ಬಾಲ ಕಾರ್ಮಿಕ-ಬಾಲ್ಯ ವಿವಾಹ ಸಮಸ್ಯೆ ತಡೆಯಲು ಶಿಕ್ಷಣ ಇಲಾಖೆ ಮಾಸ್ಟರ್ ಪ್ಲಾನ್!
ಬೆಂಗಳೂರು, ಫೆ. 13: ಕೊರೊನಾ ವೈರಸ್ ಕೇವಲ ಆರೋಗ್ಯ ಕ್ಷೇತ್ರಕ್ಕೆ ಮಾತ್ರ ಮಾರಕವಾಗಿಲ್ಲ. ಆ ಸೋಂಕಿನ ಅಡ್ಡ ಪರಿಣಾಮಗಳು ಸಾಮಾಜಿಕ-ಶೈಕ್ಷಣಿಕ ಕ್ಷೇತ್ರದಲ್ಲಿಯೂ ಬಹಳಷ್ಟಾಗುತ್ತಿವೆ. ಕೋವಿಡ್ನಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಲೂ ಆಗದದಂತಹ ಪರಿಸ್ಥಿತಿಯಲ್ಲಿದ್ದಾರೆ. ಜೊತೆಗೆ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿರುವುದು ಕೂಡ ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಆದಷ್ಟು ಬೇಗನೆ ಎಲ್ಲ ತರಗತಿಗಳನ್ನು ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿದೆ.
ಈ ಬಗ್ಗೆ ಫೆಬ್ರುವರಿ 16ರಂದು ಉನ್ನತ ಮಟ್ಟದ ಸಭೆ ನಡೆಸಿ ಎಲ್ಲ ತರಗತಿಗಳನ್ನು ಆರಂಭಿಸುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಶಾಲೆಗಳು ಮುಚ್ಚಿದ್ದರಿಂದ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿವೆ. ಬಾಲ ಕಾರ್ಮಿಕ ಸಮಸ್ಯೆ ಕೂಡ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಅಧಿಕಾರಿಗಳು ಸಂಪೂರ್ಣ ಸಾತ್ ಕೊಟ್ಟಲ್ಲಿ ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹ ಸಮಸ್ಯೆಗಳನ್ನು ಸಂಪೂರ್ಣವಾಗಿ ಮಟ್ಟಹಾಕುವುದು ಖಚಿತ.
ಅಷ್ಟಕ್ಕೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಡಿರುವ ಪ್ಲಾನ್ ಏನು? ಅದು ಹೇಗೆ ಅನುಷ್ಠಾನಗೊಳ್ಳುತ್ತದೆ? ಮುಂದಿದೆ ಸಂಪೂರ್ಣ ಮಾಹಿತಿ!
ಸುರೇಶ್ ಕುಮಾರ್ ಸೂಚನೆ
ಕೊರೊನಾ ವೈರಸ್ ಸೋಂಕಿನಿಂದಾಗಿ ಹಲವು ತಿಂಗಳು ಶಾಲಾ ಚಟುವಟಿಕೆಗಳು ಸ್ಥಗಿತಗೊಂಡಿದ್ದರಿಂದ ಬಾಲ ಕಾರ್ಮಿಕರ ಹಾಗೂ ಬಾಲ್ಯ ವಿವಾಹಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿ ಪರಿಹಾರ ಕ್ರಮಗಳಿಗೆ ಮುಂದಾಗಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಮಿತಿ ರಚನೆ; ಒಂದು ತಿಂಗಳು ತಪಾಸಣೆ
ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಪ್ರತಿ ತಾಲೂಕು ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ-ಸಿಡಿಪಿಒ, ಕಾರ್ಮಿಕ ಇಲಾಖೆಯ ತನಿಖಾಧಿಕಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿ ಒಂದು ತಿಂಗಳ ಅವಧಿಯಲ್ಲಿ ತಪಾಸಣೆಗಳನ್ನು ಪೂರ್ಣಗೊಳಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಕ್ರಿಯಾ ಯೋಜನೆ
ಬಾಲ ಕಾರ್ಮಿಕ ಸಮಸ್ಯೆಯ ಸುಳಿಗೆ ಸಿಲುಕಿದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರೆಸುವ, ಬಾಲ್ಯ ವಿವಾಹದ ಸುಳಿಗೆ ಸಿಕ್ಕ ವಿದ್ಯಾರ್ಥಿಗಳಿಗೆ ಅವಶ್ಯಕತೆಗೆ ಅನುಗುಣವಾಗಿ ವಿದ್ಯಾಭ್ಯಾಸ, ಪುನರ್ವಸತಿ ಕಲ್ಪಿಸುವ ಬಗ್ಗೆ ಈ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕೆಂದೂ ಸುರೇಶ್ ಕುಮಾರ್ ತಿಳಿಸಿದ್ದಾರೆ.
Recommended Video
ತಕ್ಷಣ ಸಮೀಕ್ಷೆ ಮಾಡಲು ಸೂಚನೆ
ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ ಲಭ್ಯವಿರುವ ಈ ಮಾದರಿಯ ಅಂಕಿ ಅಂಶಗಳನ್ನು ಕೂಡಲೇ ಸಂಬಂಧಪಟ್ಟ ಇಲಾಖೆಗಳೊಂದಿಗೆ ಹಂಚಿಕೊಂಡು ಈ ಸಮೀಕ್ಷೆಯನ್ನು ಯಶಸ್ವಿಗೊಳಿಸುವುದಲ್ಲದೇ ಕೋವಿಡ್ ಕಾರಣದಿಂದಾಗಿ ಕಲಿಕಾ ಪ್ರಕ್ರಿಯೆಯಿಂದ ಹೊರಗುಳಿದಿರುವ ವಿದ್ಯಾರ್ಥಿಗಳನ್ನು ಮುಖ್ಯವಾಹಿನಿಗೆ ಕರೆತರುವಲ್ಲಿ ಎಲ್ಲ ಕ್ರಮಗಳಿಗೆ ಚಾಲನೆ ನೀಡಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ.