ಬಿಎಸ್ವೈ ವಿರುದ್ಧ ತನಿಖೆ : ತಡೆಯಾಜ್ಞೆ ತೆರವಿಗೆ ಸುಪ್ರೀಂ ನಕಾರ
ಬೆಂಗಳೂರು, ಡಿಸೆಂಬರ್ 14 : ಯಡಿಯೂರಪ್ಪ ಅವರ ವಿರುದ್ಧದ ಮೂರು ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್ಗೆ ಸೂಚಿಸಿದೆ. ತನಿಖೆಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ನಿರಾಕರಿಸಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. [ಯಡಿಯೂರಪ್ಪ ವಿರುದ್ಧ ತನಿಖೆ : ಸುಪ್ರೀಂ ಮೆಟ್ಟಿಲೇರಿದ ಸರ್ಕಾರ]

ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಲಮೇಶ್ವರ್ ಅವರ ಪೀಠ, ದೂರುಗಳ ತನಿಖೆಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಸಾಧ್ಯವಿಲ್ಲ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದು ಹೈಕೋರ್ಟ್ಗೆ ಸೂಚಿಸಿತು. [ಯಡಿಯೂರಪ್ಪ passport ವಾಪಸ್ ಕೊಟ್ಟ ಕೋರ್ಟ್]
ಸೆಪ್ಟೆಂಬರ್ 15ರಂದು ತಡೆ : 2015ರ ಸೆಪ್ಟೆಂಬರ್ 15ರಂದು ಕರ್ನಾಟಕ ಹೈಕೋರ್ಟ್ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತ ಎಸ್ಐಟಿ ಅಧಿಕಾರಿಗಳು ದಾಖಲಿಸಿದ್ದ 3 ಅಕ್ರಮ ಡಿನೋಟಿಫಿಕೇಷನ್ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ನೀಡಿತ್ತು. [ಯಡಿಯೂರಪ್ಪಗೆ ರಿಲೀಫ್ ನೀಡಿದ 5 ಪ್ರಕರಣಗಳು ಯಾವುವು?]
ಮೂರು ಪ್ರಕರಣಗಳಲ್ಲಿ ಯಡಿಯೂರಪ್ಪ ಅವರ ವಿರುದ್ಧ ಎಸ್ಐಟಿ ಎಫ್ಐಆರ್ ದಾಖಲು ಮಾಡಿದೆ. ಎಸ್ಐಟಿ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಬೇಕು, ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಯಡಿಯೂರಪ್ಪ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ.ರತ್ನಕಲಾ ಅವರ ಏಕಸದಸ್ಯ ಪೀಠ ತನಿಖೆಗೆ ತಡೆಯಾಜ್ಞೆ ನೀಡಿತ್ತು.
ಯಾವ ಪ್ರಕರಣಗಳು : ಬೆಂಗಳೂರಿನ ಬಿಳೇಕಹಳ್ಳಿ, ಹಲಗೇವಡೇರಹಳ್ಳಿ, ಮಹಾಲಕ್ಷ್ಮೀ ಬಡಾವಣೆಯ ಜೆ.ಬಿ ಕಾವಲ್ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ನಡೆಸುತ್ತಿದ್ದ ತನಿಖೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಆದರೆ, ಎಫ್ಐಆರ್ ರದ್ದುಗೊಳಿಸಿಲ್ಲ.












Click it and Unblock the Notifications