ಸಂಪುಟ ವಿಸ್ತರಣೆ: ನೋಡೋಣ ಏನಾಗುತ್ತದೆಯೊ ಎಂದ ಸಿಎಂ ಯಡಿಯೂರಪ್ಪ!
ಬೆಂಗಳೂರು, ಜ. 02: ನಾಳೆ (ಜ.03) ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿಯ ಮಹತ್ವದ ಕಾರ್ಯಕಾರಣಿ ಸಭೆ ನಡೆಯಲಿದೆ. ಇದೇ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಮಧ್ಯಾಹ್ನ ಶಿವಮೊಗ್ಗಕ್ಕೆ ತೆರಳಲಿದ್ದಾರೆ. ನಾಳೆ ನಡೆಯಲಿರುವ ಕಾರ್ಯಕಾರಣಿ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಯಡಿಯೂರಪ್ಪ ಅವರು, ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಇದೆ. ಇವತ್ತು ಶಿವಮೊಗ್ಗಕ್ಕೆ ಹೋಗಿ ನಾಳೆ ಸಂಜೆ ವಾಪಾಸ್ ಬರುತ್ತೇನೆ. ರಾಜ್ಯ ಬಿಜೆಪಿ ಕಾರ್ಯಕಾರಣಿಯಲ್ಲಿ ಭಾಗವಹಿಸಲು ನಮ್ಮ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬಂದಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಇಂದು ಇಬ್ಬರೂ ಶಿವಮೊಗ್ಗಕ್ಕೆ ತೆರಳುತ್ತೆವೆ. ಶಿವಮೊಗ್ಗದಲ್ಲಿ ಕಾರ್ಯಕ್ರಮ ದಲ್ಲಿ ಭಾಗಿಯಾಗುತ್ತೇವೆ ಎಂದು ಯಡಿಯೂರಪ್ಪ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜೊತೆಗೆ ಸಂಪುಟ ವಿಸ್ತರಣೆ ಕುರಿತು ಸಿಎಂ ಮಾತನಾಡಿದ್ದಾರೆ. ಉಸ್ತುವಾರಿ ಅರುಣ್ ಸಿಂಗ್ ಅವರು ಬಂದಿರುವುದರಿಂದ ಅವರೊಂದಿಗೆ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡುತ್ತೇನೆ ಎಂದಿದ್ದಾರೆ. ಇನ್ನು ಕೊರೊನಾ ವೈರಸ್ಗೆ ಲಸಿಕೆ ಟೆಸ್ಟ್ ಡ್ರೈವ್ ಕುರಿತು ಪ್ರತಿಕ್ರಿಯೆ ಕೊಟ್ಟಿರುವ ಸಿಎಂ ಯಡಿಯೂರಪ್ಪ, ಲಸಿಕೆ ಪರೀಕ್ಷೆ ಶುರುವಾಗಿದೆ. ನೋಡೋಣ ಏನಾಗುತ್ತದೆಯೋ ಎಂದು ಹೇಳಿಕೆ ನೀಡಿದ್ದಾರೆ.
ಇವತ್ತು ಶಿವಮೊಗ್ಗಕ್ಕೆ ತೆರಳುವ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯ ಬಿಜೆಪಿಯ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದಕ್ಕೂ ಮೊದಲು ಇಂದು (ಜ.02) ಸಂಜೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಸಂಪುಟ ವಿಸ್ತರಣೆ ವಿಳಂಬದ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗಿದೆ. ಜೊತೆಗೆ ಮುಂದಿನ ವಿಧಾನಸಭೆ, ಲೋಕಸಭೆ ಉಪ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕುರಿತು ಕಾರ್ಯಕಾರಣಿ ಸಭೆಯಲ್ಲಿ ಚರ್ಚೆ ಆಗಲಿದೆ.
Recommended Video
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ 180 ಆಹ್ವಾನಿತರು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.