ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿಗಳ ಮೇಲೆ ಬೆಳಗಾವಿಯಲ್ಲಿ ಹಲ್ಲೆ: ಮುಂದಿನ ಅನಾಹುತಕ್ಕೆ ಸರ್ಕಾರವೇ ಹೊಣೆ ಎಂದ ಕರವೇ
ಬೆಂಗಳೂರು, ಡಿಸೆಂಬರ್ 02: ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕಾಗಿ ವಿದ್ಯಾರ್ಥಿಗಳನ್ನು ಥಳಿಸಿದ ಪ್ರಕರಣವೀಗ ದೇಶದಾದ್ಯಂತ ಸುದ್ದಿ ಮಾಡಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಭಾಗಗಳಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ.
ಈ ಪ್ರಕರಣವನ್ನು ಖಂಡಿಸಿ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಕಾಲೇಜಿಗೆ ಮುತ್ತಿಗೆ ಹಾಕಲು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಯತ್ನಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾದ ಅಧಿಕಾರಗಳು ಹಾಗೂ ಆರೋಪಿಗಳನ್ನು ಕೆಲಸದಿಂದ ವಜಾಗೊಳಸಿ, ಅವರನ್ನು ಬಂಧಿಸಬೇಕೆಂಬುದು ಕನ್ನಡ ಪರ ಸಂಘಟನೆಗಳ ಒತ್ತಾಯವಾಗಿದೆ..
ಮನೆ ಮನೆಯ ಮೇಲೂ ಕನ್ನಡ ಬಾವುಟ, ಎಚ್ಡಿಕೆಯಿಂದ ಧ್ವಜಾರೋಹಣ
ಬೆಳಗಾವಿಯಲ್ಲಿ ಮುಂದಾಗುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆ
ಕನ್ನಡ ವಿದ್ಯಾರ್ಥಿಗಳ ಮೇಲೆ ಬೆಳಗಾವಿಯಲ್ಲಿ ಹಲ್ಲೆ ನಡೆಸಿರುವ ಪ್ರಕರಣದ ವಿರುದ್ಧ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಅವರು, 'ವಿದ್ಯಾರ್ಥಿಗಳ ಮೇಲೆ ಮಾಡಿದ ಇಬ್ಬರು ಅಧಿಕಾರಿಗಳನ್ನು ತಕ್ಷಣವೇ ಅಮಾನತು ಮಾಡಬೇಕು' ಎಂದು ಒತ್ತಾಯಿಸಿದ್ದಾರೆ.
ಇಲ್ಲವಾದಲ್ಲಿ ಬೆಳಗಾವಿಯಲ್ಲಿ ಮುಂದೆ ನಡೆಯುವ ಅನಾಹುತಕ್ಕೆ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆ ಎಂದು ನಾರಾಯಣಗೌಡ ಎಚ್ಚರಿಕೆ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಗೆ ಹೋಗಿ ಸಾವಿರಾರು ಕನ್ನಡ ಬಾವುಟ ಹಾರಿಸುತ್ತೇವೆ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸೃಷ್ಟಿಯಾಗಿದೆ. ಇಂತಹ ಗಂಭೀರ ಸಮಯದದಲ್ಲೇ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆಯಾಗಿದೆ. ಹಲ್ಲೆಯಾದ ನಂತರ ಪೊಲೀಸ್ ಠಾಣೆಗೆ ಕರೆದೊಯ್ದ ಪೊಲೀಸರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆಂದು ವಿದ್ಯಾರ್ಥಿ ಹೇಳುತ್ತಿದ್ದಾನೆ. ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಹಲ್ಲೆ ಆಗುತ್ತದೆ ಎನ್ನುವುದಾದರೆ, ನಾವು ಬೆಳಗಾವಿಗಾವಿಗೆ ಹೋಗುತ್ತೇವೆ. ಅಲ್ಲಿ ಸಾವಿರಾರು ಕನ್ನಡ ಬಾವುಟಗಳನ್ನು ಹಾರಿಸುತ್ತೇವೆ. ಅದ್ಯಾರು ತಡೆಯುತ್ತಾರೆ? ಅದ್ಯಾವ ಅಧಿಕಾರಿ ಅಡ್ಡ ಬರುತ್ತಾರೆ ಎಂಬುದನ್ನು ನೋಡುತ್ತೇವೆ ಎಂದು ನಾರಾಯಣ ಗೌಡ ಹೇಳಿದ್ದಾರೆ.
ಬೆಳಗಾವಿಯಲ್ಲಿ ಧ್ವಜ ಹಾರಿಸಲು ಯಾರ ಅಪ್ಪಣೆಯೂ ಬೇಕಿಲ್ಲ
ಬೆಳಗಾವಿ ನಮ್ಮ ನೆಲ. ಕರ್ನಾಟಕಕ್ಕೆ ಸೇರಿದ್ದು. ಇಲ್ಲಿ ಕನ್ನಡ ಧ್ವಜ ಹಾರಿಸಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ನಮ್ಮ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ತಕ್ಷಣವೇ ಅಮಾನತು ಮಾಡಬೇಕು. ಇಲ್ಲವಾದರೇ, ಲಕ್ಷಾಂತರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯರ್ತರು ಬೆಳಗಾವಿಗೆ ಪ್ರವೇಶಿಸಲಿದ್ದಾರೆ. ಬೆಳಗಾವಿಯಾದ್ಯಂತ ಕನ್ನಡ ಬಾವುಟಗಳನ್ನು ಹಾರಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿದ ಕುಮಾರಸ್ವಾಮಿ
ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕಾಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವುದನ್ನು ಮಾಜಿ ಸಿಎಂ ಕುಮಾರಸ್ವಾಮಿ ಖಂಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 'ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳ ಬಂಧನ
ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕಾಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣವು ರಾಜ್ಯದಾದ್ಯಂತ ಸದ್ದು ಮಾಡಿದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಳಗಾವಿ ಪೊಲೀಸರು ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಂಡಿದ್ದಾರೆ.