'ಅವರ' ವಿರುದ್ಧ ಬಿಜೆಪಿ ಕ್ರಮಕೈಗೊಳ್ಳಲಿದೆ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್!
ಬೆಂಗಳೂರು, ಜೂ. 18: ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ಕಳೆದ ಆರು ತಿಂಗಳುಗಳಿಂದ ನಡೆದಿದ್ದ ಚರ್ಚೆಗೆ ಬಿಜೆಪಿ ಹೈಕಮಾಂಡ್ ತಾತ್ಕಾಲಿಕವಾಗಿ ರೆಡ್ ಸಿಗ್ನಲ್ ಕೊಟ್ಟಿದೆ. ಹೈಕಮಾಂಡ್ ಬಯಸಿದಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡಲು ಸಿದ್ಧ ಎಂದು ಬಿ.ಎಸ್. ಯಡಿಯೂರಪ್ಪ ಅವರು ಬಹಿರಂಗ ಹೇಳಿಕೆ ಕೊಟ್ಟ ಬಳಿಕ ರಾಜ್ಯ ಬಿಜೆಪಿಯಲ್ಲಿ ಸಂಚಲನ ಉಂಟಾಗಿತ್ತು. ಇದೇ ಸಂದರ್ಭದಲ್ಲಿ ಇನ್ನೇನೂ ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಕೆಳಗಿಸಲಾಗುತ್ತದೆ ಎಂಬಂತಹ ಸ್ಥಿತಿ ನಿರ್ಮಾಣವಾಗಿತ್ತು.
ಮೂರು ದಿನಗಳ ಕಾಲ ಸರಣಿ ಸಭೆಗಳನ್ನು ನಡೆಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಚಿವರು ಹಾಗೂ ಹಾಗೂ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಇಂದು (ಜೂ. 18) ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅರುಣ್ ಸಿಂಗ್ ಭಾಗವಹಿಸಿದ್ದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವಿರುದ್ಧ ಯಾರೂ ಮಾತನಾಡಬಾರದು. ಪಕ್ಷಕ್ಕೆ ಧಕ್ಕೆಯಾಗುವಂತೆ ಎರಡ್ಮೂರು ನಾಯಕರು ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಸಿಎಂ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ ಕಾಂಗ್ರೆಸ್ ಹಿರಿಯ ಶಾಸಕ
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, "ಪಕ್ಷದ ವಿರುದ್ಧ ಮಾತನಾಡುವವರಿಗೆ ಹಾಗೆ ಮಾಡದಂತೆ ಸೂಚಿಸಲಾಗಿದೆ. ಬಿಜೆಪಿ ವಿಶ್ವದ ಅತಿ ದೊಡ್ಡ ಪಕ್ಷವಾಗಿದ್ದು, ಪಕ್ಷದ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡಬೇಕು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವೈಫಲ್ಯಗಳ ಕುರಿತು ಮಾತನಾಡಬೇಕು" ಎಂದರು.
Recommended Video
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಅವುಗಳ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಬಿಜೆಪಿ ಶಾಸಕರು ಮುಂದಾಗಬೇಕು ಎಂದು ಇದೇ ಸಂದರ್ಭದಲ್ಲಿ ಅರುಣ್ ಸಿಂಗ್ ಅವರು ಸೂಚಿಸಿದ್ದಾರೆ.