ಶಾಲಾ ಶುಲ್ಕದ ವಿಚಾರವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಚಿವ ಸುರೇಶ್ ಕುಮಾರ್ ಕೊಟ್ಟ ಅಂತಿಮ ಎಚ್ಚರಿಕೆ ಏನು?
ಬೆಂಗಳೂರು, ಮಾ. 20: ಶಾಲಾ ಶುಲ್ಕದ ವಿಚಾರವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ತಮ್ಮ ಮಿತಿ ಮೀರಿದ ವರ್ತನೆಯನ್ನು ಮುಂದುವರೆಸಿವೆ. ಶಾಲಾ ಶುಲ್ಕದ ವಿಚಾರವಾಗಿ ಬೆಂಗಳೂರಿನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಪ್ರಯತ್ನ ಮಾಡಿದ್ದ. ಅದಾದ ಬಳಿಕ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳಿಗೆ ಮನವಿ ರೂಪದ ಎಚ್ಚರಿಕೆ ಕೊಟ್ಟಿತ್ತು. ಆದರೆ ಆ ಬಳಿಕವೂ ಖಾಸಗಿ ಶಾಲೆಗಳ ಧೋರಣೆಯಲ್ಲಿ ಬದಲಾವಣೆ ಆಗಿಲ್ಲ.
ಕೊರೊನಾ ಲಾಕ್ಡೌನ್ನಿಂದಾಗಿ ಶಾಲಾ ಆಡಳಿತ ಮಂಡಳಿಗಳು ಹಾಗೂ ವಿದ್ಯಾರ್ಥಿಗಳ ಪಾಲಕರ ಪರಿಸ್ಥಿತಿ ತೀರಾ ಭಿನ್ನವಾಗಿಯೇನೂ ಇಲ್ಲ. ಆದರೆ ಖಾಸಗಿ ಶಾಲೆಗಳಿಗೆ ಹೋಲಿಕೆ ಮಾಡಿದರೆ ಪಾಲಕರು, ಪೋಷಕರ ಸ್ಥಿತಿ ಗಂಭೀರವಾಗಿದೆ. ಅದರ ಅರಿವೂ ಸರ್ಕಾರಕ್ಕಿದೆ.
ಆದರೂ ಇಬ್ಬರ ಹಿತ ಕಾಯಲು ಇಲ್ಲಿವರೆಗೆ ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿತ್ತು. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೂ ಕೂಡ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕಠಿಣಕ್ರಮಕ್ಕೆ ಮುಂದಾಗಿರಲಿಲ್ಲ. ಆದರೆ ಇದೀಗ ಪರಿಸ್ಥಿತಿ ಬಿಗಡಾಯಿಸಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ವರ್ತನೆಯಿಂದ ಆತಂಕಗೊಂಡಿರುವ ಶಿಕ್ಷಣ ಇಲಾಖೆ, ಇದೀಗ ಮಕ್ಕಳ ಹಿತ ಕಾಪಾಡಲು ಮುಂದಾಗಿದೆ. ಹೀಗಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಶಾಲಾ ಶುಲ್ಕದ ವಿಚಾರವಾಗಿ ಕಠಿಣ ಎಚ್ಚರಿಕೆಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೊಟ್ಟಿದ್ದಾರೆ.

