ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಹೇಳಿಕೆ!
ಬೆಂಗಳೂರು, ನ. 12: ಬಿಟ್ ಕಾಯಿನ್ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೇ ವಿಚಾರವನ್ನಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರದ ಮೇಲೆ ತೀವ್ರ ಆರೋಪ ಮಾಡುತ್ತಿದ್ದಾರೆ. ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂಬ ಚರ್ಚೆಗಳು ಬಿಜೆಪಿ ವಲಯದಲ್ಲಿ ಆಗುತ್ತಿವೆ.
ಬಿಟ್ ಕಾಯಿನ್ ಪ್ರಕರಣದ ತನಿಖೆಯ ಬಗ್ಗೆಯೂ ಕಾಂಗ್ರೆಸ್ ನಾಯಕರು, ಅದರಲ್ಲಿಯೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಹಾಕಿದ್ದಾರೆ. ಪ್ರಕರಣದ ತನಿಖೆಯ ಬಗ್ಗೆ ಕಾಂಗ್ರೆಸ್ ನಾಯಕರು ಸಂಶಯ ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕರಣದ ತನಿಖೆಯ ಬಗ್ಗೆ ಮಾತನಾಡಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಶುಕ್ರವಾರ ಸಿಎಂ ಬೊಮ್ಮಾಯಿ ಹೇಳಿದ್ದೇನು? ಮುಂದಿದೆ ಮಾಹಿತಿ!
ಬಿಟ್ಕಾಯಿನ್ ಅಕ್ರಮದ ದಾಖಲೆಗಳನ್ನು ಬಿಜೆಪಿ ಮಂತ್ರಿಗಳೇ ಕೊಡುತ್ತಿದ್ದಾರೆ: ಡಿ.ಕೆ. ಶಿವಕುಮಾರ್.
ಕಾಂಗ್ರೆಸ್ ನಾಯಕರಿಗೆ ಸಿಎಂ ಸವಾಲು!
"ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ. ಇದನ್ನು ಸಾಬೀತು ಪಡಿಸುವ ದಾಖಲೆಗಳನ್ನು ಈಗಾಗಲೇ ಪ್ರಕರಣ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸಿ, ಆರೋಪಗಳನ್ನು ಸಾಬೀತು ಮಾಡಲಿ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುಜರಾತ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಸನ್ಮಾನ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.
ಈ ಹಗರಣ ಏನು?: ಸಿಎಂ ಪ್ರಶ್ನೆ!
ಕಾಂಗ್ರೆಸ್ ಮಾಡುತ್ತಿರುವ ಆರೋಪಗಳ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, "ಪ್ರತಿದಿನ ಈ ವಿಷಯದ ಕುರಿತು ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಈ ಕುರಿತು ಆರೋಪಗಳನ್ನು ಮಾಡುತ್ತಿರುವವರು, ಹಗರಣ ಏನು? ಹಾಗೂ ಇದರಲ್ಲಿ ಯಾರು ಭಾಗಿಯಾಗಿದ್ದಾರೆ? ಎಂಬುದನ್ನು ತಿಳಿಸಲಿ. ಈಗಾಗಲೇ 8-9 ತಿಂಗಳ ಹಿಂದೆಯೇ ಪ್ರಕರಣವನ್ನು ಇಡಿ ತನಿಖೆಗೆ ಹಸ್ತಾಂತರಿಸಲಾಗಿದೆ. ಅಂತರರಾಷ್ಟ್ರೀಯ ವಿಷಯವಾಗಿರುವುದರಿಂದ ಸಿಬಿಐನ ಇಂಟರ್ ಪೋಲ್ ವಿಭಾಗಕ್ಕೂ ಮಾಹಿತಿ ನೀಡಲಾಗಿದೆ' ಎಂದು ಸ್ಪಷ್ಟನೆ ನೀಡಿದ್ದಾರೆ.
