ಉಪ ಚುನಾವಣೆಗೆ ಸುಪ್ರೀಂಕೋರ್ಟ್ ತಡೆ; ಯಾರು, ಏನು ಹೇಳಿದರು?
ಬೆಂಗಳೂರು, ಸೆಪ್ಟೆಂಬರ್ 26 : ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಚುನಾವಣೆಗೆ ಸಿದ್ಧತೆ ಆರಂಭಿಸಿದ್ದ ರಾಜಕೀಯ ಪಕ್ಷಗಳು ನಿಟ್ಟುಸಿರು ಬಿಟ್ಟಿವೆ. ಉಪ ಚುನಾವಣೆಯಲ್ಲಿ ಗೆದ್ದು ಸಚಿವರಾಗುವ ಅನರ್ಹ ಶಾಸಕರ ಕನಸಿಗೆ ಅಡ್ಡಿಯಾಗಿದೆ.
ಶುಕ್ರವಾರ ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮಧ್ಯಂತರ ತಡೆ ನೀಡಿತು. ಚುನಾವಣಾ ಆಯೋಗ ಪ್ರಕಟಿಸಿದ ವೇಳಾಪಟ್ಟಿಯಂತೆ ಅಕ್ಟೋಬರ್ 21ರಂದು ಚುನಾವಣೆ ನಡೆಯಬೇಕಿತ್ತು.
ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವ ಸ್ಪೀಕರ್ ಆದೇಶವನ್ನು 17 ಶಾಸಕರು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆ ಪೂರ್ಣಗೊಂಡು ಅಂತಿಮ ಆದೇಶ ಬರುವ ತನಕ ಚುನಾವಣೆ ನಡೆಸುವುದಿಲ್ಲ ಎಂದು ಆಯೋಗ ನ್ಯಾಯಾಲಯಕ್ಕೆ ಹೇಳಿದೆ.
ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬ್ಯುಸಿಯಾಗಿದ್ದ ಎಲ್ಲಾ ರಾಜಕೀಯ ಪಕ್ಷಗಳು ಸುಪ್ರೀಂಕೋರ್ಟ್ ಆದೇಶದಿಂದ ನಿಟ್ಟುಸಿರುವ ಬಿಟ್ಟಿವೆ. ಅಕ್ಟೋಬರ್ 22ರ ಬಳಿಕ ನ್ಯಾಯಾಲಯ ಮತ್ತೆ ಶಾಸಕರ ಅನರ್ಹತೆ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ನ್ಯಾಯಾಲಯದ ಆದೇಶದ ಬಗ್ಗೆ ಯಾರು, ಏನು ಹೇಳಿದರು?.

ಅನರ್ಹ ಶಾಸಕ ಮುನಿರತ್ನ ಹೇಳಿಕೆ
ರಾಜರಾಜೇಶ್ವರಿನಗರ ಕ್ಷೇತ್ರದ ಅನರ್ಹ ಶಾಸಕ ಮುನಿರತ್ನ ಹೇಳಿಕೆ ನೀಡಿದ್ದು, "ಈ ಪ್ರಕರಣದ ಕುರಿತು ಮತ್ತಷ್ಟು ವಿಚಾರಣೆ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಸ್ಪೀಕರ್ ಉದ್ದೇಶಪೂರ್ವಕವಾಗಿ ನಮ್ಮನ್ನು ಅನರ್ಹಗೊಳಿಸಿದ್ದಾರೆ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗಲಿದೆ. ಸ್ಪೀಕರ್ ಕಾಂಗ್ರೆಸ್ ಪಕ್ಷದ ಪರವಾಗಿ ತೀರ್ಪು ಕೊಟ್ಟಿದ್ದಾರೆ ಹೊರತು ನ್ಯಾಯಯುತ ತೀರ್ಪು ನೀಡಿಲ್ಲ" ಎಂದು ಹೇಳಿದರು.

ಆರ್. ಶಂಕರ್ ಹೇಳಿಕೆ
ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ್ ಮಾತನಾಡಿ, " ನ್ಯಾಯಾಲಯ ಉಪ ಚುನಾವಣೆಗೆ ತಡೆ ನೀಡಿದೆ. ನನ್ನ ಕ್ಷೇತ್ರಕ್ಕೆ ಚುನಾವಣೆ ಇರಲಿಲ್ಲ. ನಾನು ಪಕ್ಷವನ್ನು ಕಾಂಗ್ರೆಸ್ ಜತೆ ವಿಲೀನ ಮಾಡಿರಲಿಲ್ಲ" ಎಂದು ಹೇಳಿದರು.

ಹಿರೇಕೆರೂರು ಕ್ಷೇತ್ರ
ಹಿರೇಕೆರೂರು ಕ್ಷೇತ್ರದ ಅನರ್ಹ ಶಾಸಕ ಬಿ. ಸಿ. ಪಾಟೀಲ್ ಮಾತನಾಡಿ, "ನ್ಯಾಯಾಲಯದ ಆದೇಶ ನಮಗೆ ಸಂತಸ ತಂದಿದೆ. ಇದೊಂದು ಐತಿಹಾಸಿಕ ತೀರ್ಪು. ನಮಗೆ ನ್ಯಾಯಾಲಯದಲ್ಲಿ ನಿಶ್ಚಿತ ವಾಗಿ ಗೆಲುವು ಸಿಗಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಚ್. ಡಿ. ರೇವಣ್ಣ ಹೇಳಿಕೆ
ಮಾಜಿ ಸಚಿವ ಎಚ್. ಡಿ. ರೇವಣ್ಣ ಮಾತನಾಡಿ, "ಉಪ ಚುನಾವಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ನಮ್ಮ ಪಕ್ಷದಿಂದ ಈಗಾಗಲೇ ಚುನಾವಣೆ ಸಿದ್ಧತೆ ನಡೆಸಿದ್ದೆವು. ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇವೆ" ಎಂದು ಹೇಳಿದರು.












Click it and Unblock the Notifications