ನು ಟಿಪ್ಪು ಸುಲ್ತಾನ್ ಧ್ವಂಸಗೊಳಿಸಿದ್ದು ಬಳಿಕ ಅದೇ ಜಾಗದಲ್ಲಿ ಜಾಮೀಯ ಮಸೀದಿ ನಿರ್ಮಿಸಿದ್ದಾನೆ. ಈ ಬಗ್ಗೆ ಅಧ್ಯಯನ ಸರ್ವೆ ಹಾಗೂ ಉತ್ಖನನ ನಡೆಸಿ 30 ದಿನಗಳ ಒಳಗಾಗಿ ಹೈಕೋರ್ಟ್ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು.
ದೇವಾಲಯದ ಆವರಣದಲ್ಲಿರುವ ಹಿಂದೂ ಸಂಸ್ಕೃತಿ ಹಾಗೂ ಪರಂಪರೆಯ ಕುರುಹುಗಳಾಗಿರುವ ಗರುಡ ಕಂಬ, ಕಲ್ಯಾಣಿ, ಸ್ತೂಪ, ಸ್ತಂಭ, ಹಿಂದೂ ದೇವ-ದೇವತೆಗಳ ಕಲ್ಲಿನ ಕೆತ್ತನೆಗಳು ಹಾಗೂ ಭೂಗತ ದೇವಸ್ಥಾನದ ಭಾಗ, ವಾಸ್ತು ಶಿಲ್ಪ, ಹೂತಿಟ್ಟ ವಿಗ್ರಹಗಳನ್ನು ಸಂರಕ್ಷಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ರಾಜ್ಯ ಸರ್ಕಾರ, ಜಿಲ್ಲಾಡಳಿತಕ್ಕೆ ನಿರ್ದೇಶಿಸಬೇಕು ಎಂದೂ ಅವರು ಮನವಿ ಮಾಡಿದರು.












Click it and Unblock the Notifications