ಅಳಿವಿನಂಚಿನಲ್ಲಿರುವ ಆದಿವಾಸಿ, ಬುಡಕಟ್ಟು ಜನರ ಅಭಿವೃದ್ಧಿಗೆ ಸರ್ಕಾರ ಸಜ್ಜು: ಇಲ್ಲಿದೆ ವಿವರ
ಬೆಂಗಳೂರು, ನವೆಂಬರ್ 27: ರಾಜ್ಯ ಸರ್ಕಾರ ರಾಜ್ಯಾದಂತ್ಯ ಇರುವ ಆದಿವಾಸಿ, ಬುಡಕಟ್ಟು ಜನರ ಅಭಿವೃದ್ಧಿಗೆ ಮುಂದಾಗಿದ್ದಾರೆ. ರಾಜ್ಯದ ವಿವಿಧೆಡೆ ಅಳಿವಿನಂಚಿನಲ್ಲಿರುವ ಆದಿವಾಸಿ ಹಾಗೂ ಬುಡಕಟ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಮನಗಂಡಿರುವ ಸರ್ಕಾರ, ಅವರ ಸಮಸ್ಯೆಗಳನ್ನು ಬಗೆ ಹರಿಸಿ ಮೂತಭೂತ ಸೌಕರ್ಯಗಳನ್ನು ನೀಡಲು ಮುಂದಾಗಿದೆ.
ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ವಿವರಣೆ ನೀಡಿದ್ದಾರೆ. ಆದಿವಾಸಿ, ಬುಡಕಟ್ಟು ಜನರನ್ನು ಮುಖ್ಯವಾಹಿನಿಗೆ ತರುವುದೆಂದರೆ ಅವರ ಸಂಸ್ಕೃತಿ, ಪರಂಪರೆಯನ್ನು ನಾಶಗೊಳಿಸುವುದಲ್ಲ. ಬದಲಾಗಿ ಸೌಲಭ್ಯ ವಂಚಿತರಾಗಿರುವ ಅವರಿಗೆ ಮೂಲಭೂತ ಸೌಕರ್ಯವನ್ನು ಒದಗಿಸುವುದು ಮತ್ತು ಅವರ ಸಂಸ್ಕೃತಿಯನ್ನು ಉಳಿಸುತ್ತಲೇ ಅವರನ್ನು ಆಧುನಿಕ ಬದುಕಿನ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಎಂದು ಸಚಿವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕೊಡಗು , ಮೈಸೂರು ಚಾಮರಾಜನಗರ, ಶಿವಮೊಗ್ಗ, ಹಾಗೂ ಹಾಸನ ಜಿಲ್ಲೆಗಳ ಅಳಿವಿನಂಚಿನಲ್ಲಿರುವ ಆದಿವಾಸಿ,ಬುಡಕಟ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಇದರಲ್ಲಿ, ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದಂತೆ ಮತ್ತು ಹಾಡಿಗಳು ಹಾಗೂ ಬುಡಕಟ್ಟು ವಸತಿಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದರು.
ಆದಿವಾಸಿ ಹಾಗೂ ಬುಡಕಟ್ಟು ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ
ಹಾಡಿಗಳು ಮತ್ತು ಬುಡಕಟ್ಟು ವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ವಿಶೇಷ ಯೋಜನೆ ರೂಪಿಸಲಾಗುವುದು.
ಇದರಲ್ಲಿ ಬೋರ್ವೆಲ್ಗಳ ಕೊರೆಯುವಿಕೆ, ನೀರಿನ ಶುದ್ಧೀಕರಣ ಘಟಕಗಳ ಸ್ಥಾಪನೆ, ಮತ್ತು ಪೈಪ್ಲೈನ್ ಜಾಲದ ನಿರ್ಮಾಣ ಸೇರಿವೆ.
ಮೈಸೂರು ಜಿಲ್ಲೆಯಲ್ಲಿ 12 ಹಾಗೂ ಚಾಮರಾಜನಗರ ಜಿಲ್ಲೆಯ 16 ಹಾಡಿಗಳಿಗೆ ಜೆಜೆಎಂ ಮೂಲಕ ಕುಡಿಯುವ ನೀರು ಸಂಪರ್ಕ ಕಲ್ಪಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಹಾಡಿಗಳಲ್ಲಿ ಸಂಪರ್ಕ ರಸ್ತೆಗಳ ನಿರ್ಮಾಣ
ಮುಖ್ಯ ರಸ್ತೆಗಳಿಗೆ ಸಂಪರ್ಕಿಸಲು ಸಾಧ್ಯವಾಗುವಂತೆ ಆದಿವಾಸಿ ಹಾಗೂ ಬುಡಕಟ್ಟು ಜನರು ವಾಸಿಸುವ ಹಾಡಿಗಳ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು.ಇದರಿಂದ ಸಾರಿಗೆ ಸೌಲಭ್ಯ ಹೆಚ್ಚಾಗಿ, ಆರೋಗ್ಯ ಸೇವೆಗಳು ಮತ್ತು ಶಿಕ್ಷಣ ಸೌಲಭ್ಯಗಳಿಗೆ ಸುಲಭ ಪ್ರವೇಶ ದೊರೆಯಲಿದೆ. ಚಾಮರಾಜನಗರ ಜಿಲ್ಲೆಯಲ್ಲಿ 38 ಹಾಡಿಗಳಿಗೆ ಹಾಗೂ ಕೊಡಗು ಜಿಲ್ಲೆಯಲ್ಲಿ 24 ಹಾಡಿಗಳಿಗೆ ರಸ್ತೆ ಸಂಪರ್ಕ ಒದಗಿಸಲು ಕ್ರಮ ವಹಿಸಲಾಗುವುದು. ಕುಡಿಯುವ ನೀರು ಹಾಗೂ ರಸ್ತೆ ಸಂಪರ್ಕ ಕಾಮಗಾರಿಗಳನ್ನು ಕೂಡಲೇ ಕೈಗೆತ್ತಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.












Click it and Unblock the Notifications