ಟಿಪ್ಪು ಜಯಂತಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಬೆಂಗಳೂರು, ನವೆಂಬರ್ 9: ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿ ತೀವ್ರ ವಿರೋಧ ಮಾಡುತ್ತಿದೆ. ಇದರ ನಡುವೆಯೂ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿಯು ರಾಜ್ಯಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಸುತ್ತಿದೆ.
ಕೊಡಗು, ತುಮಕೂರು, ಬೆಂಗಳೂರು, ಚಿತ್ರದುರ್ಗ, ರಾಮನಗರ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮೈತ್ರಿ ಸರ್ಕಾರದ ನಡೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿಪ್ಪು ಜಯಂತಿಯನ್ನು ಕೇವಲ ಬಿಜೆಪಿ ಮಾತ್ರವಲ್ಲ ಕನ್ನಡಪರ ಸಂಘಟನೆಗಳೂ ವಿರೋಧಿಸುತ್ತಿವೆ. ಕನ್ನಡ ಲಿಪಿ, ಸಾಹಿತ್ಯವನ್ನು ಭಸ್ಮ ಮಾಡಿದ ಟಿಪ್ಪುವಿನ ಜಯಂತಿ ಆಚರಣೆಗೆ ಎಂದೂ ಅವಕಾಶ ಮಾಡಿಕೊಡುವುದಿಲ್ಲ ಎಂದು ಬಿಜೆಪಿ ಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.

ಎಚ್ಡಿಕೆ ಜಯಂತಿಯಲ್ಲಿ ಪಾಲ್ಗೊಳ್ಳದೆ ಇರುವುದನ್ನು ಸ್ವಾಗತಿಸುತ್ತೇವೆ
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳದೇ ಇರುವುದನ್ನು ನಾವು ಸ್ವಾಗತಿಸುತ್ತೇನೆ. ಆದರೆ ವಿಶ್ರಾಂತಿಯ ನೆಪ ಹೇಳಿ, ವೈದ್ಯರ ಸಲಹೆ ನೆಪ ಹೇಳಿ ಕುಮಾರಸ್ವಾಮಿ ಓಡಿ ಹೋಗಿರುವುದು ನಾಚಿಕೆ ಗೇಡು ಎಂದು ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಬಿ.ವೈ.ವಿಜಯೇಂದ್ರ, ಸಂಸದ ಪಿ.ಸಿ.ಮೋಹನ್, ಮಾಜಿ ಡಿಸಿಎಂ ಆರ್. ಅಶೋಕ್, ಎಂ.ಎಲ್.ಸಿ. ನಾರಾಯಣ ಸ್ವಾಮಿ ಬಿಬಿಎಂಪಿ ಸದಸ್ಯರು, ಬಿಜೆಪಿ ಮುಖಂಡರು ಭಾಗಿಯಾಗಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ನೆಲಮಂಗಲದಲ್ಲೂ ಪ್ರತಿಭಟನೆ
ನೆಲಮಂಗಲದಲ್ಲಿ ಟಿಪ್ಪು ಜಯಂತಿ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತರು ಪ್ರತಿಭಟನೆ ವೇಳೆ ಟೈಯರ್ಗೆ ಬೆಂಕಿ ಹಚ್ಚಲು ಪ್ರತಿಭಟನಾಕಾರರು ಮುಂದಾದರು. ಈ ವೇಳೆ ಅವರನ್ನು ತಡೆಯಲು ಮುಂದಾದ ಪೊಲೀಸರೊಂದಿಗೆ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ತುಮಕೂರಿನಲ್ಲೂ ಬಿಜೆಪಿ ಪ್ರತಿಭಟನೆ
ನ.10ರಂದು ರಾಜ್ಯ ಸರಕಾರ ಹಮ್ಮಿಕೊಂಡಿರುವ ಟಿಪ್ಪು ಜಯಂತಿಗೆ ಜಿಲ್ಲೆಯಲ್ಲೂ ವಿರೋಧ ವ್ಯಕ್ತವಾಗಿದ್ದು, ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ವಿರೋಧದ ನಡುವೆಯೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರಕಾರ ಟಿಪ್ಪು ಜಯಂತಿ ಆಚರಣೆಗೆ ಸಿದ್ಧತೆ ನಡೆಸಿದೆ ಎನ್ನುವುದು ರಾಜ್ಯದ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಸರಕಾರದ ಆದೇಶದಂತೆ ಜಿಲ್ಲೆಯಲ್ಲಿಯೂ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆಸಲಾಗಿದೆ. ಇದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಟಿಪ್ಪು ಜಯಂತಿ ವಿರುದ್ಧ ರಾಜ್ಯಾದ್ಯಂತ ಎಲ್ಲೆಲ್ಲಿ ಪ್ರತಿಭಟನೆ
ಪ್ರತಿ ವರ್ಷ ವಿರೋಧ ಮಾಡಿದರು ಮತ್ತೆ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವುದು ಖಂಡನಾರ್ಹ. ಯಾವುದೇ ಕಾರಣಕ್ಕೂ ಮೈತ್ರಿ ಸರ್ಕಾ ಈ ಆಚರಣೆಗೆ ಮುಂದಾಗಬಾರದು ಎಂದು ಹಿಂದು ಪರ ಸಂಘಟನೆಗಳು ನಗರದ ಕಂದಾಯ ಭವನದ ಎದುರು ಪ್ರತಿಭಟನೆ ನಡೆಸಿದರು. ಚಿತ್ರದುರ್ಗ, ಮೈಸೂರು, ತುಮಕೂರು, ಕೊಡಗು, ಉತ್ತರ ಕನ್ನಡ, ರಾಯಚೂರು ಸೇರಿದಂತೆ ಅನೇಕ ಕಡೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಹಾಗೂ ಹಿಂದು ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಕೊಡಗು, ಮೈಸೂರಿನಲ್ಲಿ ಹೋರಾಟ
ಟಿಪ್ಪು ಜಯಂತಿ ವಿರೋಧಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲೆಯ ಡಿಸಿ ಕಚೇರಿ ಮುಂಭಾಗ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಟಿಪ್ಪು ಜಯಂತಿ ಕೈಬಿಡಬೇಕೆಂದು ಆಗ್ರಹಿಸಿರುವ ಪ್ರತಿಭಟನಾಕಾರರು, ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಸಹ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಸಾಥ್ ನೀಡಿದೆ.












Click it and Unblock the Notifications