ನೀರು ಪೂರೈಕೆ ಲೋಪವಾದರೆ ಕಠಿಣ ಕ್ರಮ : ಸಿದ್ದು ಎಚ್ಚರಿಕೆ
ಬೀದರ್, ಏಪ್ರಿಲ್ 15 : ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಲೋಪವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬರ ಪರಿಹಾರ ಕಾಮಗಾರಿ ಸಮರೋಪಾದಿಯಲ್ಲಿ ನಡೆಯಬೇಕು. ಈ ವಿಷಯದಲ್ಲಿ ಕುಂಟು ನೆಪಗಳನ್ನು ಹೇಳಿದರೆ ಸಹಿಸಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಆರಂಭಿಸಿರುವ ಮುಖ್ಯಮಂತ್ರಿಗಳು ಶುಕ್ರವಾರ ಬೀದರ್ ಜಿಲ್ಲೆಯಲ್ಲಿ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, 'ಹಳ್ಳಿಗಳಿಗೆ ಹೋಗಿ ಜಾನುವಾರುಗಳಿಗೆ ನೀರು, ಮೇವು ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ನೋಡಬೇಕು. ಅಗತ್ಯ ಇರುವ ಕಡೆ ಗೋಶಾಲೆ ತೆರೆಯಬೇಕು. ಹೊರ ರಾಜ್ಯಗಳಿಗೆ ಮೇವು ಸಾಗಣೆ ನಿಷೇಧಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಉದ್ಯೋಗ ಖಾತ್ರಿ ಯೋಜನೆಯಲ್ಲಿ ಫಲಾನುಭವಿಗಳಿಗೆ ಕೆಲಸ ಮಾಡಿದ ತಕ್ಷಣ, ಮೂರು ದಿನದೊಳಗೆ ಹಣ ನೀಡಬೇಕು. ಬಾಕಿ ಬಿಲ್ಲುಗಳನ್ನು ತಕ್ಷಣ ವಿಲೇವಾರಿ ಮಾಡಬೇಕು. ಜನರಿಗೆ ಕುಡಿಯುವ ನೀರು ಸಿಗುವಂತಾಗಬೇಕು, ಜಾನುವಾರುಗಳಿಗೆ ಮೇವು, ನೀರು ಮತ್ತು ಔಷಧಿಗಳನ್ನು ಒದಗಿಸುವ ಬಗ್ಗೆ ಅಧಿಕಾರಿಗಳು ಗಮನ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. [ಮುನಿಸಿಕೊಂಡಿರುವ ವರುಣ ಮಹಾಶಯನಿಗಾಗಿ ಕತ್ತೆಗಳ ಮದುವೆ]

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೃಷಿ ಸಚಿವ ಕೃಷ್ಣ ಭೈರೇಗೌಡ ಮತ್ತು ಕನ್ನಡ ಮತ್ತು ಸಂಸ್ಕೃತಿ ಹಾಗೂ ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವೆ ಉಮಾಶ್ರೀ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್ ಅವರುಗಳು ಉಪಸ್ಥಿತರಿದ್ದರು.
ಕಮಲಾಪುರಕ್ಕೂ ಭೇಟಿ : ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ ಜಿಲ್ಲೆಯ ಕಮಲಾಪುರದಲ್ಲಿ ಕುಡಿಯುವ ನೀರಿಗಾಗಿ ಅಳವಡಿಸಿರುವ ಕೊಳವೆ ಬಾವಿಯನ್ನು ವೀಕ್ಷಿಸಿದರು. ಬಳಿಕ ಗೋ ಶಾಲೆಗೆ ಭೇಟಿ ನೀಡಿದರು. ಪೌರಾಡಳಿತ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಅವರು ಜೊತೆಗಿದ್ದರು. [ಸಿದ್ದರಾಮಯ್ಯ ಬರ ಪ್ರವಾಸ, ವಿವರಗಳು]












Click it and Unblock the Notifications