ಎಸ್ಎಸ್ಎಲ್ ಸಿ ಪರೀಕ್ಷೆ2021: ಸುರಕ್ಷತಾ ಮಾರ್ಗಸೂಚಿ ಪ್ರಕಟ
ಬೆಂಗಳೂರು,ಜು. 14: ರಾಜ್ಯದಲ್ಲಿ ಜು. 19 ಮತ್ತು 22 ರಂದು ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಕೈಗೊಳ್ಳುವ ಸಂಬಂಧ ಸುರಕ್ಷತಾ ನಿಯಮ ಬಿಡುಗಡೆ ಮಾಡಿದೆ. ಕೊರೊನಾ ನಡುವೆಯೂ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಎರಡು ದಿನಕ್ಕೆ ಸೀಮಿತಗೊಳಿಸಲಾಗಿದೆ. ಇದರ ನಡುವೆ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮ ಬಗ್ಗೆ ಶಾಲಾ ಮುಖ್ಯಸ್ಥರಿಗೆ ಸುತ್ತೋಲೆ ಹೊರಡಿಸಲಾಗಿದೆ.
ರಾಜ್ಯದಲ್ಲಿ ಸುಮಾರು ಎಂಟೂವರೆ ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಅದರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. ಎರಡು ದಿನ ಪರೀಕ್ಷೆ ನಡೆಯಲಿದ್ದು, ಮೂರು ವಿಷಯಗಳಿಗೆ ಒಂದೇ ಪ್ರಶ್ನೆ ಪತ್ರಿಕೆ ನೀಡುತ್ತಿದ್ದು ಮೂರು ಗಂಟೆ ಕಾಲ ಪರೀಕ್ಷೆ ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಜು.18 ರೊಳಗೆ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ವಚ್ಛಗೊಳಿಸಲು ಸೂಚಿಸಲಾಗಿದೆ.
ಅದರಲ್ಲಿ ಎಲ್ಲಾ ಪರೀಕ್ಷಾ ಕೇಂದ್ರ ಹಾಗು ಶೌಚಾಲಯಗಳನ್ನು ಸೋಡಿಯಂ ಹೈಪೊಕ್ಲೋರೇಟ್ ಸಲ್ಯೂಷನ್ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ಪರೀಕ್ಷೆ ಮುನ್ನ ಹಾಗೂ ಪರೀಕ್ಷೆ ನಂತರ ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳನ್ನು ಹಾಗೂ ಹೆಚ್ಚು ಸಂಪರ್ಕಕ್ಕೆ ಒಳಪಡುವ ಪೀಠೋಪಕರಣಗಳನ್ನು ಸ್ಯಾನಿಟೈಸ್ ಮಾಡಬೇಕು. ಪರೀಕ್ಷಾ ಕೇಂದ್ರದ ಸುತ್ತ ಮುತ್ತ ಧೂಮೀಕರಣ, ಸೋಂಕು ನಿವಾರಕ ಸಿಂಪಡಣೆ ಮಾಡಬೇಕು. ಪರೀಕ್ಷಾ ಕೇಂದ್ರದ ಶೌಚಾಲಯ ಶುದ್ಧಗೊಳಿಸಬೇಕು. ಮಕ್ಕಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮ ಜರುಗಿಸಬೇಕು ಎಂದು ಸೂಚಿಸಲಾಗಿದೆ.