SSLC ಪರೀಕ್ಷೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪಾಸ್!

ಬೆಂಗಳೂರು, ಜು. 03: ಕೊರೊನಾ ವೈರಸ್ ಸಂಕಷ್ಟದ ಸಂದರ್ಭದಲ್ಲಿ ಅತಿದೊಡ್ಡ ರಿಸ್ಕ್‌ ತೆಗೆದುಕೊಂಡು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿದ್ದಾರೆ. ಒಂದು ರೀತಿಯಲ್ಲಿ ಪಿಯುಸಿ ಇಂಗ್ಲೀಷ್‌ ಪತ್ರಿಕೆಯ ಮೂಲಕ ಪೂರ್ವಸಿದ್ಧತಾ ಪರೀಕ್ಷೆ ಬರೆದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸುರೇಶ್ ಕುಮಾರ್ ಅವರು ಪಾಸ್ ಆದಂತಾಗಿದೆ.

Recommended Video

      15 BBMP workers tested corona positive ಬಿಬಿಎಂಪಿ 15 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು|Oneindia Kannada

      ಈ ಬಾರಿ ಕೊರೊನಾ ವೈರಸ್‌ನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿತ್ತು. ಇನ್ನೇನು 10ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆ ಆರಂಭವಾಗಬೇಕು ಎಂಬ ಸಮಯದಲ್ಲಿ ಕೋವಿಡ್-19 ದಿಢೀರ್ ಹಾವಳಿ ಶುರುಮಾಡಿತ್ತು. ಮುಂದುವರೆದ ಅಮೆರಿಕ, ಇಟಲಿ, ಚೀನಾ ಹಾಗೂ ಇಂಗ್ಲೆಂಡ್ ನಂತಹ ದೇಶಗಳೇ ಕೊರೊನಾ ವೈರಸ್ ಹಾವಳಿಗೆ ತತ್ತರಿಸಿ ಹೋಗಿದ್ದವು.

      ಹೀಗಾಗಿ ಮೊದಲು ಜೀವ ಆಮೇಲೆ ಜೀವನ ಎಂಬ ನೀತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ನೆರೆಯ ಎಲ್ಲ ರಾಜ್ಯಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡಿ, ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ್ದವು. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಪರೀಕ್ಷೆ ನಡೆದಿದೆ. ಆ ಮೂಲಕ ಸಂಕಷ್ಟ ಕಾಲದಲ್ಲಿ ವಿದ್ಯಾರ್ಥಿಗಳು ಜೀವನ ಶಿಕ್ಷಣ ಪರೀಕ್ಷೆಯಲ್ಲೂ ಪಾಸ್ ಆಗಿದ್ದಾರೆ. ಪರೀಕ್ಷಾ ಕಾಲದ ಸಂಪೂರ್ಣ ವಿವರಗಳನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೊಟ್ಟಿದ್ದಾರೆ. ಮುಂದೆ ಓದಿ!

      ದೇಶಕ್ಕೆ ಮಾದರಿ

      ದೇಶಕ್ಕೆ ಮಾದರಿ

      ಜೂ. 25ರಿಂದ ಜು. 3ರವರೆಗೆ ನಡೆದ 2019-20ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಹೇಳಿದ್ದಾರೆ. ಎಲ್ಲರ ಸಹಕಾರದಿಂದ ಪರೀಕ್ಷೆ ಸುಗಮವಾಗಿ ನಡೆದವು ಎಂದಿದ್ದಾರೆ.

      ಈ ನಡೆದ ಆರು ಪರೀಕ್ಷೆಗಳಲ್ಲಿ ಪ್ರತಿದಿನ ಸರಾಸರಿ 7.5 ಲಕ್ಷ ವಿದ್ಯಾಥಿಗಳು ಯಾವುದೇ ಸಮಸ್ಯೆಯಿಲ್ಲದ ರೀತಿಯಲ್ಲಿ ಪರೀಕ್ಷೆಗಳನ್ನು ಧೈರ್ಯವಾಗಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಎದುರಿಸಿದ್ದಾರೆ ಎಂದು ಸುರೇಶ ಕುಮಾರ್ ಅವರು ಹೇಳಿದ್ದಾರೆ.

