ಬೇಜವಾಬ್ದಾರಿ ಹೇಳಿಕೆ ನಿಲ್ಲಿಸಿ, ನವೀನ್ ಮೃತದೇಹ ತರುವ ಕೆಲಸ ಮಾಡಿ: ಸಿದ್ದರಾಮಯ್ಯ
ಹಾವೇರಿ, ಮಾ.9: ವಿದೇಶಾಂಗ ಸಚಿವಾಲಯದ ಅಜಾಗರೂಕತೆಯಿಂದ ಉಕ್ರೇನ್ನಲ್ಲಿ ಕನ್ನಡಿಗ ವಿದ್ಯಾರ್ಥಿ ನವೀನ್ ಪ್ರಾಣ ಹೋಗಿದೆ ಎಂದು ಸಿದ್ದರಾಮಯ್ಯ ಅರೋಪಿಸಿದರು.
ಉಕ್ರೇನ್ನಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲ್ಲೂಕಿನ ನವೀನ್ ಮನೆಗೆ ಬುಧವಾರ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಬಳಿಕ ರಾಣೆಬೆನ್ನೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಎಲ್ಲಾ ದೇಶಗಳ ಜನರು ವಿದೇಶಗಳಿಗೆ ಹೋಗಿ ವ್ಯಾಸಂಗ ಮಾಡೋದು ಸಹಜ. ಹಾಗೆಯೇ ನವೀನ್ ಕೂಡ ಹೋಗಿದ್ದರು. ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಂಡಂತೆ ಕಾಣುತ್ತಿಲ್ಲ. ಇದು ರಾಜಕೀಯ ಕಾರಣಕ್ಕಾಗಿ ಹೇಳುತ್ತಿರುವ ಮಾತಲ್ಲ. ರಷ್ಯಾ ದೇಶ ಯುಕ್ರೇನ್ ಮೇಲೆ ದಾಳಿ ಮಾಡಲಿದೆ ಎಂಬ ವಿಚಾರ ಬಹಳ ದಿನಗಳಿಂದ ಚರ್ಚೆಯಾಗುತ್ತಿತ್ತು. ಈ ಬಗ್ಗೆ ವಿದೇಶಾಂಗ ಕಚೇರಿಗೂ ಮಾಹಿತಿಯಿರುತ್ತೆ. ಯುದ್ಧ ಪ್ರಾರಂಭವಾಗುವ ಮೊದಲೇ ಮುಂಜಾಗ್ರತಾ ಕ್ರಮವನ್ನು ಕೈಗೊಂಡು ಅಲ್ಲಿರುವ ಭಾರತೀಯರನ್ನು ತವರಿಗೆ ಕರೆತರಬೇಕಿತ್ತು. ಬೇರೆ ದೇಶದ ಬಹುತೇಕ ಜನ ಅವರವರ ದೇಶಕ್ಕೆ ಹೋಗಿದ್ದಾರೆ, ಭಾರತೀಯರೇ ಹೆಚ್ಚು ಜನ ಅಲ್ಲಿ ಯುದ್ಧದ ಮಧ್ಯೆ ಸಿಕ್ಕಿಬಿದ್ದಿರುವುದು. ಒಂದೆರೆಡು ತಿಂಗಳ ಮೊದಲೇ ಭಾರತೀಯರನ್ನು ಕರೆತಂದಿದ್ದರೆ ನವೀನ್ ಪ್ರಾಣ ಉಳಿಯುತ್ತಿತ್ತು ಎಂದು ಹೇಳಿದರು.

