BREAKING: ಕೊನೆಗೂ ಬಿಜೆಪಿ ಹೈಕಮಾಂಡ್ ಒಪ್ಪಿಗೆ: ಬುಧವಾರ ಮಧ್ಯಾಹ್ನ 2 ಗಂಟೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ!
ಬೆಂಗಳೂರು, ಆ. 03: ನಾಳೆ ಮಧ್ಯಾಹ್ನ 2 ಗಂಟೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಿಗದಿಯಾಗಿದೆ. ಈ ಬಗ್ಗೆ 'ಒನ್ಇಂಡಿಯಾ ಕನ್ನಡ'ಕ್ಕೆ ಖಚಿತ ಮಾಹಿತಿ ಲಭ್ಯವಾಗಿದ್ದು ನಾಳೆ (ಆ. 04) ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರುವವರ ಪಟ್ಟಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ನಾಳೆ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರಿಗೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂರು ದಿನಗಳ ಹಿಂದೆಯೆ ದೆಹಲಿಗೆ ತೆರಳಿದ್ದಾರೆ. ಇದೀಗ ಬಂದಿರುವ ಮಾಹಿತಿಯ ಪ್ರಕಾರ ನಾಳೆ ಮಧ್ಯಾಹ್ನ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ನಾಳೆ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರಿಗೆ ಈಗಾಗಲೇ ದೂರವಾಣಿ ಕರೆ ಮಾಡಿ ಮಾಹಿತಿ ನೀಡಲಾಗಿದೆ. ಮೊದಲ ಹಂತದಲ್ಲಿ 22 ಶಾಸಕರು ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. "ಸಂಪುಟದಲ್ಲಿ ಯಾರಿರಬೇಕು ಎಂಬುದರ ಕುರಿತು ಬುಧವಾರ ಬೆಳಿಗ್ಗೆ ಅಂತಿಮವಾಗಲಿದೆ" ಎಂದು ಸಿಎಂ ಬೊಮ್ಮಾಯಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಭೇಟಿಯ ನಂತರ ಈಗಷ್ಟೇ ಮಾಧ್ಯಮಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, "ಎರಡು ಮೂರು ವಿಚಾರಗಳ ಕುರಿತು ಬುಧವಾರ ಚರ್ಚೆ ನಡೆಯಲಿದೆ. ಬೆಳಗ್ಗೆಯೆ ಸ್ಪಷ್ಟ ಸೂಚನೆ ಸಿಕ್ಕರೆ ಬುಧವಾರ ಮಧ್ಯಾಹ್ನವೇ ಪ್ರಮಾಣ ವಚನ ನಡೆಯುವ ಸಾಧ್ಯತೆ ಇದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕ ಪ್ರಾತಿನಿಧ್ಯ ಹಾಗೂ ನಮ್ಮ ಜೊತೆ ಬಂದಿರುವವರ ಕುರಿತೂ ಚರ್ಚೆ ಮಾಡಲಾಗಿದೆ" ಎಂದು ಹೇಳಿದರು.
"ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಎಲ್ಲ ರೀತಿಯ ಮಾಹಿತಿ ಪಡೆದಿದ್ದಾರೆ. ಅವರಿಗೆ ಬೇಕಾದಂತಹ ಮಾಹಿತಿ ಒದಗಿಸಿದ್ದೇವೆ. ಬುಧವಾರ ಬೆಳಿಗ್ಗೆ ಅಂತಿಮ ಪಟ್ಟಿ ನೀಡುವುದಾಗಿ ಹೇಳಿದ್ದಾರೆ. ಎಷ್ಟು ಜನರನ್ನು ಸಂಪುಟಕ್ಕೆ ಸೇರಿಸಬೇಕೆಂಬ ವಿಚಾರ ಅಂತಿಮವಾಗಿಲ್ಲ. ಎರಡು ಮೂರು ಹೆಸರು ಸೇರಿಸುವ ಬಗ್ಗೆ ಇನ್ನೂ ಗೊಂದಲ ಇದೆ. ಅಂತಿಮವಾಗಿ ಪಕ್ಷದ ನಾಯಕರು ಪಟ್ಟಿ ನೀಡುತ್ತಾರೆ" ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
"ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟು ಕುರಿತು ಎರಡು ಅಭಿಪ್ರಾಯ ಇರುವುದು ನಿಜ. ಅಂತಿಮವಾಗಿ ಯಾವ ತೀರ್ಮಾನ ತೆಗೆದುಕೊಳ್ಳಬೇಕೆನ್ನುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಿದ್ದಾರೆ. ಹಿರಿಯರನ್ನು ಕೈಬಿಡಬೇಕು ಎನ್ನುವ ಬಗ್ಗೆೆ ಯಾವುದೇ ರೀತಿಯ ಚರ್ಚೆ ಇಲ್ಲ. 2023 ಚುನಾವಣೆಗೆ ಸಿದ್ದತೆ ಗಮನದಲ್ಲಿಟ್ಟುಕೊಂಡು ಹಿರಿಯರು ಹಾಗೂ ಕಿರಿಯರನ್ನು ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ. ಸಂಪುಟದಿಂದ ಕೈಬಿಡುವುದು ಹಾಗೂ ಸೇರಿಸುವ ನಿರ್ಧಾರವನ್ನು ಹೈಕಮಾಂಡ್ ಮಾಡಲಿದೆ" ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
"ಸಹಜವಾಗಿ ಸಂಪುಟ ರಚನೆ ಮಾಡುವ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ. ಇದರಲ್ಲಿ ಯಾವುದೇ ಒತ್ತಡವಿಲ್ಲ. ಎಲ್ಲ ವಲಸಿಗರ ಕುರಿತು ಚರ್ಚೆ ಮಾಡಿದ್ದೇವೆ. ಅವರನ್ನು ವಲಸಿಗರು ಎನ್ನುವುದಿಲ್ಲ. ಅವರು ನಮ್ಮ ನೆಲಸಿಗರು ಎಂದು ಕರೆಯುತ್ತೇನೆ. ಎಲ್ಲರೂ ನಮ್ಮ ಜೊತೆಗೆ ಇರುತ್ತಾರೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Recommended Video
ಇದೇ ಸಂದರ್ಭದಲ್ಲಿ ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ನಾಳೆ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ಮಾಹಿತಿ ಕೊಟ್ಟಿದ್ದಾರೆ. "ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನಾಳೆ ಮಧ್ಯಾಹ್ನ 02.15 ಕ್ಕೆ ಸಚಿವನಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ಎಂದಿನಂತೆ ನಿಮ್ಮ ಸಹಕಾರ ಕ್ಷೇತ್ರದ ಜನತೆಯ ಆಶೀರ್ವಾದವಿರಲಿ" ಎಂದು ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.
ಯಾರು ಯಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ದೂರವಾಣಿ ಕರೆ?: ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೂರವಾಣಿ ಕರೆ ಮಾಡಿ ಮಾಹಿತಿ ಕೊಟ್ಟಿದ್ದಾರೆ. ಸದ್ಯ ಸಿಕ್ಕಿರುವ ಮಾಹಿತಿಯ ಪ್ರಕಾರ ಶಾಸಕರಾದ ಬಿ.ಸಿ. ಪಾಟೀಲ್, ಬಿ. ಶ್ರೀರಾಮುಲು, ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್, ವಿ. ಸುನೀಲ್ ಕುಮಾರ್, ಪೂರ್ಣಿಮಾ ಶ್ರೀನಿವಾಸ್, ಬಿ.ಸಿ. ಪಾಟೀಲ್, ಭೈರತಿ ಬಸವರಾಜು, ಹರೀಶ್ ಪೂಂಜಾ, ಆರ್. ಅಶೋಕ್, ಕೆ.ಎಸ್. ಈಶ್ವರಪ್ಪ ಹಾಗೂ ಪ್ರೀತಂ ಗೌಡ ಅವರಿಗೆ ಈಗಾಗಲೇ ಸಚಿವ ಸಂಪುಟ ಸೇರಲು ಸಿಎಂ ಬಸವರಾಜ ಬೊಮ್ಮಯಿ ಆಹ್ವಾನ ಕೊಟ್ಟಿದ್ದಾರೆ ಎಂಬ ಮಾಹಿತಿಯಿದೆ.