ವಿದ್ಯುತ್ ನಿಗಮ ಖಾಸಗೀಕರಣ: ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ರಾಜ್ಯ ಸರ್ಕಾರ
ಬೆಂಗಳೂರು, ಅಕ್ಟೋಬರ್ 19: ವಿದ್ಯುತ್ ವಲಯವನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ವಿದ್ಯುತ್ ಸರಬರಾಜು ನಿಗಮಗಳನ್ನು (ಎಸ್ಕಾಂ) ಖಾಸಗೀಕರಣಗೊಳಿಸುವ ಸಂಬಂಧ ಕೇಂದ್ರ ಸರ್ಕಾರ ಪ್ರಸ್ತಾವ ಮುಂದಿಟ್ಟಿತ್ತು. ಅದನ್ನು ಒಪ್ಪದ ರಾಜ್ಯ ಸರ್ಕಾರ, ಸದ್ಯದ ಪರಿಸ್ಥಿತಿಯಲ್ಲಿ ಖಾಸಗೀಕರಣ ಮಾಡುವ ಅಗತ್ಯವಿಲ್ಲ ಎಂದಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಅಡಿ ವಿದ್ಯುತ್ ಸರಬರಾಜು ಮಾಡುವ ಐದು ಸಂಸ್ಥೆಗಳಿದ್ದು, ಅವುಗಳಲ್ಲಿ ಮೂರನ್ನು ಖಾಸಗಿಯವರ ನಿರ್ವಹಣೆಗೆ ನೀಡುವಂತೆ ಕೇಂದ್ರ ಸರ್ಕಾರ ಪ್ರಸ್ತಾವನೆ ನೀಡಿತ್ತು. ಕೋವಿಡ್ ಕಾರಣದಿಂದ ಆರ್ಥಿಕ ವ್ಯವಸ್ಥೆಗೆ ಹೊಡೆತ ಬಿದ್ದಿದೆ. ಹೀಗಾಗಿ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲು ವಿದ್ಯುತ್ ನಿಗಮಗಳ ಖಾಸಗೀಕರಣ ಅಗತ್ಯವಾಗಿದೆ. ಇದರ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೆ. 20ರಂದು ಕೇಂದ್ರ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು.
ದೇಶದಲ್ಲಿ 34 ಎಸ್ಕಾಂಗಳ ಪೈಕಿ ಬೆಸ್ಕಾಂ (ಬೆಂಗಳೂರು), ಚೆಸ್ಕಾಂ (ಮೈಸೂರು) ಮತ್ತು ಜೆಸ್ಕಾಂ (ಕಲಬುರಗಿ) ಅನ್ನು ಖಾಸಗೀಕರಣಗೊಳಿಸಬಹುದೆಂದು ಕೇಂದ್ರ ಸರ್ಕಾರ ಹೇಳಿತ್ತು. ಅಕ್ಟೋಬರ್ 5ರ ಒಳಗೆ ಕೇಂದ್ರದ ಪ್ರಸ್ತಾವಕ್ಕೆ ಪ್ರತಿಕ್ರಿಯೆ ನೀಡಬೇಕಿತ್ತು. ಇದಕ್ಕೆ ಒಂದು ವಾರ ಹೆಚ್ಚುವರಿಯಾಗಿ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಕೇಳಿತ್ತು.

ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಎಸ್ಕಾಂಗಳನ್ನು ಮೇ ತಿಂಗಳಿನಲ್ಲಿಯೇ ಖಾಸಗೀಕರಣಗೊಳಿಸಲಾಗಿದೆ. ರಾಜ್ಯದ ಎಲ್ಲ ಎಸ್ಕಾಂಗಳೂ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿದ್ದು, ಈಗಿನ ಪರಿಸ್ಥಿತಿಯಲ್ಲಿ ಅವುಗಳ ಖಾಸಗೀಕರಣದ ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರ ಪ್ರತಿಕ್ರಿಯೆ ನೀಡಿದೆ.












Click it and Unblock the Notifications