SSLC 2021: ಧೈರ್ಯವಾಗಿ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಲಹೆ !
ಬೆಂಗಳೂರು, ಜು. 18: ರಾಜ್ಯದಲ್ಲಿ ನಾಳೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ ತಯಾರಿ ಹಾಗೂ ಸುರಕ್ಷತಾ ಕ್ರಮ ಬಗ್ಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ. ಸುಮಂಗಳಾ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಕೋವಿಡ್ ಮಾರ್ಗದರ್ಶಿಯಂತೆ ಸುರಕ್ಷತಾ ನಿಯಮದೊಂದಿಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ. ಪೋಷಕರು ಧೈರ್ಯವಾಗಿ ಮಕ್ಕಳನ್ನು ಪರೀಕ್ಷೆಗೆ ಕಳುಹಿಸುವಂತೆ ಸಲಹೆ ಮಾಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ. ಸುಮಂಗಳಾ, ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಹೆಚ್ಚುವರಿಯಾಗಿ 32 ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ. ಕೋವಿಡ್ ಸೋಂಕಿನ ಬಗ್ಗೆ ಪೋಷಕರು ಭಯ ಪಡುವ ಅಗತ್ಯವಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಆಯೋಜಿಸಲಾಗಿದೆ ಎಂದು ಹೇಳಿದರು.
SSLC ಪರೀಕ್ಷೆ ಬರೆಯುವ ಪ್ರತಿ ವಿದ್ಯಾರ್ಥಿ ತಿಳಿಯಲೇಬೇಕಾದ ಮಾಹಿತಿ!
ಎಸ್ಎಸ್ಎಲ್ಸಿ ಪರೀಕ್ಷೆಗೆ 1.32 ಲಕ್ಷ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಳೆ ಹಿನ್ನೆಲೆಯಲ್ಲಿ ಅನುಕೂಲ ಎಲ್ಲಾ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷಾ ಕೇಂದ್ರಕ್ಕೆ ಬರಲು ವ್ಯವಸ್ಥೆ ಮಾಡಲಾಗಿದೆ. ಮಳೆಯಿಂದ ಸಮಸ್ಯೆ ಎದುರಿಸುತ್ತಿರುವ ಪರೀಕ್ಷಾ ಕೇಂದ್ರಗಳ ಬಗ್ಗೆ ಸೂಕ್ತ ಕ್ರಮ ವಹಿಸಲು ಸಂಬಂಧ ಪಟ್ಟ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಉಚಿತ ಸೌಲಭ್ಯ ಕಲ್ಪಿಸಲಾಗಿದೆ. ಪರೀಕ್ಷಾ ಪ್ರವೇಶ ಪತ್ರ ತೋರಿಸುವ ಮೂಲಕ ವಿದ್ಯಾರ್ಥಿಗಳು ಸಂಚರಿಸಬಹುದು ಎಂದು ಎಂದು ಅವರು ಹೇಳಿದ್ದಾರೆ.
Recommended Video
ರಾಜ್ಯದಲ್ಲಿ ಈ ವರ್ಷ 8.71 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದು ನಾಲ್ಕು ಸಾವಿರಕ್ಕೂ ಅಧಿಕ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ. ಶೇ. 100 ರಷ್ಟು ಹಾಲ್ ಟಿಕೆಟ್ ವಿತರಣೆ ಮಾಡಲಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಧೈರ್ಯವಾಗಿ ಪರೀಕ್ಷೆ ಎದುರಿಸಬೇಕು ಎಂದು ಇದೇ ವೇಳೆ ಸ್ಪಷ್ಟನೆ ನೀಡಿದರು.