ಲೋಕಸಭೆ ಚುನಾವಣೆ 2024: 17 ತಹಶೀಲ್ದಾರ್ಗಳ ವರ್ಗಾವಣೆ
ಬೆಂಗಳೂರು, ಮಾರ್ಚ್ 08: ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಕರ್ನಾಟಕ ಸರ್ಕಾರ ಅಧಿಕಾರಿಗಳ ವರ್ಗಾವಣೆ ಮಾಡುತ್ತಿದೆ. ಮಾರ್ಚ್ 10ರ ಬಳಿಕ ಚುನಾವಣೆ ಘೋಷಣೆಯಾಗಲಿದೆ ಎಂಬ ಸುದ್ದಿಗಳು ಹಬ್ಬಿವೆ.
ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಪ್ರಯುಕ್ತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಮುಕ್ತಾರ್ ಪಾಷ ಹೆಚ್. ಜಿ. ಸರ್ಕಾರದ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆ [ಸೇವೆಗಳು-3 & ವಿ.ನಿ.] ಆದೇಶವನ್ನು ಹೊರಡಿಸಿದ್ದಾರೆ.
ಒಟ್ಟು 17 ತಹಶೀಲ್ದಾರ್ಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ/ ಸ್ಥಳನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.
ಸೂಚನೆ ಏನು?; ತಹಶೀಲ್ದಾರ್ ವರ್ಗಾವಣೆಗೊಳಿಸಿರುವ ಸರ್ಕಾರ ಸ್ಥಳ ನಿಯುಕ್ತಿಗೊಳಿಸಲಾಗಿರುವ ಅಧಿಕಾರಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಹಾಗೂ ಇಲಾಖಾ ಮುಖ್ಯಸ್ಥರುಗಳು ಕೂಡಲೇ ಬಿಡುಗಡೆಗೊಳಿಸತಕ್ಕದ್ದು ಎಂದು ಸೂಚನೆ ನೀಡಿದೆ.
ಸ್ಥಳ ನಿಯುಕ್ತಿಗೊಂಡಿರುವ ಅಧಿಕಾರಿಗಳು ಸೇರುವಿಕೆ ಕಾಲವನ್ನು ಬಳಸಿಕೊಳ್ಳದೇ ಸ್ಥಳ ನಿಯುಕ್ತಿಗೊಳಿಸಲಾಗಿರುವ ಜಾಗದಲ್ಲಿ 2 ದಿನಗಳೊಳಗಾಗಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು. ಇಲ್ಲವಾದಲ್ಲಿ ಜನಪ್ರತಿನಿಧಿ ಕಾಯ್ದೆಯನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ಕೊಟ್ಟಿದೆ.
ಸ್ಥಳ ನಿಯುಕ್ತಿಗೊಂಡಿರುವ ಅಧಿಕಾರಿಗಳು ಸ್ಥಳ ನಿಯುಕ್ತಿಗೊಳಿಸಿರುವ ಕಾರ್ಯಭಾರವಹಿಸಿಕೊಂಡು ಸಿಟಿಸಿ ವರದಿಯನ್ನು ಸರ್ಕಾರಕ್ಕೆ ಇ-ಮೇಲ್ ಕಳುಹಿಸತಕ್ಕದ್ದು. ಈ ಆದೇಶದಿಂದ ಸ್ಥಳ ನಿಯುಕ್ತಿಗೆ ಬರಲಿರುವ ಅಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಕಂದಾಯ ಇಲಾಖೆ (ಸೇವೆಗಳು-3) ಶಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಕೇಂದ್ರ ಚುನಾವಾಣಾ ಆಯೋಗ 2024ರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು ತಯಾರಿ ನಡೆಸಿದೆ. ಚುನಾವಣೆಯನ್ನು ಪಾರದರ್ಶಕವಾಗಿ, ನಿಯಮಾನುಸಾರ ನಡೆಸಲು ಅಧಿಕಾರಿಗಳಿಗೆ ತರಬೇತಿಯನ್ನು ನೀಡುತ್ತಿದೆ. ಚುನಾವಣಾ ಸಂದರ್ಭದಲ್ಲಿ ಅಧಿಕಾರಿಗಳ ವರ್ಗಾವಣೆಗೆ ನಿಯಮಗಳನ್ನು ಸಹ ರೂಪಿಸಿ ರಾಜ್ಯ ಸರ್ಕಾರಗಳಿಗೆ ಕಳಿಸಿದೆ.