      ಇಂತಹ ಸಂಕಷ್ಟದ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಬಹುದೊಡ್ಡ ಸವಾಲಾಗಿತ್ತು. ಪರೀಕ್ಷೆ ನಮಗೆ ಪ್ರತಿಷ್ಠೆಯ ಪ್ರಶ್ನೆಯಾಗದೇ ವಿದ್ಯಾರ್ಥಿಗಳ ಹಿತ ಹಾಗೂ ಸುರಕ್ಷತೆಯೇ ಮುಖ್ಯವಾಗಿತ್ತು. ಆ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ನಾವು ಸರ್ಕಾರದ ಪ್ರಯತ್ನವಾಗಿ ಬಹು ಯಶಸ್ವಿಯಾಗಿ ನಿರ್ವಹಿಸಿದ್ದೇವೆ. ಇದು ನನಗೆ ನಿಜಕ್ಕೂ ಹೆಮ್ಮೆ ಹಾಗೂ ಅಭಿಮಾನದ ಸಂಗತಿಯಾಗಿದೆ ಎಂದು ಅವರು ಹೇಳಿದರು.

      ಇತಿಹಾಸ ಸೃಷ್ಟಿ

      ಇತಿಹಾಸ ಸೃಷ್ಟಿ

      ರಾಜ್ಯ ಸರ್ಕಾರ ಪರೀಕ್ಷೆ ನಡೆಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ಪರೀಕ್ಷೆ ರದ್ದುಪಡಿಸಬೇಕೆಂದು ಕಾನೂನು ಹೋರಾಟಗಳು ನಡೆದವು. ರಾಜ್ಯಾದ್ಯಂತ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸಂಚರಿಸಿ ವಿದ್ಯಾರ್ಥಿಗಳು ಹಾಗೂ ಪಾಲಕರ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಮಾಡಿದ್ದೆ. ಭವಿಷ್ಯದ ದೃಷ್ಟಿಯಿಂದ ಪರೀಕ್ಷೆ ನಡೆಯಬೇಕು ಎಂದು ಅವರೆಲ್ಲರೂ ಅಭಿಪ್ರಾಯ ಕೊಟ್ಟಿದ್ದರು.


      ಅದೇ ಅಭಿಪ್ರಾಯವನ್ನು ನಾವು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಆಯಿತು. ಅಧಿಕಾರಿಗಳು ಕೂಡ ಅತ್ಯಂತ ಸಮರ್ಪಕವಾಗಿ ಕೆಲಸ ಮಾಡಿದ್ದಾರೆ ಎಂದರು.

      ಆರೋಗ್ಯ ಮಾರ್ಗಸೂಚಿ

      ಆರೋಗ್ಯ ಮಾರ್ಗಸೂಚಿ

      ಎಸ್‌ಎಸ್‌ಎಲ್‌ಸಿ ಪರೀಕ್ಷೆಗಾಗಿಯೇ ಆರೋಗ್ಯ ಇಲಾಖೆ ವಿಶೇಷವಾಗಿ ಕಟ್ಟಿನಿಟ್ಟಿನ ಮಾರ್ಗದರ್ಶಿ ಸೂತ್ರಗಳನ್ನು ಕೊಟ್ಟಿತು. ಆ ಮಾರ್ಗದರ್ಶಿ ಸೂತ್ರಗಳ ಮೇಲೆ ನ್ಯಾಯಾಲಯವು ಭರವಸೆಯನ್ನಿಟ್ಟು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿ ಪರೀಕ್ಷೆಗಳನ್ನು ನಡೆಸಲು ಅವಕಾಶ ಕೊಟ್ಟಿತು.

      ಅದೇ ರೀತಿ ಮುಂದಿನ ದಿನಗಳಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲೂ ಸಹ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಯಿತು. ಅಲ್ಲಿಯೂ ಸಹ ಸೂಕ್ತ ಆಕ್ಷೇಪಣಾ ಹೇಳಿಕೆಗಳನ್ನು ಸಲ್ಲಿಸಿದ ಬಳಿಕ ಸರ್ವೋಚ್ಛ ನ್ಯಾಯಾಲಯ ಪರೀಕ್ಷೆಗಳನ್ನು ನಡೆಸಲು ತನ್ನ ಹಸಿರು ನಿಶಾನೆ ತೋರಿಸಿತು ಎಂದು ಅವರು ಹೇಳಿದರು.

      ಪೋಷಕರಿಗೆ ಭರವಸೆ

      ಪೋಷಕರಿಗೆ ಭರವಸೆ

      ಪ್ರತಿ ವಿದ್ಯಾರ್ಥಿಗೆ ಪರೀಕ್ಷಾ ಕೊಠಡಿಯಲ್ಲಿ ಸುರಕ್ಷಿತ ವಾತಾವರಣವನ್ನು ನಾವು ಕಲ್ಪಿಸಬೇಕಾಗಿತ್ತು. ಪ್ರತಿ ಪೋಷಕರಿಗೆ ತಮ್ಮ ಮಗು ತಮ್ಮ ಮನೆಯಲ್ಲಿನ ಸುರಕ್ಷಿತ ವಾತಾವರಣದಷ್ಟೇ ಪರೀಕ್ಷಾ ಕೊಠಡಿ ಸುರಕ್ಷಿತವಾಗಿರುತ್ತದೆ ಎಂಬ ಭರವಸೆ ನೀಡಬೇಕಾಗಿತ್ತು.

