ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ; ಹಿಜಾಬ್ಗೆ ಅವಕಾಶವಿಲ್ಲ
ಬೆಂಗಳೂರು, ಮಾರ್ಚ್ 27; ಸೋಮವಾರದಿಂದ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿವೆ. ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಶಿಕ್ಷಣ ಇಲಾಖೆ ಪಾಲನೆ ಮಾಡಲಿದೆ. ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರದೊಳಗೆ ಹೋಗುವಂತಿಲ್ಲ.
15,387 ಶಾಲೆಗಳ 8,73,846 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆ ಬರೆಯಲಿದ್ದಾರೆ. ಹಿಜಾಬ್ ಧರಿಸಿದವರನ್ನು ಪರೀಕ್ಷಾ ಕೇಂದ್ರಕ್ಕೆ ಬಿಡದಿರಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಹಿಜಾಬ್ ಬೇಕು ಎನ್ನುವವರು ಪರೀಕ್ಷೆಯಿಂದ ಹೊರಗುಳಿಯಲಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಕುರಿತು ಮಾತನಾಡಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್, "ಸೋಮವಾರ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ. ಆದರೆ ಯಾವುದೇ ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರ ಧರಿಸಲು ಬರಲು ಅವಕಾಶವಿಲ್ಲ" ಎಂದು ಸ್ಪಷ್ಟಪಡಿಸಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗುತ್ತಿದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವುದೇ ಆತಂಕವಿಲ್ಲದೆ, ಮುಕ್ತವಾಗಿ, ಧೈರ್ಯವಾಗಿ ಬರೆಯಬೇಕು" ಎಂದು ಕರೆ ನೀಡಿದರು.

ಪರೀಕ್ಷೆ ಬರೆಯುವವರ ವಿವರ
8,73,846 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿಗಳು. 3,444 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. 45,289 ಪರೀಕ್ಷಾ ಕೊಠಡಿಗಳು, 3,444 ಮುಖ್ಯ ಅಧೀಕ್ಷಕರು, 377 ಉಪ ಮುಖ್ಯ ಅಭಿರಕ್ಷಕರು, 49,817 ಕೊಠಡಿ ಮೇಲ್ವಿಚಾರಕರನ್ನು ಪರೀಕ್ಷಾ ಕಾರ್ಯಗಳಿಗಾಗಿ ನಿಯೋಜನೆ ಮಾಡಲಾಗಿದೆ.

ಹಿಜಾಬ್ ಧರಿಸುವಂತಿಲ್ಲ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಪರೀಕ್ಷೆ ಕುರಿತು ಮಾತನಾಡಿದ್ದು, "ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಈಗಾಗಲೇ ಆಯಾ ಶಾಲೆಗಳ ಮುಖ್ಯಸ್ಥರು ಪಾಲಿಸುತ್ತಿದ್ದಾರೆ. ಶಾಲೆಯ ಕಾಪೌಂಡ್ ಒಳಗೆ ಹಿಜಾಬ್ ಧರಿಸಿ ಬರಬಹುದು. ಆದರೆ ಕೊಠಡಿಯೊಳಗೆ ಧರಿಸಲು ಅವಕಾಶವಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ಮರು ಪರೀಕ್ಷೆ ಮಾಡುವುದಿಲ್ಲ
"ಯಾವುದೇ ಉದ್ದೇಶದಿಂದ ಪರೀಕ್ಷೆಗೆ ಗೈರು ಹಾಜರಿ ಆದವರಿಗೆ ಮರು ಪರೀಕ್ಷೆ ಮಾಡುವುದಿಲ್ಲ. ಬದಲಿಗೆ ಪೂರಕ ಪರೀಕ್ಷೆ ಬರೆಯಬಹುದು" ಎಂದು ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ.
ಈ ಮೂಲಕ ಪರೀಕ್ಷಾ ಕೇಂದ್ರದೊಳಗೆ ಹಿಜಾಬ್ ಧರಿಸಲು ಅವಕಾಶ ಕೋರಿ ಪ್ರತಿಭಟನೆ ನಡೆಸಲು ಪರೀಕ್ಷೆಗೆ ಗೈರಾದರೆ ಅಂತಹ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ನಡೆಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
|
ಶಿಕ್ಷಣ ಇಲಾಖೆಯಿಂದ ಆದೇಶ
ಇನ್ನು ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಕುರಿತು ವಿ. ಶ್ರೀನಿವಾಸಮೂರ್ತಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಇವರು ಆದೇಶ ಹೊರಡಿಸಿದ್ದಾರೆ.

ಸಹಾಯವಾಣಿ ಆರಂಭ
ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಗೊಂದಲಗಳು ಉಂಟಾದರೆ ಸಹಾಯ ಮಾಡಲು ಸಹಾಯವಾಣಿ ಆರಂಭಿಸಲಾಗಿದೆ. 080-23310075/ 76 ಸಂಖ್ಯೆಗೆ ವಿದ್ಯಾರ್ಥಿಗಳು ಕರೆ ಮಾಡುವ ಮೂಲಕ ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದು.
ಕೋವಿಡ್ ಪ್ರಕರಣಗಳು ಕಡಿಮೆಯಾಗಿರುವ ಕಾರಣ ಮಾಸ್ಕ್ ಧರಿಸದಿದ್ದರೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲು ತೀರ್ಮಾನಿಸಲಾಗಿದೆ. ಮಾರ್ಚ್ 28ರಿಂದ ಏಪ್ರಿಲ್ 11ರ ತನಕ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ.

ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣ
ಎಸ್ಎಸ್ಎಲ್ಸಿ ಅಂತಿಮ ಪರೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಪರೀಕ್ಷೆಗಳು ನಡೆಯುವ ದಿನಗಳಂದು ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ ಕುರಿತು ಈಗಾಗಲೇ ಚಾಲಕ, ನಿರ್ವಾಹಕರಿಗೂ ಸಹ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ವಾಪಸ್ ಆಗುವಾಗ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.












Click it and Unblock the Notifications