BREAKING: ವಿಧಾನಸೌಧದಲ್ಲಿ ಸಾಧನಾ ಸಮಾವೇಶದಲ್ಲಿ ರಾಜೀನಾಮೆ ಘೋಷಣೆ ಮಾಡಿದ ಯಡಿಯೂರಪ್ಪ!
ಬೆಂಗಳೂರು, ಜು. 26: ಮೊದಲೇ ನಿರ್ಧಾರ ಮಾಡಿದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಬಿಜೆಪಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ಭಾಷಣ ಮಾಡಿದ ಬಳಿಕ ದುಃಖದಿಂದಲ್ಲ ಸಂತೋಷದಿಂದ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣದಲ್ಲಿ ಗದ್ಗದಿತರಾಗಿ ಹೇಳಿದರು.
ಎರಡು ವರ್ಷಗಳ ಸಾಧನಾ ಸಮಾವೇಶದಲ್ಲಿ ತಮ್ಮ ರಾಜಕೀಯ ಜೀವನವನ್ನು ಭಾವನಾತ್ಮಕವಾಗಿ ಯಡಿಯೂರಪ್ಪ ನೆನೆದರು. ಇಬ್ಬರು ಶಾಸಕರಿಂದ ಆರಂಭವಾದ ನಮ್ಮ ಸಾಧನೆ ಈಗ ರಾಜ್ಯದಲ್ಲಿ ಅಧಿಕಾರಕ್ಕೆ ಬರುವಷ್ಟು ಬೆಳೆದಿದೆ. ಈ ಸಾಧನೆಗೆ ಲಕ್ಷಾಂತರ ಜನ ಕಾರ್ಯಕರ್ತರ ಪರಿಶ್ರಮ ಕಾರಣ ಎಂದರು. 75 ವರ್ಷ ಮೀರಿದ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಮುಂದೆ ಬರುವ ದಿನಗಳಲ್ಲಿ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅವಕಾಶ ಸಿಗಬೇಕು ಎಂದು ದೇವರಲ್ಲಿ ಈ ಬಗ್ಗೆ ನಾನು ಪ್ರಾರ್ಥನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.

ವಿಧಾನಸೌಧದ ಬ್ಯಾಂಕ್ವಟ್ ಹಾಲ್ನಲ್ಲಿ ನಡೆಯುತ್ತಿರುವ ಸರಳ ಸಮಾವೇಶದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯ ಸಚಿವ ಸಂಪುಟ ಸದಸ್ಯರು ಭಾಗವಹಿಸಿದ್ದರು. ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿ ಸಾಧನಾ ಸಮಾವೇಶದಲ್ಲಿ ಭಾಗವಹಿಸಿದ್ದರು.

ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ಸಚಿವರು ಅಭಿನಂದಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಹೂಗುಚ್ಛ ಕೊಟ್ಟು ಸ್ವಾಗತಿಸಿದರು. ಕೊರೊನಾ ಮಾರ್ಗಸೂಚಿ ಪಾಲನೆಯೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಮೂವರು ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಅಶ್ವಥ್ ನಾರಾಯಣ ಹಾಗೂ ಲಕ್ಷ್ಮಣ ಸವದಿ ಅವರು ವೇದಿಕೆ ಹಂಚಿ ಕೊಂಡಿದ್ದರು.
ಉಳಿದಂತೆ ಸಚಿವರು ಹಾಗೂ ಶಾಸಕರಿಗೆ ವೇದಿಕೆ ಮುಂಭಾಗದಲ್ಲಿ ಆಸನ ವ್ಯವಸ್ಥೆ ಮಾಡಲಾಗಿತ್ತು. ಸಿಎಂ ಪುತ್ರ, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಕೆಲ ಸಂಸದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ಬಳಿಕ ಮುಂದೆನಾಗುತ್ತದೆ ಎಂಬ ಕುತೂಹಲ ಇಡೀ ರಾಜ್ಯದ ಜನರಲ್ಲಿತ್ತು. ಇದೀಗ ಅದಕ್ಕೆ ತೆರೆ ಬಿದ್ದಿದೆ.
Recommended Video
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ 'ಸವಾಲುಗಳ ಮೀರಿದ ಸಾಧನಾ ಪರ್ವ; ಸರ್ಕಾರದ ಸಾರ್ಥಕ ಸೇವೆಯ ಎರಡು ವರ್ಷಗಳು' ಪುಸ್ತಕವನ್ನು ಸಿಎಂ ಯಡಿಯೂರಪ್ಪ ಹಾಗೂ ಮೂವರು ಉಪ ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ. ಇದೀಗ ಕಾರ್ಯಕ್ರಮ ಮುಂದುವರೆದಿದ್ದು, ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ.












Click it and Unblock the Notifications