SSLC 2021: ಜುಲೈ 15 ಹಾಗೂ 17ರಂದು ಅಣಕು ಪರೀಕ್ಷೆ
ಬೆಂಗಳೂರು, ಜುಲೈ 7: ಎಸ್ಎಸ್ಎಲ್ಸಿ ಅಣಕು ಪರೀಕ್ಷೆಯನ್ನು ಇದೇ ಜುಲೈ 15 ಹಾಗೂ 17ರಂದು ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ, ಶಿಕ್ಷಕರಿಗೆ ಲಸಿಕೆ ನೀಡಲಾಗಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪರೀಕ್ಷಾ ಸಿದ್ಧತೆ, ಸಿಬ್ಬಂದಿ ಲಸಿಕೆ ಪಡೆದಿರುವುದು, ಸ್ಥಳೀಯ ಹಂತದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಸಭೆಗಳ ಮಾಹಿತಿ, ಸ್ವಯಂ ಸೇವಕರ ನೇಮಕ, ಮಾಸ್ಕ್ ಸ್ಯಾನಿಟೈಸರ್ ವ್ಯವಸ್ಥೆ, ಎಸ್ಒಪಿ ಕುರಿತು ಎಲ್ಲಾ 34 ಶೈಕ್ಷಣಿಕ ಜಿಲ್ಲೆಗಳ ಡಿಡಿಪಿಐಗಳಿಂದ ಸಚಿವರು ಮಾಹಿತಿ ಪಡೆದಿದ್ದಾರೆ.

ಜಿಲ್ಲಾ ಶೈಕ್ಷಣಿಕ ಉಪನಿರ್ದೇಶಕರು ಮತ್ತು ಬಿಇಒ ಜತೆ ವಿಡಿಯೋ ಸಂವಾದ ನಡೆಸಿ ಸಿದ್ಧತೆಯ ಪರಿಶೀಲನೆ ನಡೆಸಿದರು, ಇದೇ 15 ಹಾಗೂ 17ರಂದು ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಅಣಕು ಪರೀಕ್ಷೆ ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳು ಅಂತರ ಕಾಪಾಡಿಕೊಳ್ಳುವಂತೆ ನಿಗಾವಹಿಸಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ರೂಪಿಸಲಾಗಿರುವ ಕೊರೊನಾ ಮಾರ್ಗಸೂಚಿಗಳನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತದೆ.
ಯಾವುದಾದರೂ ವಿದ್ಯಾರ್ಥಿಗಳಲ್ಲಿ ಕೋವಿಡ್-19 ರೋಗಲಕ್ಷಣಗಳು ಕಂಡುಬಂದಲ್ಲಿ ಅಂತಹವರಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲು ಇಚ್ಛಿಸಿದ್ದಲ್ಲಿ ಹತ್ತಿರದ ಕೋವಿಡ್ ಕೇರ್ ಸೆಂಟರ್ ನಲ್ಲಿ ಅವರು ಪರೀಕ್ಷೆ ಬರೆಯಬಹುದು. ಈ ನಿರ್ಣಾಯಕ ಪರೀಕ್ಷೆಯನ್ನು ಏರ್ಪಡಿಸಲು ಸರ್ಕಾರ ಅಗತ್ಯ ಮುಂಜಾಗೃತಾ ಕ್ರಮಗಳೊಂದಿಗೆ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
'ಪರೀಕ್ಷೆಗಳನ್ನು ನಡೆಸುವುದು ವಿದ್ಯಾರ್ಥಿಗಳಿಗೆ ಶಿಕ್ಷೆಯಲ್ಲ, ಆದರೆ ಭವಿಷ್ಯದಲ್ಲಿ ಅವರು ವೃತ್ತಿಜೀವನ ರೂಪಿಸಿಕೊಳ್ಳಲು, ತಮಗಿಷ್ಟವಾದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಈ ನಿರ್ಣಾಯಕ ಪರೀಕ್ಷೆ ಸಹಕಾರಿಯಾಗಿದೆ. ಹೀಗಾಗಿ ಕೊರೊನಾ ಸಂಕಷ್ಟದ ನಡುವೆಯೂ ಪರೀಕ್ಷೆಗೆ ಸರ್ಕಾರ ಸಿದ್ಧತೆ ಮಾಡುತ್ತಿದೆ. ಕಳೆದ ವರ್ಷದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಎಸ್ಎಸ್ಎಲ್ಸಿಗೆ ಬಡ್ತಿ ಪಡೆದುಕೊಂಡಿದ್ದಾರೆ.
ಹೀಗಾಗಿ ನಾವು ಈ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಬೇಕಾದ ಅನಿರ್ವಾಯತೆ ಎದುರಾಗಿದೆ. ಪರೀಕ್ಷೆಯಿಲ್ಲದೆ ಮುಂದಿನ ತರಗತಿಗಳಿಗೆ ಬಡ್ತಿ ನೀಡುವುದು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಉತ್ತಮವಲ್ಲವೆಂದು ಹೇಳಿದ್ದಾರೆ.












Click it and Unblock the Notifications