ಸುಡಾನ್ನಲ್ಲಿ ಸಿಲುಕಿರುವ ಗೋಳಿಗೆ ಬೆಲೆ ಇಲ್ಲವೇ?
ಬೆಂಗಳೂರು, ಏಪ್ರಿಲ್ 22: ಸಂಘರ್ಷ ಪೀಡಿತ ಸುಡಾನ್ನಲ್ಲಿ 3,000 ಕ್ಕೂ ಹೆಚ್ಚು ಭಾರತೀಯರು ಸಿಲುಕಿಕೊಂಡಿದ್ದಾರೆ. ಅದರಲ್ಲಿ 200 ಕನ್ನಡಿಗರೂ ಇದ್ದಾರೆ. ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರುವಂತೆ ಮಾಜಿ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಪ್ರಧಾನಿ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, 'ನಮಗೆ ತಿನ್ನುವುದಕ್ಕೆ ಏನೂ ಇಲ್ಲ. ನಿಮಗೆ ಏನು ಮಾಡಲಿಕ್ಕೆ ಸಾಧ್ಯ? ನೀವು ಇರುವ ಸ್ಥಳದಲ್ಲಿಯೇ ಬಾಗಿಲು ಹಾಕಿಕೊಂಡು ಇರಿ. ಇದು ಕಷ್ಟದಲ್ಲಿರುವ ನಮ್ಮ ಕನ್ನಡಿಗರ ಗೋಳಿಗೆ ಸುಡಾನ್ನ ರಾಯಭಾರ ಕಚೇರಿಯ ಪ್ರತಿಕ್ರಿಯೆ. ಜೈಶಂಕರ್ ಅವರೇ, ಇದನ್ನು ಕೇಳಿ ಗಾಬರಿಯಾಗಲಿಲ್ಲವೇ' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಸುಡಾನ್ನಲ್ಲಿ ಕಳೆದ 8-10 ದಿನಗಳಿಂದ ನಮ್ಮ ಕನ್ನಡಿಗ ಹಕ್ಕಿಪಿಕ್ಕಿ ಜನಾಂಗದವರು ತಿನ್ನಲು ಅನ್ನ ಇಲ್ಲದೆ, ಕುಡಿಯಲು ನೀರಿಲ್ಲದೆ ನರಳಾಡುತ್ತಿದ್ದಾರೆ. ನಮ್ಮ 'ವಿಶ್ವಗುರು' ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ -ಭರವಸೆಗಳಲ್ಲಿ ಕಾಲಕಳೆಯುತ್ತಿದ್ದಾರೆ. ಕನ್ನಡಿಗರ ರಕ್ಷಣೆಗೆ ಯಾರಿದ್ದಾರೆ' ಎಂದು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಚುನಾವಣೆಯ ಬುರುಡೆ ಭಾಷಣಗಳ ಮಧ್ಯೆ ಬಿಡುವಾದರೆ ಸುಡಾನ್ನಲ್ಲಿ ಕಷ್ಟದಲ್ಲಿರುವ ಕನ್ನಡಿಗರ ಕಡೆ ಗಮನ ಕೊಡಿ. ಪ್ರಧಾನಿ ನರೇಂದ್ರ ಮೋದಿಯವರಿಗೆ ಈಶ್ವರಪ್ಪನವರಿಗೆ ಪೋನ್ ಮಾಡಲು ಇರುವಷ್ಟು ಪುರುಸೊತ್ತು ಕನ್ನಡಿಗರ ರಕ್ಷಣೆಗೆ ಇಲ್ಲವೇ? ಎಂದು ಕೇಳಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸುಡಾನ್ನಲ್ಲಿ ಸಿಲುಕಿದ 3,000 ಕ್ಕೂ ಹೆಚ್ಚು ಭಾರತೀಯರು
ಸಂಘರ್ಷ-ಪೀಡಿತ ದೇಶದಲ್ಲಿ ಸಿಲುಕಿರುವ ಸುಮಾರು 3,000 ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಯೋಜನೆಗಳನ್ನು ಸಿದ್ಧಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಯುಎಸ್, ಯುಕೆ, ಜರ್ಮನಿ, ಸ್ಪೇನ್, ಜಪಾನ್ ಮತ್ತು ದಕ್ಷಿಣ ಕೊರಿಯಾಗಳು ಸುಡಾನ್ನಿಂದ ತಮ್ಮ ನಾಗರಿಕರನ್ನು ಸ್ಥಳಾಂತರಿಸಲು ಮುಂದಾಗಿವೆ.
ಸುಡಾನ್ನಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಮೋದಿ, 'ಸ್ಥಳಾಂತರಿಸುವ ಯೋಜನೆಗಳು, ವೇಗವಾಗಿ ಬದಲಾಗುತ್ತಿರುವ ಭದ್ರತಾ ಭೂದೃಶ್ಯ ಮತ್ತು ವಿವಿಧ ಆಯ್ಕೆಗಳ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು' ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸುಡಾನ್ನ ರಾಯಭಾರಿ ಬಿ ಎಸ್ ಮುಬಾರಕ್ ಇತರರು ಉಪಸ್ಥಿತರಿದ್ದರು.
ಪ್ರಸ್ತುತ ದೇಶದಾದ್ಯಂತ ನೆಲೆಸಿರುವ 3,000 ಕ್ಕೂ ಹೆಚ್ಚು ಭಾರತೀಯ ನಾಗರಿಕರ ಸುರಕ್ಷತೆಯ ಮೇಲೆ ನಿರ್ದಿಷ್ಟವಾಗಿ ಗಮನಹರಿಸುವ ಮೂಲಕ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿ ಮೋದಿ ಹೇಳಿದ್ದಾರೆ.
'ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ಜಾಗರೂಕರಾಗಿರಲು, ಬೆಳವಣಿಗೆಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಸುಡಾನ್ನಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆಯನ್ನು ನಿರಂತರವಾಗಿ ಮೌಲ್ಯಮಾಪನ ಮಾಡಲು ಮತ್ತು ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ವಿಸ್ತರಿಸಲು ಸೂಚಿಸಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿಕೆ ತಿಳಿಸಿದೆ.












Click it and Unblock the Notifications