ಬೆಂಗಳೂರಲ್ಲಿ ಬಿಜೆಪಿ ಕಾರ್ಯಕಾರಣಿ, ವಿವರಗಳು
ಬೆಂಗಳೂರು, ಏ. 1 : ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಉದ್ಯಾನ ನಗರಿ ಬೆಂಗಳೂರು ಸಜ್ಜಾಗಿದೆ. ಗುರುವಾರ ಮಧ್ಯಾಹ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಬಿಜೆಪಿಯ ಪ್ರಮುಖ ನಾಯಕರು ಸಭೆ ನಡೆಸುತ್ತಿದ್ದಾರೆ.
ಬುಧವಾರ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುವ ಲಲಿತ್ ಅಶೋಕ್ ಹೋಟೆಲ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಸಭೆಯ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕದಲ್ಲಿ ನಡೆಯುತ್ತಿರುವ 5ನೇ ಸಭೆ ಇದಾಗಿದ್ದು ಹಿಂದೆ 1982, 1993, 1999 ಹಾಗೂ 2008 ರಲ್ಲಿ ಸಭೆ ನಡೆದಿತ್ತು ಎಂದರು.

ಗುರುವಾರ ಬೆಳಗ್ಗೆ 10 ರಾಷ್ಟ್ರೀಯ ಪದಾಧಿಕಾರಿಗಳು, ವಿವಿಧ ರಾಜ್ಯಗಳ ಅಧ್ಯಕ್ಷರ ಸಭೆ ನಡೆಯಲಿದೆ. ಇಡೀ ದಿನದ ಸಭೆಯು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಯಲಿದೆ. ಸಂಜೆ 4 ಗಂಟೆಗೆ ನರೇಂದ್ರ ಮೋದಿ ಸಭೆಗೆ ಆಗಮಿಸಲಿದ್ದಾರೆ ಎಂದು ತಿಳಿಸಿದರು. [ಬೆಂಗಳೂರಿಗೆ ಮೋದಿ : ಕಾರ್ಯಕ್ರಮಗಳು, ಭದ್ರತೆ]
ಏ.3ರ ಶುಕ್ರವಾರ : ಶುಕ್ರವಾರ ಬೆಳಗ್ಗೆ 10 ಗಂಟೆಗೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಲಿದೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಮುರುಳಿ ಮನೋಹರ ಜೋಷಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೋಶಿ ಹೇಳಿದರು.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ವಿವಿಧ ರಾಜ್ಯದ ಬಿಜೆಪಿ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ರಾಷ್ಟ್ರೀಯ ಪ್ರದಾಧಿಕಾರಿಗಳು ಸೇರಿದಂತೆ 330 ನಾಯಕರು ಸಭೆಯಲ್ಲಿ ಭಾಗವಹಿಸುತ್ತಾರೆ ಎಂದು ವಿವರಣೆ ನೀಡಿದರು. [ಬಿಜೆಪಿ ಕಾರ್ಯಕಾರಣಿ, ದಕ್ಷಿಣದತ್ತ ಗಮನ]

ಶುಕ್ರವಾರ ಮೋದಿ ಸಮಾವೇಶ : ಶುಕ್ರವಾರ ಸಂಜೆ 5 ಗಂಟೆಗೆ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಆಯೋಜಿಸಲಾಗಿದ್ದು, ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಅನಂತ ಕುಮಾರ್, ರಾಜ್ಯ ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್, ಸಿ.ಟಿ.ರವಿ ಮುಂತಾದವರು ಪಾಲ್ಗೊಂಡಿದ್ದರು.












Click it and Unblock the Notifications