ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎಂದರೆ ನಾವು ಬೆಂಬಲಿಸುತ್ತೇವೆ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಸೆಪ್ಟಂಬರ್ 12: ಕರ್ನಾಟಕ ರಾಜ್ಯ ಸರ್ಕಾರ ನೆರೆಯ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಬಿಡುವುದಿಲ್ಲ ಎಂದು ಗಟ್ಟಿಯಾಗಿ ನಿಂತರೆ ನಾವು ಸಹ ಸರ್ಕಾರದ ಜೊತೆಗೆ ನಿಲ್ಲುತ್ತೇವೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಬಲ ಕುರಿತು ಮಾತನಾಡಿದ್ದಾರೆ.
ಕಾವೇರಿ ನೀರು ನಿಯಂತ್ರಣ ಸಮಿತಿ-CWRC (Cauvery Water Regulation Committee) ಪ್ರತಿ ದಿನ 5000 ಕ್ಯೂಸೆಕ್ಸ್ ನಂತೆ ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವ ಕುರಿತು ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದರು. ಸದ್ಯದ ವಸ್ತು ಸ್ಥಿತಿ ನೋಡಿದರೆ, ಕಾವೇರಿಯಲ್ಲಿ ಕುಡಿಯಲಿಕ್ಕೂ ನೀರಿಲ್ಲ. ಮತ್ತೆ 7 ಟಿಎಂಸಿ ನೀರು ಬಿಡಲು ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಒಂದಕ್ಕೆ 32 ಟಿಎಂಸಿ ನೀರು ಬೇಕು. ಇದುವರೆಗೂ ಕೇವಲ 7 ಟಿಎಂಸಿ ಮಾತ್ರ ಬಿಡಲಾಗಿದೆ. ಭತ್ತ ಕಬ್ಬು, ಮೆಕ್ಕೆಜೋಳ ಎಲ್ಲವೂ ಒಣಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ.
ವಾಸ್ತವಾಂಶ ತಿಳಿಸಲಿ
ಇನ್ನೂ ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವುತ್ತಿದೆ. ಬುಧವಾರ ಕಾವೇರಿ ನೀರು ಹಂಚಿಕೆ ಕುರಿತಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಕರ್ನಾಟಕ ರಾಜ್ಯ ಸರ್ಕಾರ ವಾಸ್ತವ ಅಂಶಗಳನ್ನು ಹೇಳಬೇಕು. ಸಭೆಯಿಂದ ಹೊರಬರುತ್ತಾರೋ ಏನು ಮಾಡುತ್ತಾರೊ ಅವರಿಗೆ ಬಿಟ್ಟಿದ್ದು ಎಂದು ಖಾರವಾಗಿ ಹೇಳಿದರು.
ತಮಿಳುನಾಡು ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶಿಸುವುಂತೆ ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ಮುಂದಿನ ವಾರ ನಡೆಯಲಿದೆ. ಅಲ್ಲಿಯೂ ರಾಜ್ಯ ಸರ್ಕಾರ ಬಲವಾಗಿ ವಾದ ಮಾಡಬೇಕು. ನಮ್ಮ ಕಾವೇರಿ ಮಕ್ಕಳ ಹಿತ ಬಲಿ ಕೊಟ್ಟು ನೀರು ಬಿಡಬೇಡಿ. ಕಾನೂನು ತಂಡ ಮರು ಚಿಂತನೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ತಮಿಳುನಾಡು ಸಿಎಂ ಮನವೊಲಿಕೆ ಮಾಡಿ
ನಾವು ಇದರಲ್ಲಿ ರಾಜಕಾರಣ ಮಾಡುತ್ತಿಲ್ಲ. ಇವರು ಗಟ್ಟಿಯಾಗಿ ನಿಲ್ಲಬೇಕು. ಅಂದರೆ ನಾವು ಸರ್ಕಾರದ ಜೊತೆ ನಿಲ್ಲುತ್ತೇವೆ. ಇವರು ಕೇಂದ್ರಕ್ಕೆ ಪತ್ರ ಬರೆದಿರುವುದಾಗಿ ಹೇಳುತ್ತಾರೆ. ಅದನ್ನು ಬಿಟ್ಟು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಮನವೊಲಿಕೆ ಮಾಡಬೇಕು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕದಲ್ಲಿ ಈ ಭಾರಿ ನಿರೀಕ್ಷಿತ ಮಳೆ ಆಗಿಲ್ಲ. ಕಾವೇರಿ ಜಲಾಶಯ ಭರ್ತಿಯಾಗಿಲ್ಲ. ಎಲ್ಲೆಡೆ ಬರಗಾಲ ಆವರಿಸಿದ್ದು, ರಾಜ್ಯ ಸರ್ಕಾರ ಬರ ಘೋಷಣೆ ಮಾಡುವುದನ್ನು ವಿಳಂಬ ಮಾಡುತ್ತಿದೆ. ಈ ಮಧ್ಯೆ ತಮಿಳುನಾಡು ಸರ್ಕಾರ ಕಾವೇರಿ ನೀರಿಗೆ ಒತ್ತಾಯಿಸಿತ್ತಿದೆ. ಈ ಕುರಿತು ರಾಜ್ಯ ಬಿಜೆಪಿ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಸಂಕಷ್ಟ ಸೂತ್ರ ಅನುಸರಿಸಬೇಕು ಎಂದು ತಜ್ಞರು, ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಸರ್ಕಾರ ಏನು ನೀರ್ಣಯ ಕೈಗೊಳ್ಳಲಿದೆ, ಈ ಕುರಿತು ಮುಂದಿನ ವಿಚಾರಣೆಯಲ್ಲಿ ಏನಾಗಲಿದೆ ಎಂಬ ಕುತೂಹಲ ರಾಜ್ಯದ ಜನರಲ್ಲಿ ಮನೆ ಮಾಡಿದೆ.












Click it and Unblock the Notifications