2020-21ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ!
ಬೆಂಗಳೂರು, ಜ. 28: ಕೊರೊನಾ ವೈರಸ್ ಎಲ್ಲ ಕ್ಷೇತ್ರಗಳ ಮೇಲೆ ದಾಳಿ ಮಾಡಿತ್ತು. ಅದಕ್ಕೆ ಶೈಕ್ಷಣಿಕ ಕ್ಷೇತ್ರವೂ ಹೊರತಾಗಿರಲಿಲ್ಲ. ಇದೀಗ ಎಲ್ಲವೂ ಸಾಮಾನ್ಯ ಸ್ಥಿತಿಗೆ ಬರುತ್ತಿದೆ. ಹೀಗಾಗಿ ರಾಜ್ಯ ಶಿಕ್ಷಣ ಇಲಾಖೆ ಕುಂಠಿತಗೊಂಡಿರುವ ಶೈಕ್ಷಣಿಕ ಚಟುವಟಿಕೆಗಳನ್ನು ಪುನರಾರಂಭಿಸಲು ತೀರ್ಮಾನ ತೆಗೆದುಕೊಂಡಿದೆ. ಕಳೆದ ತಿಂಗಳು (ಜನವರಿ 1) ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಜೊತೆಗೆ ಇದೇ ಫೆಬ್ರುವರಿ 1 ರಿಂದ 9ನೇ ತರಗತಿ ಹಾಗೂ 11ನೇ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ.
ಕೊರೊನಾ ವೈರಸ್ನಿಂದ ಶೈಕ್ಷಣಿಕ ಚಟುವಟಿಕೆಗಳು ಕುಂಠಿತಗೊಂಡಿದ್ದರೂ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಈಗ ಸಿಗುವ ಅವಧಿಯಲ್ಲಿಯೇ ಪಾಠ ಮಾಡುವ ಮೂಲಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಜನವರಿ 1 ರಿಂದ ಎಸ್ಎಸ್ಎಲ್ಸಿ ತರಗತಿಗಳು ಆರಂಭವಾಗಿದ್ದು, ಇಂದು (ಜನವರಿ 28) ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು 2020-21ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಎಸ್ಎಸ್ಎಲ್ಸಿ ವೇಳಾಪಟ್ಟಿ ಈ ಮುಂದಿನಂತಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಸಚಿವ ಸುರೇಶ್
ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕ
ಐದು ತಿಂಗಳುಗಳ ಅವಧಿಯಲ್ಲಿ ಎಸ್ಎಸ್ಎಲ್ಸಿ ಪಠ್ಯಕ್ರಮ (syllabus)ವನ್ನು ಮುಗಿಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಮುಖ್ಯವಾದ ಪಾಠಗಳನ್ನು ಮಾದರಿಯಾಗಿಟ್ಟುಕೊಂಡು ಬೋಧನೆ ಮಾಡಲಾಗುತ್ತಿದೆ. ಜನವರಿ 1 ರಂದು ಆರಂಭವಾಗಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಬರುವ ಜೂನ್ ಮೊದಲ ವಾರದಲ್ಲಿ ವಾರ್ಷಿಕ ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಲಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ ಪರೀಕ್ಷೆ ವೇಳಾಪಟ್ಟಿ ಹೀಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಸ್ಎಸ್ಎಲ್ಸಿ ವೇಳಾಪಟ್ಟಿಯನ್ನು ಪ್ರಕಟ ಮಾಡಿದ್ದಾರೆ. 2021ನೇ ಜೂನ್ 14ರಿಂದ ಜೂನ್ 25ರವರಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ.
*
ಜೂನ್
14
-
ಪ್ರಥಮ
ಭಾಷೆ,
* ಜೂನ್ 16 - ಗಣಿತ
* ಜೂನ್ 18 - ದ್ವಿತೀಯ ಭಾಷೆ
* ಜೂನ್ 21 - ವಿಜ್ಞಾನ
* ಜೂನ್ 23 - ತೃತೀಯ ಭಾಷೆ
* ಜೂನ್ 25 - ಸಮಾಜ ವಿಜ್ಞಾನ ಪತ್ರಿಕೆಗಳ ಪರೀಕ್ಷೆಗಳು ನಡೆಯಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ
ದ್ವಿತೀಯ ಪಿಯು ಪರೀಕ್ಷೆಗಳ ವೇಳಾಪಟ್ಟಿಯನ್ನು ಸಹ ಅಂತಿಮಗೊಳಿಸಲಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಪಿಯುಸಿ ಪರೀಕ್ಷೆ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ರೆಗ್ಯುಲರ್ ತರಗತಿಗಳು ಜನವರಿ 1 ರಿಂದ ಆರಂಭವಾಗಿದ್ದು, ಶೇಕಡಾ 75 ರಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಅವರು ಮಾಹಿತಿ ನೀಡಿದ್ದಾರೆ.
ಸಿಎಂ ಜೊತೆ ಚರ್ಚಿಸಿ ಶುಲ್ಕ ನಿಗದಿ
ಶಾಲಾ ಶುಲ್ಕ ನಿಗದಿ ಕುರಿತಂತೆ ಹಲವು ಸುತ್ತಿನ ಚರ್ಚೆಗಳು ನಡೆದಿದ್ದು, ಅಂತಿಮವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಜೊತೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದು ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಮಕ್ಕಳ ಪೋಷಕರೊಂದಿಗೆ ನಾವು ಸದಾ ನಿಂತಿದ್ದೇವೆ. ಶುಲ್ಕ ತೆಗೆದುಕೊಳ್ಳಬಾರದು ಎಂದು ಮೊದಲು ಸೂಚಿಸಲಾಗಿತ್ತು. ಆ ನಂತರ ಒಂದು ಬಾರಿ ದಾಖಲಾತಿಗೆ ಶುಲ್ಕ ತೆಗೆದುಕೊಳ್ಳಬೇಕು ಎಂದು ಸರ್ಕಾರ ಸೂಚಿಸಿತ್ತು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.