ಕರ್ನಾಟಕದಲ್ಲಿ ಕನ್ನಡಿಗರಿಗೆ ತೊಂದರೆ ನೀಡಿದರೆ ಉಗ್ರ ಕ್ರಮ: ಎಂಇಎಸ್ಗೆ ಸಿಎಂ ಎಚ್ಚರಿಕೆ
ಬೆಂಗಳೂರು, ಮೇ 28 : ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಅವರು ಇಂದು ಆರ್.ಟಿ.ನಗರ ನಿವಾಸದ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಸಹಿಸುವುದಿಲ್ಲ ಎಂದು ಸ್ಪಷ್ಟವಾದ ಸಂದೇಶವನ್ನು ನೀಡಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಹಾಗೂ ಕರ್ನಾಟಕದಲ್ಲಿ ಕನ್ನಡಿಗರಿಗೆ ತೊಂದರೆ ತಂದರೆ ಸರ್ಕಾರ ಉಗ್ರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
ಪಠ್ಯಪುಸ್ತಕದ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನು ಕೈಬಿಡುವಂತೆ ಜೆಡಿಎಸ್ , ಕಾಂಗ್ರೆಸ್ ಅವರು ಒತ್ತಾಯಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು. ಈ ಬಗ್ಗೆ ವಸ್ತುಸ್ಥಿತಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ದಾಖಲೆಗಳ ಆಧಾರದ ಮೇಲೆ ಪರಿಶೀಲನೆ:
ಪೀರ್ ಪಾಷಾ ದರ್ಗಾ ಹಾಗೂ ಅನುಭವ ಮಂಟಪದ ಬಗ್ಗೆ ಬರುತ್ತಿರುವ ಹೇಳಿಕೆಗಳ ಬಗ್ಗೆ ಪ್ರಶ್ನಿಸಿದಾಗ, ಈ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ.ಇಂತಹ ವಿಷಯಗಳು ಹೇಳಿಕೆಗಳ ಮೇಲೆ ಅಲ್ಲ, ದಾಖಲೆಗಳ ಆಧಾರದ ಮೇಲೆ ಪರಿಶೀಲನೆ ಆಗುತ್ತದೆ ಎಂದು ತಿಳಿಸಿದರು.
ನ್ಯಾಯಾಲಯ ಆದೇಶವನ್ನು ಪಾಲನೆ ಮಾಡಬೇಕು
ಮಂಗಳೂರಿನಲ್ಲಿ ಮತ್ತೆ ಎದ್ದಿರುವ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿವಾದವನ್ನು ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ಮೂಲಕ ಬಗೆಹರಿಸಲಾಗಿದೆ. ಹಿಜಾಬ್ ವಿವಾದಕ್ಕೆ ನ್ಯಾಯಾಲಯ ತನ್ನ ತೀರ್ಪನ್ನು ನೀಡಿದೆ. ಎಲ್ಲರೂ ನ್ಯಾಯಾಲಯ ಆದೇಶವನ್ನು ಪಾಲನೆ ಮಾಡಬೇಕು. ಪಿಯುಸಿ ಗಳಲ್ಲಿ ಸಿಡಿಸಿ (ಕಾಲೇಜು ಅಭಿವೃದ್ಧಿ ಸಮಿತಿ), ಸಿಡಿಸಿ ಇಲ್ಲದಿರುವ ಕಡೆ ಕಾಲೇಜಿನ ಆಡಳಿತ ಮಂಡಳಿ ಅಥವಾ ಕಾಲೇಜಿನ ಪ್ರಾಂಶುಪಾಲರು ಆದೇಶದಂತೆ ನಡೆಯಬೇಕು. ಆದ್ದರಿಂದ ವಿಶ್ವವಿದ್ಯಾಲಯಗಳಲ್ಲಿ ಸಿಂಡಿಕೇಟ್ ನಿರ್ಣಯಗಳಂತೆ ನಡೆದುಕೊಳ್ಳಬೇಕು. ಸಿಂಡಿಕೇಟ್ ಅವರೂ ಕೂಡ ನ್ಯಾಯಾಲಯದ ಆದೇಶ ಪರಿಪಾಲನೆಗೆ ಒತ್ತು ನೀಡಬೇಕಾಗುತ್ತದೆ. ವಿದ್ಯಾರ್ಥಿಗಳು ಈ ವಿವಾದಗಳಲ್ಲಿ ಸಿಲುಕದೇ ವಿದ್ಯಾರ್ಜನೆಯ ಮೇಲೆ ಗಮನಹರಿಸಬೇಕು ಎಂದರು.
ಸಿದ್ದರಾಮಯ್ಯ ಯಾರು
ವಿರೋಧಪಕ್ಷ ನಾಯಕರಾದ ಸಿದ್ಧರಾಮಯ್ಯ ಅವರು ದ್ರಾವಿಡರೇ ಅಥವಾ ಆರ್ಯರೇ ಎಂಬುದಕ್ಕೆ ಮೊದಲು ಉತ್ತರ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಚೀನಾ ಗಡಿ ಆಕ್ರಮಿಸಿದಾಗ ಸುಮ್ಮನಿದ್ದರು
ಆರ್ ಎಸ್ ಎಸ್ ನವರು ಹೊರಗಿನಿಂದ ಬಂದವರು, ನೆಹರೂ ಅವರಿಗೆ ಹೋಲಿಕೆ ಮಾಡಬಾರದು ಎಂಬ ವಿರೋಧಪಕ್ಷ ನಾಯಕರಾದ ಸಿದ್ಧರಾಮಯ್ಯ ಅವರ ಹೇಳಿಕೆಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ನೆಹರೂ ಅವರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ, ಏಕೆಂದರೆ ಚೀನಾ ದೇಶ ಭಾರತ ಗಡಿಯನ್ನು ಆಕ್ರಮಿಸಿದಾಗ ಯಾವುದೇ ಕ್ರಮವನ್ನು ತೆಗೆದುಕೊಳ್ಳದೇ ನೆಹರೂ ಅವರು ಗಡಿಭಾಗವನ್ನು ಬಿಟ್ಟುಕೊಟ್ಟರು ಎಂದು ಹೇಳಿದರು.
ಮೋದಿ ಚೀನಾ ಗಡಿ ಪ್ರದೇಶ ಉಳಿಸಿದರು
ಪ್ರಧಾನಿ ನರೇಂದ್ರ ಮೋದಿಯವರು ಚೀನಾ ದೇಶ ಗಡಿಪ್ರದೇಶ ಆಕ್ರಮಿಸಿಕೊಳ್ಳಲು ಬಂದಾಗ ಗಟ್ಟಿಯಾಗಿ ನಿಂತು ಆ ಪ್ರದೇಶವನ್ನು ಉಳಿಸಿಕೊಂಡವರು. ಪಾಕಿಸ್ತಾನದ ಜೊತೆಗೆ ರಾಜಿ ಮಾಡಿಕೊಳ್ಳಲಿಲ್ಲ. ಭಾರತದ ಅಖಂಡತೆ ಹಾಗೂ ಏಕತೆಗೆ ಸಾಧನೆಯನ್ನು ಮಾಡಿದ್ದಾರೆ. ಮೋದಿಯವರು ಭಾರತವನ್ನು ಶಕ್ತಿಶಾಲಿಯಾಗಿ ಮಾಡಿದ್ದಾರೆ.ಹೀಗಾಗಿ ನೆಹರೂ ಅವರೊಂದಿಗೆ ಹೋಲಿಕೆ ಸಾಧ್ಯವೇ ಇಲ್ಲ ಎಂದು ತಿಳಿಸಿದರು.