2024ರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗ ಅಧಿಕಾರಿಗಳ, ಸಿಬ್ಬಂದಿಗಳ ವರ್ಗಾವಣೆ ಮಾಡಲು ಚುನಾವಣಾ ಆಯೋಗದ ಅನುಮತಿ ಪಡೆಬೇಕಿದೆ. ಅದರಲ್ಲೂ ಚುನಾವಣಾ ಕಾರ್ಯದಲ್ಲಿ ನೇರವಾಗಿ ತೊಡಗಿರುವ ಅಧಿಕಾರಿ/ ಸಿಬ್ಬಂದಿಗಳನ್ನು ವರ್ಗಾವಣೆ ಮಾಡುವಂತಿಲ್ಲ.
ಒಂದು ಜಿಲ್ಲೆಯಿಂದ ಹೊರಗೆ ವರ್ಗಾವಣೆಗೊಂಡ ಅಧಿಕಾರಿಗಳು, ಸಿಬ್ಬಂದಿ ಚುನಾವಣೆ ಸಂದರ್ಭದಲ್ಲಿ ಅದೇ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ನಿಯೋಜನೆಗೊಳ್ಳದಂತೆ ನೋಡಿಕೊಳ್ಳಬೇಕು ಎಂದು ಚುನಾವಣಾ ಆಯೋಗ ರಾಜ್ಯಗಳಿಗೆ ಅಧಿಕಾರಿಗಳ ವರ್ಗಾವಣೆ ಮಾರ್ಗಸೂಚಿಯನ್ನು ನೀಡಿದೆ.
ಒಂದೇ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಅಕ್ಕಪಕ್ಕದ ಜಿಲ್ಲೆಗಳ ಅಧಿಕಾರಿ/ ಸಿಬ್ಬಂದಿಗಳನ್ನು ಸರ್ಕಾರ ವರ್ಗಾವಣೆ ಮಾಡುತ್ತಿರುವುದು ಆಯೋಗದ ಗಮನಕ್ಕೆ ಬಂದ ಕಾರಣ, ವರ್ಗಾವಣೆಗೆ ಮಾರ್ಗಸೂಚಿಯನ್ನು ರಚನೆ ಮಾಡಲಾಗಿದೆ.
ಅಧಿಕಾರಿ/ ಸಿಬ್ಬಂದಿ ತಮ್ಮ ತವರು ಜಿಲ್ಲೆಯಲ್ಲಿ ನಿಯೋಜನೆಗೊಂಡಿದ್ದರೆ ಅಥವ ಒಂದೇ ಸ್ಥಳದಲ್ಲಿ ಮೂರು ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ್ದರೆ ಆತ ಒಬ್ಬ ವ್ಯಕ್ತಿ ಅಥವ ಒಂದು ಪಕ್ಷದ ಪರವಾಗಿ ಹಸ್ತಕ್ಷೇಪ ಮಾಡದಂತೆ ನೋಡಿಕೊಳ್ಳಲು ಅವರನ್ನು ಲೋಕಸಭೆ ಅಥವ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರ್ಗಾವಣೆ ಮಾಡಲಾಗತ್ತದೆ.
ಆದರೆ ಒಂದೇ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡಬಾರದು ಎಂಬ ನಿಯಮ ಒಂದು ಅಥವ ಎರಡು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ.
ಯಾವುದೇ ಅಧಿಕಾರಿ/ ಸಿಬ್ಬಂದಿ ಜಿಲ್ಲೆಯಿಂದ ಹೊರಗೆ ವರ್ಗಾವಣೆಗೊಂಡಾಗ ಅದೇ ಲೋಕಸಭಾ ಕ್ಷೇತ್ರದ ವ್ಯಾಪ್ತಿಯೊಳಗೆ ನಿಯೋಜನೆಗೊಳ್ಳುವಂತಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಚುನಾವಣಾ ಆಯೋಗ ಮಾರ್ಗಸೂಚಿಯಲ್ಲಿ ರಾಜ್ಯಗಳಿಗೆ ಸ್ಪಷ್ಟವಾದ ನಿರ್ದೇಶನ ನೀಡಿದೆ.












Click it and Unblock the Notifications