ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಗೆ ಸಿಹಿ ಸುದ್ದಿ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್!
ಬೆಂಗಳೂರು, ಮಾ. 12: ಕೊರೊನಾ ವೈರಸ್ ಹಾಗೂ ಲಾಕ್ಡೌನ್ನಿಂದಾಗಿ ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ಶೈಕ್ಷಣಿಕ ಚಟುವಟಿಕೆಗಳು ಕುಂಠಿತಗೊಂಡಿವೆ. ಸರಿ ಸುಮಾರು ಹತ್ತು ತಿಂಗಳುಗಳ ಕಾಲ ಯಾವುದೇ ಶಾಲೆಗಳು ಬಾಗಿಲು ತೆರೆದಿರಲಿಲ್ಲ. ಅದೇ ಸಂದರ್ಭದಲ್ಲಿ ಶಾಲಾ ಶುಲ್ಕ ಭರಿಸುವಂತೆ ಶಾಲಾ ಆಡಳಿತ ಮಂಡಳಿಗಳು ಒತ್ತಾಯ ಹೇರುದ್ದವು. ಅದು ಶಿಕ್ಷಣ ಸಂಸ್ಥೆಗಳು ಹಾಗೂ ಪೋಷಕರ ಮಧ್ಯೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿತ್ತು.
Recommended Video
ಶಾಲಾ ಶುಲ್ಕದ ವಿಚಾರದಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಲಹೆ ಮಾಡಿದ್ದರು. ಆದರೆ ಅದಕ್ಕೆ ಸರಿಯಾದ ಸ್ಪಂದನೆ ಬಂದಿರಲಿಲ್ಲ. ಹೀಗಾಗಿ ತಾವೇ ಮುಂದಾಗಿ ಶೇಕಡಾ 30ರಷ್ಟು ಶುಲ್ಕ ಕಡಿತಕ್ಕೆ ಆದೇಶ ಮಾಡಿದ್ದರು. ಅದು ಖಾಸಗಿ ಶಾಲೆಗಳ ಅಸಮಾಧಾನಕ್ಕೆ ಕಾರಣವಾಗಿತ್ತು.
ಬಳಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶಾಲಾ ಶುಲ್ಕದ ವಿಚಾರದಲ್ಲಿ ಪಾಲಕರ ಪರವಾಗಿ ನಿಂತಿದ್ದಾರೆ ಎಂದು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಆರೋಪಿಸಿ ಬೃಹತ್ ಪ್ರತಿಭಟನೆ ಮಾಡಿದ್ದವು. ಈ ಎಲ್ಲ ಬೆಳವಣಿಗೆಗಳ ಬಳಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಖಾಸಗಿ ಶಾಲಾ ಆಡಳಿತ ಮಂಡಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ನೆಮ್ಮದಿ ತರುವಂತಹ ಆದೇಶವನ್ನು ಸುರೇಶ್ ಕುಮಾರ್ ಮಾಡಿದ್ದಾರೆ.

ಏನದು ಹೊಸ ಆದೇಶ; ಯಾರಿಗೆಲ್ಲ ಅನುಕೂಲ?
ಕೊರೊನಾ ವೈರಸ್ ಹಾಗೂ ಲಾಕ್ಡೌನ್ ಹಿನ್ನೆಲೆಯಲ್ಲಿ 2017-18ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟಿರುವ ಅನುದಾನಿತ ಹಾಗೂ ಅನುದಾನ ರಹಿತ ಶಾಲೆ-ಪದವಿ ಪೂರ್ವ ಕಾಲೇಜುಗಳ ನೋಂದಣಿ ನವೀಕರಣಕ್ಕೆ ನಿಯಮಾವಳಿಗಳನ್ನು ಸಡಿಲಗೊಳಿಸಿ, ಹಲವು ರಿಯಾಯತಿ ಕೊಟ್ಟು ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಮಾಡಿದ್ದಾರೆ. ಸುರೇಶ್ ಕುಮಾರ್ ಅವರು ಮಾಡಿರುವ ಆದೇಶ ಈ ಶೈಕ್ಷಣಿಕ ಸಾಲಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹೊಸ ಆದೇಶದಂತೆ ಹೆಚ್ಚುವರಿ ವಿಭಾಗ ಅಥವಾ ವಿಷಯ ಅಥವಾ ಭಾಷೆ ಮತ್ತು ಸಂಯೋಜನೆಗಳನ್ನು ಅನುಮತಿಸುವ ಹಾಗೂ ನವೀಕರಿಸುವ ಸಂದರ್ಭದಲ್ಲಿ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ, ಕಟ್ಟಡ ಸುರಕ್ಷತಾ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸುವುದಕ್ಕೆ ರಿಯಾಯತಿ ಕೊಡಲಾಗಿದೆ. ಕಳೆದ ಶೈಕ್ಷಣಿಕ ಸಾಲಿನ ದಾಖಲೆಗಳ ಆಧಾರದಲ್ಲಿ ನೋಂದಣಿ ನವೀಕರಣ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಅಧಿಕಾರಿಗಳಿಗೆ ಸುರೇಶ್ ಕುಮಾರ್ ಸೂಚನೆ
