ಕರ್ನಾಟಕದಲ್ಲಿ ಗುರುವಾರ ರಾಷ್ಟ್ರೀಯ ಹೆದ್ದಾರಿಗಳು ಬಂದ್
ಬೆಂಗಳೂರು, ಅಕ್ಟೋಬರ್ 26; ಗುರುವಾರ ಕರ್ನಾಟಕದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವುದಾಗಿ ರೈತರು ಘೋಷಣೆ ಮಾಡಿದ್ದಾರೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ತನಕ ಈ ಪ್ರತಿಭಟನೆ ನಡೆಯಲಿದೆ.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿ ಟನ್ ಕಬ್ಬಿಗೆ 5,500 ರೂ. ದರ ನಿಗದಿ ಮಾಡುವಂತೆ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ.
ಈ ಕುರಿತು ವಿಡಿಯೋ ಮಾಡಿರುವ ಕುರುಬೂರು ಶಾಂತಕುಮಾರ್, "ಬೆಕ್ಕಿಗೆ ಚೆಲ್ಲಾಟ, ಇಲಿಗೆ ಪ್ರಾಣ ಸಂಕಟ ಎಂಬಂತೆ ರಾಜ್ಯದ ಕಬ್ಬು ಬೆಳೆಗಾರರ ಪರಿಸ್ಥಿತಿಯಾಗಿದೆ. 30 ಲಕ್ಷ ಕಬ್ಬು ಬೆಳೆಗಾರರ ಪರವಾಗಿ ರಾಜ್ಯದ ಉದ್ದಗಲಕ್ಕೆ ಪ್ರತಿಭಟನೆ ನಡೆಯುತ್ತಿದೆ. ಕಬ್ಬಿನ ಬೆಲೆ ಏರಿಕೆ ಕುರಿತು ಸರ್ಕಾರ 4 ಸಭೆಗಳನ್ನು ಮಾಡಿದೆ" ಎಂದರು.

"ಸಭೆಗಳನ್ನು ನಡೆಸಿದರೂ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ, ವಿಳಂಬ ನೀತಿ ಅನುಸರಿಸುತ್ತಿವೆ. ಈ ಹಿನ್ನಲೆಯಲ್ಲಿ ಅಕ್ಟೋಬರ್ 27ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ತನಕ ಹೋರಾಟ ಮಾಡಲು ನಿರ್ಧರಿಸಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ.
"ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ರಸ್ತೆ ತಡೆ ಚಳವಳಿಯನ್ನು ನಡೆಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜನರು, ಪ್ರಯಾಣಿಕರು ರಸ್ತೆ ತಡೆ ಚಳವಳಿ ಸಮಯದಲ್ಲಿ ಸಹಕಾರ ನೀಡಬೇಕು" ಎಂದು ಕುರುಬೂರು ಶಾಂತಕುಮಾರ್ ಮನವಿ ಮಾಡಿದ್ದಾರೆ.
"ಸರ್ಕಾರಕ್ಕೆ ಚಳವಳಿಗಳ ಮೂಲಕ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ರೈತರ ಹಿತದೃಷ್ಟಿಯಿಂದ ಜನರು ಹೋರಾಟಕ್ಕೆ ಬೆಂಬಲ ನೀಡಬೇಕು" ಎಂದು ಕುರುಬೂರು ಶಾಂತಕುಮಾರ್ ವಿಡಿಯೋ ಮೂಲಕ ಕೇಳಿಕೊಂಡಿದ್ದಾರೆ.
ಸಚಿವರ ಜೊತೆ ಸಭೆ; ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಕಳೆದ ವಾರ ರೈತ ಮುಖಂಡರ ಸಭೆ ನಡೆದಿತ್ತು.
ಸಭೆಯಲ್ಲಿ ರೈತ ಮುಖಂಡರು ರಾಜ್ಯ ಸಲಹಾ ಬೆಲೆ (ಎಸ್ಎಪಿ) ಘೋಷಣೆ ಮಾಡುವಂತೆ ಆಗ್ರಹಿಸಿದ್ದರು. ಆದರೆ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಂಡಿರಲಿಲ್ಲ.












Click it and Unblock the Notifications