Karnataka Elections 2023: ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು ಮಾರ್ಚ್ 30: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿ ಒಂದು ದಿನದ ಬಳಿಕ ರಾಜ್ಯದಲ್ಲಿ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೈ ಚುರುಕು ಮುಟ್ಟಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರವು, ಕೆಪಿಸಿಎಲ್ ಎಂ. ಡಿಯಾಗಿದ್ದಂತ ಎಂಎಸ್ ಶ್ರೀಖರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸೆಕ್ರೇಟರಿಯಾಗಿ ನೇಮಕ ಮಾಡಲಾಗಿದೆ.
ಆಯುಷ್ ಇಲಾಖೆಯ ಕಮೀಷನರ್ ಆಗಿದ್ದಂತ ಮಂಜುನಾಥ್ ಜೆ ಅವರನ್ನು ಎಡ್ಸ್ ನಿಯಂತ್ರಣ ಸೊಸೈಟಿಯ ಪ್ರೊಜೆಕ್ಟ್ ಡೈರೆಕ್ಟರ್ ಆಗಿ ನೇಮಿಸಿದೆ. ಶೈಖ್ ತನ್ವೀರ್ ಆಸಿಪ್ ಅವರನ್ನು ಅಬಕಾರಿ ಇಲಾಖೆಯ ಹೆಚ್ಚುವರಿ ಕಮೀಷರ್ ಹುದ್ದೆಯಿಂದ ವರ್ಗಾವಣೆ ಮಾಡಿ, ಮಂಡ್ಯ ಜಿಲ್ಲಾ ಪಂಚಾಯ್ತಿ ಸಿಇಓ ಆಗಿ ನೇಮಿಸಲಾಗಿದೆ.

ಹುದ್ದೆಯ ನಿರೀಕ್ಷೆಯಲ್ಲಿದ್ದಂತ ರಂಗಪ್ಪ ಎಸ್ ಅವರನ್ನು ಕೆಎಸ್ಎಂಎಸ್ಸಿಎಲ್ ಎಂ.ಡಿಯಾಗಿ ನೇಮಿಸಿದೆ. ಕಲಬುರ್ಗಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದಂತ ಗರೀಂ ಪನ್ವರ್ ಅವರನ್ನು ಯಾದಗಿರಿ ಜಿಲ್ಲಾ ಪಂಚಾಯ್ತಿ ಸಿಇಒ ಆಗಿ ನೇಮಕ ಮಾಡಲಾಗಿದೆ.2018 ಬ್ಯಾಚ್ ್ನ ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಆಕೃತಿ ಬನ್ಸಾಲ್ ಅವರನ್ನು ದೆಹಲಿಯ ಕರ್ನಾಟಕ ಭವನದ ಹೆಚ್ಚುವರಿ ಪ್ರದೇಶಿಕ ಕಮೀಷನರ್ ಆಗಿ ನಿಯೋಜಿಸಿದೆ.
ಚುನಾವಣೆ ಘೋಷಣೆ
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನೂ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದ್ದರು.

ರಾಜ್ಯದಲ್ಲಿ ನೀತಿ ಸಂಹಿತೆ ಜಾರಿ
ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ನೀತಿ ಸಂಹಿತೆ ಕೂಡ ನಿನ್ನೆಯಿಂದಲೇ ಜಾರಿಯಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಸರ್ಕಾರ ಹೊಸ ಯೋಜನೆ ಘೋಷಿಸುವಂತಿಲ್ಲ. ಹೊಸ ಕಾರ್ಯಕ್ರಮಗಳ ಅನುಷ್ಠಾನ ಮಾಡುವಂತಿಲ್ಲ. ಯಾವುದೇ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಡುವಂತಿಲ್ಲ. ಹೊಸ ಯೋಜನೆಗೆ ಹಣ ನೀಡುವಂತಿಲ್ಲ.
ಜೊತೆಗೆ ಹೊಸ ಟೆಂಡರ್ ಕರೆಯುವಂತಿಲ್ಲ. ಈಗಾಗಲೇ ಕರೆದಿದ್ದ ಟೆಂಡರ್ ಫೈನಲ್ ಕೂಡಾ ಮಾಡುವ ಹಾಗಿಲ್ಲ. ಎಲ್ಲಕ್ಕಿಂತಾ ಮುಖ್ಯವಾಗಿ ಸಚಿವರು, ಶಾಸಕರು ಸರ್ಕಾರಿ ವಾಹನ ಬಳಸುವಂತಿಲ್ಲ ಅಧಿಕಾರಿಗಳ ಜೊತೆ ಸಭೆ ನಡೆಸುವಂತಿಲ್ಲ. ಸರ್ಕಾರಿ ವಸತಿ ಗೃಹ ಬಳಸುವಂತಿಲ್ಲ. ಜೊತೆಗೆ ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಮಾತ್ರ ಧ್ವನಿವರ್ಧಕ ಬಳಕೆ ಮಾಡಬೇಕು.

ಮಾತ್ರವಲ್ಲದೆ ಮಂದಿರ, ಮಸೀದಿ, ಚರ್ಚ್ ಸೇರಿದಂತೆ ಯಾವುದೇ ಧಾರ್ಮಿಕ ಸ್ಥಳಗಳು ಚುನಾವಣಾ ಪ್ರಚಾರಕ್ಕೆ ಬಳಕೆ ಆಗಬಾರದು. ಧರ್ಮ - ಜಾತಿ ವಿಷಯಾಧಾರಿತವಾಗಿ ಮತ ಕೇಳುವಂತೆಯೇ ಇಲ್ಲ. ಒಂದ್ಸಲ ಚುನಾವಣ ನೀತಿ ಸಂಹಿತೆ ಜಾರಿಯಾದ ಬಳಿಕ ಸರ್ಕಾರದ ಬಳಿ ಇರೋ ಹಲವಾರು ಅಧಿಕಾರಗಳು ಕಡಿತಗೊಳ್ಳುತ್ತವೆ. ಸದ್ಯ ರಾಜ್ಯ ಸರ್ಕಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದ ಬಾರೀ ಕುತೂಹಲವನ್ನು ಮೂಡಿಸಿದೆ.












Click it and Unblock the Notifications