ಈ ಬಗ್ಗೆ ಸರ್ಕಾರದ ಸ್ಪಷ್ಠೀಕರಣವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೊಟ್ಟಿದ್ದಾರೆ. ಆರ್ಟಿಇ ಮರುಪಾವತಿ, ದಾಖಲಾತಿ-ಹಾಜರಾತಿಗಳನ್ನು ಇಟ್ಟುಕೊಂಡು ಯಾವುದೇ ಕಾರಣಕ್ಕೂ ನೋಂದಣಿ ನವೀಕರಣಕ್ಕೆ ಅನವಶ್ಯಕ ತೊಂದರೆ ಕೊಡಬಾರದು, ಕಾರಣಗಳನ್ನು ಹೇಳಬಾರದು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಸಕ್ತ ಸಾಲಿಗೆ ಮಾತ್ರ ಈ ಹೊಸ ಆದೇಶ ಅನ್ವಯಿಸಲಿದೆ ಎಂದೂ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಮಕ್ಕಳ ಸುರಕ್ಷತೆಯಲ್ಲಿ ರಾಜಿ ಇಲ್ಲ!
ಹೀಗೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಿಯಾಯತಿ ಕೊಟ್ಟಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ವಿದ್ಯಾರ್ಥಿಗಳ ಸುರಕ್ಷತೆಯಲ್ಲಿ ಯಾವುದೇ ರಾಜಿಯಿಲ್ಲ ಎಂದು ಎಚ್ಚರಿಸಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನಂತೆ ವಿದ್ಯಾರ್ಥಿಗಳ ಸುರಕ್ಷತೆ, ಶಾಲಾ ಸುರಕ್ಷತೆ ಕುರಿತಂತೆ ಕಠಿಣ ಕ್ರಮಗಳನ್ನು ಅನುಸರಿಸಬೇಕಾಗಿರುವುದು ಸರ್ಕಾರದ ಪ್ರಾಥಮಿಕ ಜವಾಬ್ದಾರಿಯಾಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ ಕೊರೊನಾ ವೈರಸ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಶೀಘ್ರ ನಿಯಮ
ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹೊಸ ನಿಯಮ ರೂಪಿಸಲು ಪರಿಷತ್ ಸದಸ್ಯ ಎಸ್.ವಿ. ಸಂಕನೂರು ನೇತೃತ್ವದ ಸಮಿತಿ ರಚನೆ ಮಾಡಲಾಗಿದೆ. ಈಗಾಗಲೇ ಇರುವ ಹಾಗೂ ಹೊಸದಾಗಿ ನೋಂದಣಿ ಮಾಡಿಸಿಕೊಂಡಿರುವ ಶಿಕ್ಷಣ ಸಂಸ್ಥೆಗಳು ಅನುಸರಿಸಬೇಕಾದ ವಿಶೇಷ ನಿಯಮಗಳನ್ನು ಸಮಿತಿ ರಚಿಸಲಿದೆ.
ಒಂದು ತಿಂಗಳ ಅವಧಿಯಲ್ಲಿ ಸಮಿತಿಯು ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿದಂತೆ ಶಾಲಾ ಸುರಕ್ಷತಾ ಕ್ರಮಗಳನ್ನು ಇಲ್ಲಿಯವರೆಗೆ ಇಲಾಖೆ ಮಾಡಿರುವ ಆದೇಶ, ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಲಿದೆ. ಶಾಲೆಯ ಭೌತಿಕ ಸುರಕ್ಷತೆ, ಮೂಲಭೂತ ಸೌಕರ್ಯ, ವಿಪತ್ತು ನಿರ್ವಹಣೆ, ಆರೋಗ್ಯ, ಸಾರಿಗೆ, ತುರ್ತು ಸನ್ನದ್ದತೆ ಸೇರಿದಂತೆ ಎಲ್ಲ ಆಯಾಮಗಳನ್ನು ಈ ಸಮಿತಿಯು ಸಮಗ್ರವಾಗಿ ಅವಲೋಕಿಸಲಿದೆ. ಈ ಸಮಿತಿಯು ವಿದ್ಯಾರ್ಥಿಗಳ ಸುರಕ್ಷತೆಗೆ ಯಾವುದೇ ರಾಜಿ ಇಲ್ಲದ ರೀತಿಯಲ್ಲಿ ನಿಯಮಗಳನ್ನು ರೂಪಿಸಲಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.












Click it and Unblock the Notifications