ಕೂಡಲೇ ನವೀನ್ ಅವರ ಮೃತದೇಹವನ್ನು ಭಾರತಕ್ಕೆ ತರಿಸುವ ಕೆಲಸ ಮಾಡಬೇಕು ಎಂದು ವಿದೇಶಾಂಗ ಮಂತ್ರಿಗಳನ್ನು ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ. ಕೋಳಿವಾಡ ಅವರ ಪುತ್ರ ಈ ತಿಂಗಳ ಒಂದರಂದೇ ವಿದೇಶಾಂಗ ಇಲಾಖೆಗೆ ಪತ್ರ ಬರೆದು ವಿಮಾನ ನಮ್ಮ ಬಳಿಯೇ ಇದೆ, ನಾವು ಮೃತದೇಹವನ್ನು ತರುವ ವ್ಯವಸ್ಥೆ ಮಾಡುತ್ತೇವೆ, ನಮಗೆ ಅನುಮತಿ ನೀಡಿ ಎಂದು ಕೇಳಿದ್ದರು. ಆ ಪತ್ರಕ್ಕೆ ಇವತ್ತಿನವರೆಗೂ ಉತ್ತರ ಬಂದಿಲ್ಲ. ಇದರಲ್ಲೇ ಈ ವಿಷಯದಲ್ಲಿ ಕೇಂದ್ರ ಸರ್ಕಾರ ಎಷ್ಟು ಬೇಜವಾಬ್ದಾರಿಯುತವಾಗಿ ನಡೆದುಕೊಂಡಿದೆ ಎಂಬುದು ಕಾಣುತ್ತದೆ. ಇಂಥಾ ಸಂದರ್ಭದಲ್ಲಿ ವಿದೇಶಾಂಗ ಸಚಿವಾಲಯ ಪಾದರಸದಂತೆ ಕೆಲಸ ಮಾಡಬೇಕು. ವಿದೇಶಾಂಗ ಸಚಿವಾಲಯದ ಅಜಾಗರೂಕತೆಯಿಂದ ನವೀನ್ ಪ್ರಾಣ ಹೋಗಿದೆ ಎಂದರು.

ನವೀನ್ ಮೆರಿಟ್ ವಿದ್ಯಾರ್ಥಿ ಹೌದು. ಆದರೆ ನೀಟ್ ಪರೀಕ್ಷೆಯಲ್ಲಿ ಸರ್ಕಾರಿ ಮೆಡಿಕಲ್ ಸೀಟು ಪಡೆಯುವಷ್ಟು ರ್ಯಾಂಕ್ ಬಂದಿರಲಿಲ್ಲ. ಹೀಗಾಗಿ ವಿದೇಶಕ್ಕೆ ಹೋಗಬೇಕಾಯಿತು. ಪ್ರಹ್ಲಾದ್ ಜೋಶಿ ಕೇಂದ್ರ ಸಚಿವರಾಗಿದ್ದುಕೊಂಡು ಬೇಜಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಿ, ನವೀನ್ ಮೃತದೇಹ ತರಿಸುವ ಕೆಲಸ ಮಾಡಬೇಕು.
ಶಿಕ್ಷಣ ವ್ಯವಸ್ಥೆ ಸಂಪೂರ್ಣ ಸರಿಯಿದೆ ಎಂದು ಹೇಳಲಾಗಲ್ಲ. ಇಲ್ಲಿ ಸೀಟು ಸಿಗದವರು ಬೇರೆ ದೇಶಕ್ಕೆ ಹೋಗ್ತಾರೆ. ಬೇರೆ ದೇಶದ ವಿದ್ಯಾರ್ಥಿಗಳು ಭಾರತಕ್ಕೆ ಬರ್ತಾರೆ. ಇದೆಲ್ಲಾ ಸಾಮಾನ್ಯವಾಗಿ ನಡೆಯುತ್ತಾ ಇರುವ ಸಂಗತಿ. ನೀಟ್ ಪರೀಕ್ಷೆಯ ಅಂಕ ಮೆಡಿಕಲ್ ಸೀಟ್ ಸಿಗಲು ಮುಖ್ಯವಾಗುತ್ತೆ. ಶಿಕ್ಷಣ ವ್ಯವಸ್ಥೆಯ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡುವುದಕ್ಕೆ ಇದು ಸೂಕ್ತ ಸಮಯವಲ್ಲ. ಬೇರೊಂದು ಸಮಯದಲ್ಲಿ ಈ ಬಗ್ಗೆ ಮಾತನಾಡೋಣ ಎಂದು ಹೇಳಿದರು.












Click it and Unblock the Notifications