ಬಿಟ್ ಕಾಯಿನ್ ಪ್ರಕರಣದಿಂದ ಸರ್ಕಾರಕ್ಕೆ ಸಂಚಕಾರ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಬಿಟ್ ಕಾಯಿನ್ ಸಂಚಕಾರ ತರಲಿದೆ ಎಂಬ ಆರೋಪಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. "ಪ್ರತಿಪಕ್ಷಗಳ ಆರೋಪ ರಾಜಕೀಯ ಪ್ರೇರಿತವಾಗಿದೆ. ಈ ಹಗರಣದ ಮೊತ್ತದ ಬಗ್ಗೆ ಕಾಂಗ್ರೆಸ್ ಪಕ್ಷದ ಒಬ್ಬೊಬ್ಬರು ಒಂದೊಂದು ಹೇಳಿಕೆ ಕೊಡುತ್ತಿದ್ದಾರೆ. ಅದಕ್ಕೆ ಯಾವುದೇ ದಾಖಲೆಗಳ ಆಧಾರವಿಲ್ಲ. ನಮ್ಮ ಸರ್ಕಾರ ಈ ವಿಷಯದಲ್ಲಿ ಮುಕ್ತವಾಗಿದೆ. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೂ ಇಲ್ಲ. ನಾವು ಯಾರೂ ಭಾಗಿಯಾಗಿಲ್ಲ. ಅವರ ಬಳಿ ಇರುವ ಮಾಹಿತಿಯನ್ನು ತನಿಖಾ ಸಂಸ್ಥೆಗಳಿಗೆ ನೀಡಲಿ. ತನಿಖೆಯಾಗಲಿ, ಸತ್ಯ ಹೊರಬರಲಿ' ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.
ಬೆಂಕಿ ಇಲ್ಲದೆ ಹೊಗೆ ಆಡುತ್ತದೆಯೇ?
ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, "ಈ ಬಗ್ಗೆ ಪ್ರಧಾನಮಂತ್ರಿಗಳ ಜತೆ ಮಾತನಾಡಿದ್ದೇನೆ, ಅವರು ಇದು ಪ್ರಮುಖ ವಿಚಾರವಿಲ್ಲ ಎಂದಿರುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ. ಬೆಂಕಿ ಇಲ್ಲದೆ ಹೊಗೆ ಆಡುತ್ತದೆಯೇ? ಸಿಸಿಬಿ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ 31 ಬಿಟ್ ಕಾಯಿನ್ ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಆ ಬಿಟ್ ಕಾಯಿನ್ ಈಗ ಎಲ್ಲಿದೆ? ಯಾರ ಬಳಿ ಇದೆ? ಯಾರು ಸೀಜ್ ಮಾಡಿದ್ದಾರೆ? ಅದರ ಪಂಚನಾಮಗಳಾಗಿವೆಯೇ? ಇವೆಲ್ಲವನ್ನೂ ಸರ್ಕಾರ ಜನರ ಮುಂದೆ ಇಡಬೇಕು. ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರು, ಕಾಂಗ್ರೆಸ್ ನಾಯಕರ ಮಕ್ಕಳು ಭಾಗಿಯಾಗಿದ್ದಾರೆ ಎನ್ನುತ್ತಾರೆ. ಹಾಗಾದರೆ ಎಲ್ಲರ ಹೆಸರನ್ನೂ ಬಯಲು ಮಾಡಲಿ, ಅವರನ್ನು ಬಂಧಿಸಲಿ. ಕೆಲವು ಮಾಧ್ಯಮಗಳಲ್ಲಿ ಕಾಂಗ್ರೆಸ್ ನಾಯಕರ ಮಕ್ಕಳು ಭಾಗಿಯಾಗಿದ್ದಾರೆ ಎಂದು ವರದಿ ಬರೆಸಿದ್ದಾರೆ. ಅದನ್ನು ಬರೆಸಿದ್ದು ಯಾರು ಎಂದು ನಮಗೆ ಗೊತ್ತಿಲ್ಲವೇ? ಅವರು ಏನು ಬೇಕಾದರೂ ಬರೆಸಿಕೊಳ್ಳಲಿ' ಎಂದು ಪ್ರಶ್ನಿಸಿದ್ದಾರೆ.
Recommended Video