ನವೆಂಬರ್ 2ರಂದು ಸಾರಿಗೆ ಸಂಸ್ಥೆ ನೌಕರರ ಮುಷ್ಕರ
ಬೆಂಗಳೂರು, ಅಕ್ಟೋಬರ್ 20 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ನವೆಂಬರ್ 2ರಿಂದ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸುವ ಬಗ್ಗೆ ನೌಕರರು ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ.
ಕೆಎಸ್ಆರ್ಟಿಸಿ ನೌಕರರ ಸಂಘದ ಸದಸ್ಯರು ಬೆಂಗಳೂರಿನ ಶಾಂತಿನಗರದಲ್ಲಿರುವ ಕೇಂದ್ರ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಿದ್ದಾರೆ. ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಬಸ್ಸುಗಳ ಸಂಚಾರ ಸ್ಥಗಿತಗೊಳಿಸಿ ಧರಣಿ ಮುಂದುವರೆಸುವ ಸಾಧ್ಯತೆ ಇದೆ.

ಕೆಎಸ್ಆರ್ಟಿಸಿ ನಿಗಮದೊಳಗೆ ವರ್ಗಾವಣೆ, ಬಿಎಂಟಿಸಿ ನೌಕರರಿಗೆ 2015-16ನೇ ಸಾಲಿನ ಬೋನಸ್ ಮತ್ತು ಡಿಎ ಹಿಂಬಾಕಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸದಿರಲು ನೌಕರರು ನಿರ್ಧರಿಸಿದ್ದಾರೆ. ಆದರೆ, ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಬಸ್ ಸಂಚಾರ ಸ್ಥಗಿತಗೊಳಿಸುವ ಸಾಧ್ಯತೆ ಇದೆ.
ನಮ್ಮ ಬೇಡಿಕೆಗಳನ್ನು ಈಗಾಗಲೇ ನೂತನ ಸಾರಿಗೆ ಸಚಿವರ ಗಮನಕ್ಕೆ ತಂದಿದ್ದೇವೆ. ಆದರೆ, ಅವರು ಇನ್ನೂ ಸ್ಪಂದಿಸಿಲ್ಲ. ಆದ್ದರಿಂದ ಧರಣಿ ನಡೆಸುವುದು ಅನಿವಾರ್ಯವಾಗಿದೆ ಎಂದು ನೌಕರರು ಹೇಳಿದ್ದಾರೆ. ಒಂದು ದಿನದ ಧರಣಿಗೆ ಸರ್ಕಾರ ಮಣಿಯದಿದ್ದರೆ, ಧರಣಿ ಮುಂದುವರೆಸುವ ಸಾಧ್ಯತೆ ಇದೆ.












Click it and Unblock the Notifications