ಮೊದಲೇ ಅನುಮಾನವಿತ್ತು ಮುತಾಲಿಕ್ ಜೀ, ಸಚಿವರ ಟ್ವೀಟ್!
ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಕಾರ್ಕಳದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿರುವ ಪ್ರಮೋದ್ ಮುತಾಲಿಕ್ ವಿರುದ್ಧ ಸಚಿವ, ಕಾರ್ಕಳದ ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು, ಫೆಬ್ರವರಿ 13; ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿದ್ದಾರೆ.
ಸೋಮವಾರ ಕಾರ್ಕಳದ ಬಿಜೆಪಿ ಶಾಸಕ, ಇಂಧನ ಸಚಿವ ವಿ. ಸುನಿಲ್ ಕುಮಾರ್ ಸರಣಿ ಟ್ವೀಟ್ ಮಾಡಿದ್ದಾರೆ. 'ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ!' ಎಂದು ಹೇಳಿದ್ದಾರೆ.

'ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.
'ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ ವೋಟು, ನೋಟು ಹೇಳಿಕೆಯ ಮೂಲಕ ತಿಳಿಸಿದ್ದಿರಿ. ಈಗ ತನುಮನಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ತನು-ಮನ-ಧನ-ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ' ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.
ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ !
— Sunil Kumar Karkala (@karkalasunil) February 13, 2023
ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. (1/3)
ಸಚಿವರ ಟ್ವೀಟ್ ಏಕೆ?; ಸೋಮವಾರ ಮಂಗಳೂರಿನಲ್ಲಿ ಪ್ರಮೋದ್ ಮುತಾಲಿಕ್ ಪತ್ರಿಕಾಗೋಷ್ಠಿ ನಡೆಸಿದರು. "ಸುನಿಲ್ ಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲ್ಪಡುತ್ತಿದ್ದರು. ಮುಖ್ಯಮಂತ್ರಿ ರೇಸ್ನಲ್ಲಿರುವ ಇತರ ಕೆಲವು ಬಿಜೆಪಿ ಮುಖಂಡರು ನನಗೆ ಸಹಕಾರದ ಭರವಸೆ ನೀಡಿದ್ದಾರೆ" ಎಂದು ಹೇಳಿದ್ದರು.
"ಕಾರ್ಕಳದಲ್ಲಿ ನನ್ನ ಗೆಲುವು ಖಚಿತ. ನಕಲಿ ಹಿಂದುತ್ವ ಮತ್ತು ಭ್ರಷ್ಟಾಚಾರದ ವಿರುದ್ಧ ನನ್ನ ಸ್ಪರ್ಧೆ" ಎಂದು ಹೇಳಿದ್ದರು. ಈ ಹೇಳಿಕೆ ನೀಡಿದ ಕೆಲವೇ ಹೊತ್ತಿನಲ್ಲಿ ಸಚಿವ ಸುನೀಲ್ ಕುಮಾರ್ ಸರಣಿ ಟ್ವೀಟ್ ಮಾಡಿದ್ದಾರೆ.












Click it and Unblock the Notifications