ಆತಂಕದಲ್ಲಿ ವಿದ್ಯಾರ್ಥಿಗಳು-ಪೋಷಕರು
ಶಾಲಾ ಶುಲ್ಕದ ವಿಚಾರವಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೆ ಮತನಾಡಿದ್ದಾರೆ. ಶಾಲಾ ಶುಲ್ಕ ಭರಿಸದ ವಿದ್ಯಾರ್ಥಿಗಳನ್ನು ಖಾಸಗಿ ಶಾಲೆಗಳು ನಡೆಸಿಕೊಳ್ಳುತ್ತಿರುವ ರೀತಿಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಮುಂದಿನ ಕ್ರಮದ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ.
ಆದರೂ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಶಾಸಗಿ ಶಿಕ್ಷಣ ಸಂಸ್ಥೆಗಳ ಧನದಾಹದಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹೀಗಾಗಿ ಸುರೇಶ್ ಕುಮಾರ್ ಅವರು ಕೊನೆಯ ಎಚ್ಚರಿಕೆಯನ್ನು ರಾಜ್ಯದ ಎಲ್ಲ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೊಟ್ಟಿದ್ದಾರೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ನಡೆ ದುರದೃಷ್ಟಕರ
ಬೆಂಗಳೂರಿನ ರಾಯಲ್ ಕನ್ಕಾರ್ಡ್ ಶಾಲೆಯಲ್ಲಿ ಹೆಚ್ಚುವರಿ ಶುಲ್ಕ ಪಾವತಿಸಲು ಅಸಹಾಯಕರಾದ ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಹೊರಗಿಟ್ಟಂತಹ ಮತ್ತು ಶ್ರೀರಂಗಪಟ್ಟಣ ತಾಲೂಕಿನ ಕೆಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ನಲ್ಲಿ ಶುಲ್ಕದ ವಿಚಾರದಲ್ಲಿ ನಡೆದ ಪ್ರಕರಣಗಳು ದುರದೃಷ್ಟಕರವಾಗಿದ್ದು, ಇಂತಹ ಪ್ರಕರಣಗಳು ಮರುಕಳಿಸದಂತೆ ಖಾಸಗಿ ಶಾಲೆಗಳು ಕ್ರಮವಹಿಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇವು ಒಳ್ಳೆಯ ಬೆಳವಣಿಗೆ ಅಲ್ಲ
ಸಾಮಾಜಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ನಡೆಯುತ್ತಿರುವ ಇಂತಹ ಪ್ರಕರಣಗಳು ನಮ್ಮ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಕುಂದಿಸುವುದರೊಂದಿಗೆ ರಾಷ್ಟ್ರದ ಭವಿಷ್ಯದ ಹಿತದಷ್ಟಿಯಿಂದಲೂ ಒಳ್ಳೆಯ ಬೆಳವಣಿಗೆಯಲ್ಲ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲಾಡಳಿತ ಮಂಡಳಿಗಳು ಮತ್ತು ಪೋಷಕರ ನಡುವಿನ ಇಂತಹ ಸಂಘರ್ಷಗಳು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದರಿಂದ ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಇಂತಹ ಪ್ರಕರಣಗಳಿಗೆ ಎಡೆಯಾಗದಂತೆ ವರ್ತಿಸಬೇಕಾದ ಅಗತ್ಯವನ್ನು ನಾನು ಪದೇ ಪದೇ ಹೇಳಿದ್ದೇನೆ ಎಂದು ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ.
Recommended Video

ಪರಮಾಧಿಕಾರ ಚಲಾಯಿಸುವುದು ಅನಿವಾರ್ಯ ವಾಗುತ್ತದೆ!
ಈ ಮೊದಲು ಬೆಂಗಳೂರಿನ ಕೋರಮಂಗಲದ ಖಾಸಗಿ ಶಾಲೆಯಲ್ಲೂ ವಿದ್ಯಾರ್ಥಿಯೊಬ್ಬನನ್ನು ಇದೇ ರೀತಿ ನಡೆಸಿಕೊಂಡಿದ್ದರಿಂದ ಆತ ಆತ್ಮಹತ್ಯೆ ಯತ್ನಕ್ಕೂ ಕೈಹಾಕಿದ್ದನ್ನು ನಾವೆಲ್ಲ ಯೋಚಿಸಬೇಕಾಗಿದೆ. ಮತ್ತು ಅದೆಷ್ಟು ಆಘಾತಕಾರಿ ಎನ್ನುವುದನ್ನು ಗಮನದಲ್ಲಿರಿಸಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಘನ ಉಚ್ಚ ನ್ಯಾಯಾಲಯವೂ ಸಹ ಈ ಅತಿಸೂಕ್ಷ್ಮವಾದ ವಿಷಯವನ್ನು ಬಹಳ ನಾಜೂಕಿನಿಂದ ನಿರ್ವಹಿಸಬೇಕಾದ ಅಂಶವನ್ನು ಒತ್ತಿ ಹೇಳಿರುವುದನ್ನು ನಾವು ಗಮನಿಸಬೇಕಾಗಿದೆ. ನಾಡಿನ ಎಲ್ಲ ಖಾಸಗಿ ಶಾಲಾ ಆಡಳಿತ ಮಂಡಳಿಗಳು ನಮ್ಮ ಮಕ್ಕಳ ಹಿತವನ್ನು ಗಮನದಲ್ಲಿಟ್ಟುಕೊಂಡು ತೀವ್ರ ಸಂವೇದನೆಯಿಂದ ವರ್ತಿಸಬೇಕು.
ಇಂತಹ ಪ್ರಕರಣಗಳು ಮರುಕಳಿಸದಂತೆ ನಾವು ಕೊರೋನಾ ವಿಷಮ ಕಾಲಘಟ್ಟದ ಸಂದರ್ಭದಲ್ಲಿ ನಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಂಡು ನಡೆಯಬೇಕಾದ ಅಗತ್ಯ ಹೆಚ್ಚಾಗಿದೆ. ಪದೇ ಪದೇ ಈ ರೀತಿಯ ಪ್ರಕರಣಗಳು ಮರುಕಳಿಸಿದರೆ ಇಲಾಖೆ ತನ್ನ ಪರಮಾಧಿಕಾರವನ್ನು ಚಲಾಯಿಸಬೇಕಾಗುತ್ತದೆಂಬುದನ್ನು ಶಾಲಾಡಳಿತ ಮಂಡಳಿಗಳು ತಿಳಿದುಕೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.












Click it and Unblock the Notifications