      ನಮ್ಮ ಅಧಿಕಾರಿಗಳು ಪ್ರತಿ ಸೂಕ್ಷ್ಮ ಅಂಶಗಳನ್ನೂ ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆಯ ಮಾರ್ಗದರ್ಶಿ ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಯಾವುದೇ ಒಬ್ಬ ವಿದ್ಯಾರ್ಥಿಗೆ ತೊಂದರೆಯಾಗದ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಿತ್ತು. ನನ್ನ ಭರವಸೆಯನ್ನು ಅವರು ಹುಸಿಗೊಳಿಸಲಿಲ್ಲ ಎಂದು ಸಚಿವ ಸುರೇಶ ಕುಮಾರ್ ತಮ್ಮ ಅನುಭವ ಹಂಚಿಕೊಂಡರು.

      ಶೇ. 98ರಷ್ಟು ಹಾಜರಾತಿ

      ಶೇ. 98ರಷ್ಟು ಹಾಜರಾತಿ

      ಪರೀಕ್ಷೆಗೆ ಸರಾಸರಿ ಶೇಕಡಾ 98ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ನೆರೆ ರಾಜ್ಯಗಳಾದ ತಮಿಳುನಾಡು, ತೆಲಂಗಾಣ, ಆಂದ್ರಪ್ರದೇಶ, ಪುದುಚೆರಿ, ಮಹಾರಾಷ್ಟ್ರಗಳು ಸೇರಿದಂತೆ ಬಹುಪಾಲು ರಾಜ್ಯ ಸರ್ಕಾರಗಳು ತಮ್ಮ ಮಂಡಳಿಗಳ ಪರೀಕ್ಷೆಗಳನ್ನು ಮಾಡದೇ ಹಿಂದೆ ಸರಿದವು. ನಾಡಿನ ಮಕ್ಕಳ ಹಿತ ಮತ್ತು ಅವರ ಭವಿಷ್ಯವನ್ನು ಗಮನದಲ್ಲಿಟುಕೊಂಡು ಅವರ ಇಚ್ಛೆಯಂತೆ ನಾವು ಪರೀಕ್ಷೆಗಳನ್ನು ನಡೆಸಿದ್ದೇವೆ ಎಂದು ಸುರೇಶ್ ಕುಮಾರ್ ವಿವರಿಸಿದರು.

      ಕೋವಿಡ್ ಸೋಂಕಿತ 33 ವಿದ್ಯಾರ್ಥಿಗಳಿಗೆ ಪೂರ್ವಭಾವಿಯಾಗಿ ಪರೀಕ್ಷೆಯನ್ನು ನಿರಾಕರಿಸಿ ಅವರಿಗೆ ಮುಂದಿನ ಪೂರಕ ಪರೀಕ್ಷೆಗಳಲ್ಲಿ ಅವಕಾಶಗಳನ್ನು ಕಲ್ಪಿಸುವವರಿದ್ದೇವೆ.

      ಎಸ್‍ಒಪಿ ಕಟ್ಟುನಿಟ್ಟಿನ ಪಾಲನೆ

      ಎಸ್‍ಒಪಿ ಕಟ್ಟುನಿಟ್ಟಿನ ಪಾಲನೆ

      ಎಸ್‍ಒಪಿ ಪ್ರಕಾರ ಕೋವಿಡ್ ಸೋಂಕು ಇರುವ ಮನೆಗಳ ಮಕ್ಕಳಿಗೆ ಪರೀಕ್ಷೆಗೆ ಅವಕಾಶವಿರಲಿಲ್ಲ. ಅದರಂತೆ ಕೊನೆಯ ದಿನವಾದ ಇಂದು ರಾಜ್ಯದ ಹಿರಿಯ ಅಧಿಕಾರಿಯೊಬ್ಬರ ಮನೆಯಲ್ಲಿ ಒಬ್ಬರಿಗೆ ಸೋಂಕು ತಗಲಿದ್ದರಿಂದ ಇಂದು ಅವರ ಮನೆಯ ವಿದ್ಯಾರ್ಥಿಗೆ ಪರೀಕ್ಷೆ ನಿರಾಕರಿಸಲಾಯಿತು. ಈ ವಿಚಾರದಲ್ಲಿ ಕಳೆದ ಆರು ದಿನಗಳಲ್ಲಿಯೂ ಯಾವುದೇ ರೀತಿಯ ವ್ಯತ್ಯಯವಾಗದಂತೆ ನ್ಯಾಯಾಲಯಕ್ಕೆ ನೀಡಿದ ವಾಗ್ದಾನದಂತೆ ಕಟ್ಟುನಿಟ್ಟಾಗಿ ನಡೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

