ಕರ್ನಾಟಕಕ್ಕೆ ಬರುವ ಕೇರಳ ವಿದ್ಯಾರ್ಥಿಗಳಿಗೆ ಸೂಚನೆ
ಬೆಂಗಳೂರು, ಫೆಬ್ರವರಿ 10: ಕೇರಳದಿಂದ ಕರ್ನಾಟಕದ 5 ಜಿಲ್ಲೆಗಳಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವನ್ನು ತರಬೇಕು. ಕರ್ನಾಟಕ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳು 72 ಗಂಟೆಗಳ ಮೊದಲಿನ ಕೋವಿಡ್ ನೆಗೆಟೀವ್ ಪ್ರಮಾಣ ಪತ್ರ ತರಬೇಕು.
ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಂದ ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವಿಕೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಕೇರಳದಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ 15 ದಿನಕ್ಕೊಮ್ಮೆ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.

ಕೇರಳದ ಉತ್ತರ ಭಾಗದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ, ನರ್ಸಿಂಗ್, ಎಂಬಿಬಿಎಸ್ ಸೇರಿದಂತೆ ಇತರ ಕೋರ್ಸ್ಗಳ ವ್ಯಾಸಂಗಕ್ಕೆ ಬರುವ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆರೋಗ್ಯ ಇಲಾಖೆ ಕಾಲೇಜುಗಳಿಗೆ ಸೂಚಿಸಿದೆ.
ಡಿಸೆಂಬರ್ 25ರ ಬಳಿಕ ಮಂಗಳೂರಿನ 2 ಇಂಜಿನಿಯರಿಂಗ್ ಕಾಲೇಜು, 4 ನರ್ಸಿಂಗ್ ಕಾಲೇಜುಗಳಲ್ಲಿ ಕೇರಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ನಡೆಸಿದಾಗ 2806 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಕಳೆದ ವಾರ ಮಂಗಳೂರಿನ ನರ್ಸಿಂಗ್ ಕಾಲೇಜಿಗೆ ಆಗಮಿಸಿದ ಕೇರಳದ 49 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಪತ್ತೆಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾಡಳಿತ ಗಡಿ ಪ್ರದೇಶದಲ್ಲಿ ಕಣ್ಗಾವಲವನ್ನು ಹೆಚ್ಚಿಸಲು ತೀರ್ಮಾನವನ್ನು ಕೈಗೊಂಡಿದೆ.
ಫೆಬ್ರವರಿ 9ರ ಮಂಗಳವಾರ ಕೇರಳದಲ್ಲಿ 5,214 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 9,77,395ಕ್ಕೆ ಏರಿಕೆಯಾಗಿದೆ.












Click it and Unblock the Notifications