ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಕಣಕ್ಕೆ: ಕಮಲ-ದಳ ಮೈತ್ರಿ ಅಭ್ಯರ್ಥಿ ಯಾರು?
ಮಂಡ್ಯ, ಮಾರ್ಚ್ 09: ಲೋಕಸಭಾ ಚುನಾವಣೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ಬಿಜೆಪಿ ಹೈಕಮಾಂಡ್ 195 ಕ್ಷೇತ್ರಗಳ ಮೊದಲ ಪಟ್ಟಿ ಬಿಡುಗಡೆ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತು ಸರಣಿ ಸಭೆ ನಡೆಸಿ ಕಾಂಗ್ರೆಸ್ ಹೈಕಮಾಂಡ್ 39 ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದೆ.
ಹೌದು, ಶನಿವಾರ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್, ಅಜಯ್ ಮಕೇನ್, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಹಳೇ ಮೈಸೂರು ಭಾಗದ ಪ್ರತಿಷ್ಠಿತ ಕ್ಷೇತ್ರವಾದ ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಸ್ಟಾರ್ ಚಂದ್ರು ( ವೆಂಕಟರಮಣೇಗೌಡ) ಅವರನ್ನ ಕಾಂಗ್ರೆಸ್ ಹೈಕಮಾಂಡ್ ಕಣಕ್ಕಿಳಿಸಿದ್ದು, ಮಂಡ್ಯ ಕಾಂಗ್ರೆಸ್ ನಲ್ಲಿ ಬಿರುಸಿನ ಚಟುವಟಿಕೆ ಗರಿಗೆದರಿದೆ.

ಇತ್ತ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಸ್ಥಳೀಯ ನಾಯಕರು ಹಾಗೂ ಮುಖಂಡರ ಒಮ್ಮತದ ಅಭಿಪ್ರಾಯದ ಮೇರೆಗೆ ಕಾಂಗ್ರೆಸ್ ಹೈಕಮಾಂಡ್ ಸ್ಟಾರ್ ಚಂದ್ರು ಅವರಿಗೆ ಟಿಕೆಟ್ ನೀಡಿದೆ. ಆದರೆ, ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರವೇ ಬಿಜೆಪಿ ಹೈಕಮಾಂಡ್ ಗೂ ದೊಡ್ಡ ತಲೆನೋವಾಗಿದೆ. ಈಗಾಗಲೇ ಕಳೆದುಕೊಂಡ ಕ್ಷೇತ್ರವನ್ನ ಈ ಬಾರಿ ಪಡೆಯುವ ನಿಟ್ಟಿನಲ್ಲಿ ದಳಪತಿಗಳು ಮಾಸ್ಟರ್ ಪ್ಲಾನ್ ನಡೆಸಿದ್ದು, ಬಿಜೆಪಿ ಹೈಕಮಾಂಡ್ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ.
2019 ರ ಲೋಕಸಭಾ ಚುನಾವಣೆಯಿಂದ ರಾಜಕೀಯ ಬದ್ದವೈರಿಗಳಾದ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನಡುವೆ ಈ ಹಿಂದೆ ನಡೆದ ಸ್ವಾಭಿಮಾನಿ ಜಟಾಪಟಿ ಮುಂದುವರೆದಿದ್ದು, ಇಬ್ಬರು ಸಹ ಮಂಡ್ಯ ಟಿಕೆಟ್ ಸಿಗುವ ಭರವಸೆಯಲ್ಲಿದ್ದಾರೆ. ಈಗಾಗಲೇ ಕಳೆದ ವಿಧಾನಸಭಾ ಚುನಾವಣೆ ಹೊತ್ತಲಿ ಮಂಡ್ಯ ಹಾಲಿ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದಾರೆ. ಇತ್ತ ಬಿಜೆಪಿಗೆ ಬೆಂಬಲ ಸೂಚಿಸಿರುವ ಮೂಲ ಉದ್ದೇಶವೇ ಮುಂದಿನ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಕಾರಣಕ್ಕೆ. ಆದರೆ, ಇದೀಗ ಮೈತ್ರಿಯಾಗಿ ಮಂಡ್ಯ ಕ್ಷೇತ್ರಕ್ಕಾಗಿಯೇ ಇಬ್ಬರ ನಡುವೆ ಹಗ್ಗಜಗ್ಗಾಟ ನಡೆಸುತ್ತಿದ್ದಾರೆ.
ಈ ಹಿಂದೆ ಜೆಡಿಎಸ್ ಭದ್ರಕೋಟೆಯಾಗಿದ ಮಂಡ್ಯ ದಿನ ಕಳೆದಂತೆ ತನ್ನ ಹಿಡಿತವು ಕೈ ತಪ್ಪುತ್ತಾ ಹೋಗಿತ್ತು. ಆದರೆ ಹಳೇ ಮೈಸೂರು ಭಾಗದ ಪ್ರಮುಖ ಪ್ರತಿಷ್ಠೆಯ ಕ್ಷೇತ್ರವಾದ ಮಂಡ್ಯವನ್ನ ದಳಪತಿಗಳು ಗೆಲ್ಲುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ಅವರನ್ನ ಕಣಕ್ಕಿಳಿಸುವ ನಿಟ್ಟಿನಲ್ಲಿ ಜೆಡಿಎಸ್ ಪ್ಲಾನ್ ನಡೆಸಿದೆ ಎನ್ನಲಾಗಿದೆ. ಅಲ್ಲದೇ ಮಂಡ್ಯ ಕ್ಷೇತ್ರದ ಸ್ಥಳೀಯ ನಾಯಕರು ಸಹ ಮುಂದಿನ ದಿನದಲ್ಲಿ ಮಂಡ್ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ ಗೆಲ್ಲಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಕರೆ ತರಲು ಮುಂದಾಗಿದ್ದಾರೆ.

