ದಸರಾ ಕೊಡುಗೆ: ಸರ್ಕಾರಿ ನೌಕರರ ಬಾಯಿಗೆ ಪಾಯಸ
ಜುಲೈ 1 ರಿಂದಲೇ ಪೂರ್ವಾನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ನಿರೀಕ್ಷಿತ ಪ್ರಮಾಣದಲ್ಲಿ ಅಂದರೆ ಶೇ. 6ರಷ್ಟು ಹೆಚ್ಚಳ ಮಾಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ಕಳೆದ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಮೂಲವೇತನದ ಶೇ.6ರಷ್ಟು ತುಟ್ಟಿಭತ್ಯೆಯನ್ನು ಘೋಷಿಸಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಸರ್ಕಾರದ ಆದೇಶದ ಮೇರೆಗೆ ತುಟ್ಟಿ ಭತ್ಯೆಯನ್ನು ನಗದಾಗಿ ಪಾವತಿ ಮಾಡಲಾಗುವುದೇ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ದಸರಾ ಕೊಡುಗೆ ನೀಡಿರುವ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಸಮಸ್ತ ಸರ್ಕಾರಿ ನೌಕರರ ಪರವಾಗಿ ಸಂಘವು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಲಿದೆ ಎಂದು ಸಂಘದ ಅಧ್ಯಕ್ಷ ಎಲ್.ಭೈರಪ್ಪ ತಿಳಿಸಿದ್ದಾರೆ.
ಇತ್ತೀಚೆಗೆ ಕೇಂದ್ರ ಸರ್ಕಾರದ 80 ಲಕ್ಷಕ್ಕೂ ಅಧಿಕ ಉದ್ಯೋಗಿಗಳಿಗೆ ಡಿಎ ಹೆಚ್ಚಳ ಮಾಡಲಾಗಿತ್ತು. ಇದರಿಂದ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 30 ಲಕ್ಷ ಪಿಂಚಣಿದಾರರಿಗೆ ನೆರವಾಗಿದೆ.ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ನಿರೀಕ್ಷಿತ ಪ್ರಮಾಣದಲ್ಲಿ ಅಂದರೆ ಶೇ. 10ರಷ್ಟು ಹೆಚ್ಚಳ ಮಾಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಶುಕ್ರವಾರ(ಸೆ.20) ಒಪ್ಪಿಗೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ತುಟ್ಟಿ ಭತ್ಯೆ(dearness allowance): ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕವಾಗಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ. ಕೈಗಾರಿಕಾ ಕಾರ್ಮಿಕರಿಗೆ ಸಂಬಂಧಿಸಿದ ಅಖಿಲ ಭಾರತ ಗ್ರಾಹಕ ದರ ಸೂಚ್ಯಂಕ(ಸಿಪಿಐ-ಐಡಬ್ಲ್ಯೂ) ಆಧಾರದಲ್ಲಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗುತ್ತದೆ.