ರಾಜ್ಯದ ಜನರಿಗೆ ಕತ್ತಲೆ ಭಾಗ್ಯ; ಸರ್ಕಾರಕ್ಕೆ ಟ್ವೀಟ್ ಬಾಣ!
ಬೆಂಗಳೂರು, ಜೂನ್ 15; ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳ ಪೈಕಿ 'ಗೃಹಜ್ಯೋತಿ' ಯೋಜನೆಗೆ ಜೂನ್ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ಗಳವರೆಗೆ ಉಚಿತವಾಗಿ ವಿದ್ಯುತ್ ನೀಡುವ ಯೋಜನೆ ಇದಾಗಿದೆ.
ಪ್ರತಿಪಕ್ಷ ಬಿಜೆಪಿ ಮತ್ತು ಪಕ್ಷದ ನಾಯಕರು 'ಗೃಹಜ್ಯೋತಿ' ಯೋಜನೆಯ ಬಗ್ಗೆ ಟೀಕೆ ಮಾಡುತ್ತಲೇ ಇದ್ದಾರೆ. ಮಾಜಿ ಇಂಧನ ಸಚಿವ, ಕಾರ್ಕಳದ ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಗುರುವಾರ ಸರಣಿ ಟ್ವೀಟ್ ಮಾಡಿದ್ದಾರೆ.

'ಉಚಿತ ಯೋಜನೆಗಳ ಜಾರಿಯ ಭರಾಟೆಯಲ್ಲಿ ಮುಳುಗಿರುವ @siddaramaiah ಸರ್ಕಾರ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ! ಉಚಿತ ಉಚಿತ ಎಂಬ ನಿಮ್ಮ ಭಾಷಣದ ಭರಾಟೆಗೆ ಮರುಳಾದ ಜನರಿಗೆ ಈಗ ಕತ್ತಲೆ ಖಚಿತ, ಸಾಲ ನಿಶ್ಚಿತ, ಬೆಲೆ ಏರಿಕೆ ಖಂಡಿತ ಎಂಬುದು ತಿಂಗಳು ಕಳೆಯುವಷ್ಟರಲ್ಲೇ ಅರಿವಾಗಿದೆ' ಎಂದು ಟೀಕಿಸಿದ್ದಾರೆ.
ಪವರ್ ಕಟ್ ಕಣ್ಣಾಮುಚ್ಚಾಲೆ; ಮಾಜಿ ಸಚಿವರು ತಮ್ಮ ಟ್ವೀಟ್ನಲ್ಲಿ, 'ರೈತರ ಐಪಿ ಸೆಟ್ ಗಳಿಗೆ ನಿರಂತರ ಏಳು ಗಂಟೆಗಳ ಕಾಲ ಪೂರೈಕೆ ಮಾಡುತ್ತಿದ್ದ ವಿದ್ಯುತ್ ಕಡಿತಗೊಳಿಸಲಾಗಿದೆ. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅನಿಯಮಿತ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ ಪ್ರಾರಂಭವಾಗಿದೆ. ನಿರ್ವಹಣೆ ಹೆಸರಿನಲ್ಲಿ ಪವರ್ ಕಟ್ ಕಣ್ಣಾಮುಚ್ಚಾಲೆ ನಡೆಸುತ್ತಿರುವುದು ಸುಳ್ಳೇ?' ಎಂದು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ 'ಸಿದ್ದರಾಮಯ್ಯನವರೇ ವ್ಯವಸ್ಥೆಯನ್ನು ಎತ್ತ ಕೊಂಡೊಯ್ಯುತ್ತಿದ್ದೀರಿ? ನಿಮ್ಮ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಜಾಹೀರಾತು ಕೊಟ್ಟ ಮಾತ್ರಕ್ಕೆ ಕತ್ತಲೆ ಕಳೆಯಲು ಸಾಧ್ಯವೇ? ನೀವು ಘೋಷಣೆ ಇಲ್ಲದೇ ಮಾಡುತ್ತಿರುವ ಲೋಡ್ ಶೆಡ್ಡಿಂಗ್ ನಿಂದ ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಕುಂಠಿತಗೊಳ್ಳುವುದರಲ್ಲಿ ಅನುಮಾನ ಇಲ್ಲ' ಎಂದು ಎಚ್ಚರಿಸಿದ್ದಾರೆ.
ಹಿಂದೆಯೂ ಟೀಕಿಸಿದ್ದರು; ವಿ. ಸುನಿಲ್ ಕುಮಾರ್ ಈ ಹಿಂದೆಯೂ 'ಗೃಹಜ್ಯೋತಿ' ಯೋಜನೆ ಟೀಕಿಸಿದ್ದರು. @siddaramaiah ನವರೇ, ನುಡಿದಂತೆ ನಡೆಯುವುದು ಎಂದರೆ ದಾರಿ ತಪ್ಪಿಸುವುದಲ್ಲ. 200 ಯುನಿಟ್ ಉಚಿತ ಎಂದು ಹೇಳಿ ಈಗ ಸರಾಸರಿ ಬಳಕೆ ಆಧರಿಸಿ ಸೌಲಭ್ಯ ನೀಡುತ್ತೇನೆ ಎನ್ನುತ್ತಿದ್ದೀರಿ. ಇದರಿಂದ ಸಾಮಾನ್ಯ ಜನರಿಗೆ ಯಾವುದೇ ಪ್ರಯೋಜನವಿಲ್ಲ. ಕಾಣದ ಷರತ್ತುಗಳ ಮೂಲಕ ಕಣ್ಣಿಗೆ ಮಣ್ಣೆರಚಬೇಡಿ. ಭರವಸೆಯಂತೆ 200 ಯುನಿಟ್ ಉಚಿತ ವಿದ್ಯುತ್ ಎಲ್ಲರಿಗೂ ಕೊಡಿ ಎಂದು ಆಗ್ರಹಿಸಿದ್ದರು.
ಮಹಿಳೆಯರು ಸರ್ಕಾರಿ ಬಸ್ನಲ್ಲಿ ಉಚಿತವಾಗಿ ಸಂಚಾರ ನಡೆಸುವ 'ಶಕ್ತಿ' ಯೋಜನೆ ಟೀಕಿಸಿದ್ದ ಅವರು, 'ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು' ಎಂದು ಸರ್ಕಾರವನ್ನು ಒತ್ತಾಯಿಸಿದ್ದರು.
'ಕಾಂಗ್ರೆಸ್ ಸರ್ಕಾರದ ಆಡಳಿತದ ವೈಖರಿಯ ದಾರಿ ಮತ್ತು ಧಾಟಿ ಯನ್ನು ನೋಡಿದರೆ ಮುಂದಿನ ದಿನಗಳಲ್ಲಿ ತನ್ನ ಹುಸಿ ಗ್ಯಾರಂಟಿಗಳ ಭಾರದಿಂದಲೇ ಕುಸಿದು ಬೀಳುವುದು ನಿಶ್ಚಿತ. ಈ ಸಂಧರ್ಭದಲ್ಲಿ ರಾಜ್ಯ ಮತ್ತು ಜಿಲ್ಲೆಗಳಲ್ಲಿ ವೈಚಾರಿಕ ಬದ್ಧತೆಯ ಯುವಕರು ಬಿಜೆಪಿಯ ನೇತೃತ್ವವನ್ನು ವಹಿಸಿ ಕೊಳ್ಳುವುದು ಅಗತ್ಯ ಮತ್ತು ಅನಿವಾರ್ಯ' ಎಂದು ಟ್ವೀಟ್ ಮಾಡಿದ್ದರು.












Click it and Unblock the Notifications