ಇತ್ತ ಮೊದಲ ಬಾರಿಗೆ 2019 ರ ಲೋಕಸಭಾ ಚುನಾವಣೆಯಲ್ಲಿ ಸ್ವಾಭಿಮಾನಿ ಜಟಾಪಟಿಯಲ್ಲಿ ಗೆಲುವು ಕಂಡ ಹಾಲಿ ಮಂಡ್ಯ ಸಂಸದ ಸುಮಲತಾ ಅವರು ಈಗಾಗಲೇ ಮಂಡ್ಯ ಟಿಕೆಟ್ಗಾಗಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಬಿ ಎಲ್ ಸಂತೋಷ್ ಜೊತೆಗೆ ಮಾತುಕತೆ ನಡೆಸಿದ್ದು, 100% ಅಲ್ಲ 500% ನನಗೆ ಟಿಕೆಟ್ ಸಿಗಲಿದೆ ಎಂದು ಸುಮಲತಾ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ. ಇತ್ತ ಬಹುತೇಕ ಮಂಡ್ಯ ಲೋಕಸಭಾ ಕ್ಷೇತ್ರ ದಳಪತಿಗಳ ತೆಕ್ಕೆಗೆ ಸಿಗಲಿದ್ದು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸ್ಪರ್ಧೆ ಖಚಿತ ಎನ್ನಲಾಗುತ್ತಿದ್ದು, ಮೊನ್ನೆಯಷ್ಟೇ ನಡೆದ ಮಂಡ್ಯ ಕ್ಷೇತ್ರದ ನಾಯಕರ ಸಭೆಯಲ್ಲಿ ಕುಮಾರಸ್ವಾಮಿ ಸ್ಪರ್ಧೆಗೆ ಮನಸ್ಸು ಮಾಡದ ಹಿನ್ನೆಲೆ ಸಭೆಯಲ್ಲಿ ಒಮ್ಮತದ ಅಭ್ಯರ್ಥಿಯಾಗಿ ಸಿ ಎಸ್ ಪುಟ್ಟರಾಜು ಅವರ ಹೆಸರು ಕೇಳಿ ಬಂದಿದ್ದು, ಮೈತ್ರಿ ಅಭ್ಯರ್ಥಿಯಾಗಿ ಪುಟ್ಟರಾಜು ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ.












Click it and Unblock the Notifications