      ಪರೀಕ್ಷೆ ಆರಂಭವಾದ ಮೇಲೆ ತಾವು ಹಲವಾರು ಜಿಲ್ಲೆಗಳ 80ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದೇನೆ. ಎಲ್ಲಿಯೂ ಸಹ ನ್ಯಾಯಾಲಯಕ್ಕೆ ನೀಡಿದ ಎಸ್‍ಒಪಿಯನ್ನು ಯಾವುದೇ ಕಾರಣಕ್ಕೂ ಉಲ್ಲಂಘನೆಯಾಗಿಲ್ಲ.

      ಈ ಪರೀಕ್ಷೆಯ ಯಶಸ್ಸು ಈ ಸಂದರ್ಭದಲ್ಲೂ ಧೈರ್ಯವಾಗಿ ಬಂದು ಪರೀಕ್ಷೆ ಬರೆದ ಮಕ್ಕಳು ಮತ್ತು ನಮ್ಮ ಮೇಲೆ ಭರವಸೆ ಇಟ್ಟು ಮಕ್ಕಳನ್ನು ಆಶೀರ್ವದಿಸಿ ಕಳಿಸಿದ ಪೋಷಕರಿಗೆ ಸಲ್ಲಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

      ಇಂದಿನ ಪರೀಕ್ಷೆ

      ಇಂದಿನ ಪರೀಕ್ಷೆ

      ಏಳನೇ ದಿನವಾದ ಶುಕ್ರವಾರ ನಡೆದ ತೃತೀಯ ಭಾಷಾ ಪರೀಕ್ಷೆಗೆ ನೊಂದಾಯಿತ 7,76,251 ವಿದ್ಯಾರ್ಥಿಗಳ ಪೈಕಿ 7,61,506 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟಾರೆ ಶೇ. 98.10ರಷ್ಟು ಇಂದು ಹಾಜರಾತಿ ಇದೆ. 14,745 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. (ಕಳೆದ 2018-19ನೇ ಸಾಲಿಗೆ 7,72,071 ವಿದ್ಯಾರ್ಥಿಗಳ ಪೈಕಿ 7,62,538 ವಿದ್ಯಾರ್ಥಿಗಳು ಹಾಜರಾಗಿದ್ದು, 9533 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಶೇ. 98.76 ಹಾಜರಾತಿ ಇತ್ತು.)

      ಪರೀಕ್ಷಾ ಅಂಕಿ-ಅಂಶ

      ಪರೀಕ್ಷಾ ಅಂಕಿ-ಅಂಶ

      ಈ ಬಾರಿ 7,43,477 ಸಾಮಾನ್ಯ ವಿದ್ಯಾರ್ಥಿಗಳು ಹಾಗೂ 20,857 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಂಟೈನ್ಮೆಂಟ್ ಪ್ರದೇಶಗಳ 3911 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡ್-19 ಹೊರತು ಪಡಿಸಿ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 863 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ ಯಾವುದೇ ವಿದ್ಯಾರ್ಥಿಗಳು ಇರುವುದಿಲ್ಲ.

      ಸರ್ಕಾರಿ/ಖಾಸಗಿ ವಸತಿ ನಿಲಯಗಳಲ್ಲಿ ಇದ್ದು, 1446 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯಗಳಿಂದ 639 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, 41 ವಿದ್ಯಾರ್ಥಿಗಳು ಗೈರು ಹಾಜರಿಯಾಗಿ 590 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 12,644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, 12,535 ವಿದ್ಯಾರ್ಥಿಗಳು ಹಾಜರಾಗಿದ್ದರೆ, 109 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

      ಹೋಂ ಕ್ವಾರಂಟೈನಲ್ಲಿರುವ ಹಾಗೂ ಕೋವಿಡ್ ಪಾಸಿಟೀವ್ ಎಂದು ಗುರುತಿಸಲಾದ ವಿದ್ಯಾರ್ಥಿಗಳಿಗೆ ಈಗಿನ ಪರೀಕ್ಷೆಯನ್ನು ಬರೆಯುವುದರಿಂದ ವಿನಾಯ್ತಿ ನೀಡಲಾಗಿದೆ. ಈ ಎಲ್ಲರಿಗೂ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು.

      ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಆನೇಕಲ್, ಅತ್ತಿಬೆಲೆ, ದೊಮ್ಮಸಂದ್ರ, ಚಂದಾಪುರ, ಜಿಗಣಿ, ಹೆಬ್ಬಗೋಡಿ 12 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಎಲ್ಲ ವ್ಯವಸ್ಥೆಗಳನ್ನು ಗಮನಿಸಿದ್ದೇನೆ. ಎಲ್ಲ ಕಡೆ ಅಚ್ಚುಕಟ್ಟಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಕ್ಕಳು ನೆಮ್ಮದಿ ಮತ್ತು ಆಹ್ಲಾದಕರ ವಾತಾವರಣದಲ್ಲಿ ಪರೀಕ್ಷೆ ಬರೆಯುತ್ತಿದ್ದುದು ಕಂಡುಬಂತು.

      ಪ್ರಮುಖ ಸಂಗತಿಗಳು

      ಪ್ರಮುಖ ಸಂಗತಿಗಳು

      ಗದಗದಲ್ಲಿ ಮಕ್ಕಳನ್ನು ಮನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಕರೆತರುತ್ತಿದ್ದ ಆಟೋ ಚಾಲಕರನ್ನು ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

      ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾರ್ಗ ಮಧ್ಯೆ ಮರ ಬಿದ್ದು, ಸಂಚಾರಕ್ಕೆ ವ್ಯತ್ಯಯವಾಗಿತ್ತು. ಸುದ್ದಿ ತಿಳಿದ ಸಾಗರ ಬಿಇಒ ಮಕ್ಕಳನ್ನು ಕರೆತರಲು ತಕ್ಷಣವೇ ಸಾರಿಗೆ ವ್ಯವಸ್ಥೆ ಮಾಡಿದರು. ಹಾಗೆಯೇ ಆ ಮಾರ್ಗದ ಪರೀಕ್ಷಾ ಕೇಂದ್ರಗಳಿಗೆ ತಮ್ಮದೇ ವಾಹನದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಕಾಲದಲ್ಲಿ ತಲುಪಿಸಿದರು.

      ಒಟ್ಟಾರೆಯಾಗಿ ಇಂದು 2879 ಪರೀಕ್ಷಾ ಕೇಂದ್ರಗಳು ಮತ್ತು 330 ಬ್ಲಾಕ್ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್, ಸ್ವಯಂ ಸೇವಕರು ಅತ್ಯಂತ ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಂಡು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ವ್ಯವಸ್ಥೆ ಮೇಲೆ ಇಟ್ಟ ವಿಶ್ವಾಸಕ್ಕೆ ನಾನು ಆಭಾರಿಯಾಗಿದ್ದೇನೆ ಎಂದ ಸಚಿವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

      ಪರೀಕ್ಷಾ ಫಲಿತಾಂಶ

      ಪರೀಕ್ಷಾ ಫಲಿತಾಂಶ

      ಎಸ್ಎಸ್ಎಲ್‌ಸಿ ಮೌಲ್ಯಮಾಪನವನ್ನು ಜುಲೈ 13 ರಿಂದ ಪ್ರಾರಂಭವಾಗಲಿದೆ. ಮೌಲ್ಯಮಾಪಕ ಪ್ರಕ್ರಿಯೆ ಜುಲೈ 30ಕ್ಕೆ ಮುಕ್ತಾಯ ಆಗುತ್ತದೆ. ಮೌಲ್ಯಮಾಪನಕ್ಕೆ 55 ವರ್ಷ ಮೀರಿದ ಶಿಕ್ಷಕರಿಗೆ ಹಾಗೂ ವಿಶೇಷ ಕಾಯಿಲೆ ಇರೋರಿಗೆ ಮೌಲ್ಯಮಾಪನದಿಂದ ವಿನಾಯ್ತಿ ಕೊಡಲಾಗಿದೆ. ವಿಮಾ ಯೋಜನೆಯ ಬಗ್ಗೆ ಶಿಕ್ಷಕರ ಜೊತೆ ಮಾತಾನಾಡುತ್ತೇವೆ.

      ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಎಲ್‌ಸಿ ಫಲಿತಾಂಶ ಹಾಗೂ ಜುಲೈ 3ನೇ ವಾರದಲ್ಲಿ ಪಿಯುಸಿ ರಿಸಲ್ಟ್ ಕೊಡುತ್ತೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+